ಇದು ತಾರತಮ್ಯ ನೀತಿ ಅಲ್ಲವೇ?: ಕಲ್ಲಡ್ಕ ಶ್ರೀರಾಮ ಶಾಲೆ ವಿರುದ್ಧ ಪ್ರಕರಣ ದಾಖಲಿಸದ ಬಗ್ಗೆ ಸಿದ್ದರಾಮಯ್ಯ ವಾಗ್ದಾಳಿ
ಬೆಂಗಳೂರು, ಫೆ. 19: ‘ಬಾಬರಿ ಮಸೀದಿ ಧ್ವಂಸ ಪ್ರಕರಣದ ಕುರಿತಾಗಿ ನಾಟಕ ಪ್ರದರ್ಶನ ಮಾಡಿದ ಆರೆಸೆಸ್ಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಅವರ ಶ್ರೀರಾಮ ಶಿಕ್ಷಣ ಸಂಸ್ಥೆ ವಿರುದ್ಧ ಏಕೆ ಸರಕಾರ ಕ್ರಮ ಕೈಗೊಂಡಿಲ್ಲ’ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಬುಧವಾರ ವಿಧಾನಸಭೆಯಲ್ಲಿ ‘ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹಾಳಾಗಿರುವುದರಿಂದ ಅಮಾಯಕರು ಬಲಿಯಾಗುತ್ತಿರುವ’ ವಿಷಯದ ಬಗ್ಗೆ ಮಾತನಾಡಿದ ಅವರು, ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಾಟಕ ಪ್ರದರ್ಶಿಸಿದ ಬೀದರ್ನ ಶಾಹೀನ್ ಶಾಲೆಯ ಶಿಕ್ಷಕಿ ಮತ್ತು ವಿದ್ಯಾರ್ಥಿನಿಯ ತಾಯಿಯ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಲಾಗಿದೆ. ಕಲ್ಲಡ್ಕ ಪ್ರಭಾಕರ್ ಭಟ್ ಶಾಲೆಯ ವಿರುದ್ಧ ಮತ್ತು ಆಕ್ಷೇಪಾರ್ಹ ಹೇಳಿಕೆ ನೀಡಿದ ಶಾಸಕ ಸೋಮಶೇಖರ ರೆಡ್ಡಿ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ. ಇದು ರಾಜ್ಯ ಸರಕಾರದ ತಾರತಮ್ಯ ನೀತಿ ಅಲ್ಲವೇ? ರಾಜ್ಯದಲ್ಲಿ ಅವರಿಗೆ ಒಂದು ಮತ್ತೊಬ್ಬರಿಗೆ ಇನ್ನೊಂದು ಕಾನೂನು ಇದೆಯೇ? ಎಂದು ಪ್ರಶ್ನಿಸಿದರು.
‘ಸೋಮಶೇಖರ್ ರೆಡ್ಡಿ, ಕಲ್ಲಡ್ಕ ಪ್ರಭಾಕರ ಭಟ್ ಮೇಲೆ ದಾಖಲಾಗದ ದೇಶದ್ರೋಹದ ಪ್ರಕರಣಗಳು ನಮ್ಮ ಪಕ್ಷದ ನಾಯಕರ ವಿರುದ್ಧ ಮಾತ್ರ ಏಕೆ ದಾಖಲಾಗಿವೆ? ಇದಕ್ಕೆ ಪೊಲೀಸ್ ರಾಜ್ಯವೆನ್ನದೆ ಬೇರೇನು ಕರೆಯಲು ಸಾಧ್ಯ?’
-ಸಿದ್ದರಾಮಯ್ಯ, ವಿಪಕ್ಷ ನಾಯಕ