ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ: ಮೈಸೂರಿನಲ್ಲಿ ಬ್ಯಾಂಕ್ ನೌಕರರ ಮುಷ್ಕರ
ಮೈಸೂರು, ಜ.31: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಯುನೈಟೆಡ್ರಂ ಫೋರಂ ಆಫ್ ಬ್ಯಾಂಕ್ ಯೂನಿಯನ್ಸ್ (ಯುಎಫ್ಬಿಯು) ಶುಕ್ರವಾರದಿಂದ 2 ದಿನಗಳ ಕಾಲ ಬ್ಯಾಂಕ್ ನೌಕರರ ಮುಷ್ಕರಕ್ಕೆ ಕರೆ ಕೊಟ್ಟಿದ್ದು, ಮೈಸೂರಿನಲ್ಲಿಯೂ ಬ್ಯಾಂಕ್ ನೌಕರರು ಮುಷ್ಕರದಲ್ಲಿ ಪಾಲ್ಗೊಂಡಿದ್ದಾರೆ.
ಜ.31 ಹಾಗೂ ಫೆ.1ರಂದು ನಡೆಯುವ ಮುಷ್ಕರದಲ್ಲಿ ರಾಷ್ಟ್ರವ್ಯಾಪಿ 10 ಲಕ್ಷಕ್ಕೂ ಅಧಿಕ ಮಂದಿ ನೌಕರರು ಪಾಲ್ಗೊಳ್ಳುವ ಹಿನ್ನೆಲೆಯಲ್ಲಿ ಬ್ಯಾಂಕ್ ಸೇವೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎನ್ನಲಾಗುತ್ತಿದೆ.
ಮೈಸೂರಿನಲ್ಲಿ ಎಂಡಿಬಿಇಎ ಕಾರ್ಯದರ್ಶಿ ಹೆಚ್. ಬಾಲಕೃಷ್ಣ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು, ವೇತನ ಪರಿಷ್ಕರಣೆಯಲ್ಲಿ ಕೇಂದ್ರ ಸರ್ಕಾರವು ವಿಳಂಬ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಇಂದು ಎಸ್.ಬಿ.ಐ ಝೋನಲ್ ಆಫೀಸ್, ಟಿಕೆ ಲೇಔಟ್ ನಿಂದ ಪ್ರತಿಭಟನಾ ಮೆರವಣಿಗೆ ನಡೆಸಿದರು. ನಾಳೆ ಕಾರ್ಪೋರೇಷನ್ ಬ್ಯಾಂಕ್, ರೀಜನಲ್ ಆಫೀಸ್, ಹುಣಸೂರು ರಸ್ತೆ, ಹೋಟೆಲ್ ಸದರನ್ ಸ್ಟಾರ್ ಪಕ್ಕದಲ್ಲಿ ಬೆಳಗ್ಗೆ 10 ಗಂಟೆಗೆ ಮುಷ್ಕರ ಹಮ್ಮಿಕೊಳ್ಳಲಾಗಿದೆ ಎಂದು ಪ್ರತಿಭಟನಾಕಾರರು ತಿಳಿಸಿದರು.