ಆನಂದ್ ಸಿಂಗ್ ರ ಅರಣ್ಯ ಖಾತೆ ವಾಪಸ್ ಪಡೆಯದಿದ್ದರೆ ಉಗ್ರ ಹೋರಾಟ: ವಿ.ಎಸ್.ಉಗ್ರಪ್ಪ
ಬೆಂಗಳೂರು, ಫೆ.14: ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜೈಲಿಗೆ ಹೋಗಿ ಬಂದಿರುವ ಹೊಸಪೇಟೆ ಶಾಸಕ ಆನಂದ್ ಸಿಂಗ್ಗೆ ನೀಡಿರುವ ಅರಣ್ಯ ಇಲಾಖೆಯನ್ನು ವಾಪಸ್ ಪಡೆಯಬೇಕೆಂದು ಕಾಂಗ್ರೆಸ್ ಮುಖಂಡ ವಿ.ಎಸ್.ಉಗ್ರಪ್ಪ ಒತ್ತಾಯಿಸಿದ್ದಾರೆ.
ಶುಕ್ರವಾರ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಆನಂದ್ ಸಿಂಗ್ ವಿರುದ್ದ ಅರಣ್ಯ ಭೂಮಿ ಕಬಳಿಕೆ ಸೇರಿದಂತೆ ಸುಮಾರು 15 ಪ್ರಕರಣಗಳು ದಾಖಲಾಗಿವೆ. ಅಂತವರಿಗೆ ಅರಣ್ಯ ಇಲಾಖೆ ಕೊಡುವುದರ ಉದ್ದೇಶವಾದರು ಏನು ಎಂದು ಪ್ರಶ್ನಿಸಿದರು.
ಆನಂದ್ ಸಿಂಗ್ಗೆ ನೀಡಿರುವ ಅರಣ್ಯ ಖಾತೆಯನ್ನು ಕೂಡಲೇ ವಾಪಸ್ ಪಡೆಯಬೇಕು. ಇಲ್ಲದಿದ್ದರೆ, ರಾಜ್ಯಾದ್ಯಂತ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುತ್ತದೆ ಎಂದು ಅವರು ರಾಜ್ಯ ಸರಕಾರಕ್ಕೆ ಎಚ್ಚರಿಕೆ ನೀಡಿದರು.
ಹೊಸಪೇಟೆ ಸಮೀಪದ ಮರಿಯಮ್ಮನಹಳ್ಳಿ ಸಮೀಪದಲ್ಲಿ ಕಳೆದ ಸೋಮವಾರ ನಡೆದ ಕಾರು ಅಪಘಾತದಲ್ಲಿ ಪಾದಚಾರಿ ಸೇರಿದಂತೆ ಇಬ್ಬರು ಸಾವಿಗೀಡಾದ ಪ್ರಕರಣದಲ್ಲಿ ಪ್ರಭಾವಿ ವ್ಯಕ್ತಿಗಳ ಹೆಸರು ಕೇಳಿ ಬರುತ್ತಿದೆ. ಹೀಗಾಗಿ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕು.
-ವಿ.ಎಸ್.ಉಗ್ರಪ್ಪ, ಕಾಂಗ್ರೆಸ್ ಮುಖಂಡ