ಕಾವಲುಗಾರನಿಂದಲೇ ಬಾಲಮಂದಿರದ ಅನಾಥ ಬಾಲಕಿಯ ಅತ್ಯಾಚಾರ
ರಾಜ್ಯದಲ್ಲಿ ನಡೆದ ಘಟನೆ
ರಾಯಚೂರು, ಜ.31: ನಗರದ ಸರಕಾರಿ ಬಾಲಮಂದಿರದಲ್ಲಿ ಆಶ್ರಯ ಪಡೆದು ಓದುತ್ತಿದ್ದ ಅನಾಥ ಬಾಲಕಿಯ ಮೇಲೆ ಕಾವಲುಗಾರನೇ ಅತ್ಯಾಚಾರ ಎಸಗಿದ್ದಾನೆ ಎನ್ನಲಾದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.
ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಆರೋಪಿ ಕಾವಲುಗಾರ ಸಿದ್ದಯ್ಯ ಇದೀಗ ತಲೆಮರೆಸಿಕೊಂಡಿದ್ದು, ಆತನನ್ನು ಬಂಧಿಸಲು ಪೊಲೀಸಲು ತೀವ್ರ ಶೋಧ ನಡೆಸುತ್ತಿದ್ದಾರೆ.
ಅತ್ಯಾಚಾರ ನಡೆಸಿದ ಘಟನೆಯು ತಿಳಿಯುತ್ತಿದ್ದಂತೆಯೇ ಈ ಬಗ್ಗೆ ಸಲ್ಲಿಕೆಯಾಗಿದ್ದ ದೂರು ಪರಿಶೀಲನೆ ನಡೆಸುವಲ್ಲಿ ವಿಳಂಬ ಧೋರಣೆ ಅನುಸರಿಸಿದ್ದ ಮೇಲ್ವಿಚಾರಕ ಸಯ್ಯದ್ ಪಾಷಾ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಗುರುಪ್ರಸಾದರನ್ನು ಅಮಾನತುಗೊಳಿಸಿ ಜಿಲ್ಲಾಧಿಕಾರಿ ಆರ್.ವೆಂಕಟೇಶ ಕುಮಾರ್ ಆದೇಶಿಸಿದ್ದಾರೆ.
ಎಸೆಸೆಲ್ಸಿ ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿನಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲಿ ಆರೋಪಿ ಕಳೆದ ವರ್ಷದ ನವೆಂಬರ್ನಲ್ಲಿ ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದೆ. ಮೊಬೈಲ್ ಸಂಭಾಷಣೆಯಿಂದ ಸಂಶಯಗೊಂಡಿದ್ದ ಬಾಲಕಿಯ ಸಹೋದರ, ತನ್ನ ಸಹೋದರಿಯ ಮೇಲೆ ಅತ್ಯಾಚಾರ ನಡೆದಿದೆ ಎಂದು ಸ್ಥಳೀಯ ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ದೂರು ಸಲ್ಲಿಸಿದ್ದರು.
ಮಕ್ಕಳ ರಕ್ಷಣಾ ಘಟಕ ಇದಕ್ಕೆ ಸಂಬಂಧಿಸಿದಂತೆ ಯಾವುದೇ ಪರಿಶೀಲನೆ ನಡೆಸಿರಲಿಲ್ಲ. ಆದರೆ, ಜ.30 ರಂದು ಈ ಕುರಿತು ಮಹಿಳಾ ಠಾಣೆಯಲ್ಲಿ ರಕ್ಷಣಾ ಘಟಕದ ಅಧಿಕಾರಿಗಳು ದೂರು ಸಲ್ಲಿಸಿದ್ದರು. ಕೂಡಲೇ ಎಚ್ಚೆತ್ತುಕೊಂಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಿ.ಬಿ.ವೇದಮೂರ್ತಿ ಹಾಗೂ ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ್ ಶುಕ್ರವಾರ ಬಾಲಮಂದಿರಕ್ಕೆ ಭೇಟಿ ನೀಡಿ, ಮಾಹಿತಿ ಸಂಗ್ರಹಿಸಿದ್ದಾರೆ.
ಅತ್ಯಾಚಾರ ನಡೆದಿರುವ ಸಂಶಯ ವ್ಯಕ್ತವಾಗಿದ್ದರಿಂದ ಕೂಡಲೇ ಇಬ್ಬರು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ. ಅಲ್ಲದೆ, ಬಾಲಕಿಯರ ಬಾಲಮಂದಿರದ ಲೋಪದೋಷಗಳ ಬಗ್ಗೆ ಪರಿಶೀಲಿಸಿ ವರದಿ ಸಲ್ಲಿಸಲು ರಾಯಚೂರು ಉಪವಿಭಾಗಾಧಿಕಾರಿ ಸಂತೋಷ ಕಾಮಗೊಂಡಗೆ ಸೂಚನೆ ನೀಡಿದ್ದಾರೆ.