ವಿದ್ಯುತ್ ಉತ್ಪಾದನೆಗೆ ಕಲ್ಲಿದ್ದಲು ಬರ: ಬೇಸಿಗೆಯಲ್ಲಿ ಹೆಚ್ಚಾಗಲಿದೆ ವಿದ್ಯುತ್ ಅಭಾವ
ರಾಯಚೂರು, ಫೆ.21: ರಾಯಚೂರು ಜಿಲ್ಲೆಯ ಯರಮರಸ್ ಕಲ್ಲಿದ್ದಲು ವಿದ್ಯುತ್ ಉತ್ಪಾದನಾ ಘಟಕಕ್ಕೆ ತೆಲಂಗಾಣದ ಸಿಂಗರೇಣಿ ಕಲ್ಲಿದ್ದಲು ಗಣಿ ಕಂಪೆನಿ ಅವಶ್ಯ ಇರುವಷ್ಟು ಕಲ್ಲಿದ್ದಲನ್ನು ಪೂರೈಕೆ ಮಾಡದ ಹಿನ್ನೆಲೆಯಲ್ಲಿ ಬೇಸಿಗೆಯಲ್ಲಿ ವಿದ್ಯುತ್ ಅಭಾವ ಎದುರಾಗುವ ಸಾಧ್ಯತೆಗಳಿವೆ ಎಂದು ಇಂಧನ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
ಯರಮರಸ್ನ ಕಲ್ಲಿದ್ದಲು ವಿದ್ಯುತ್ ಉತ್ಪಾದನಾ ಘಟಕದಿಂದ 1,600 ಮೆಗಾ ವ್ಯಾಟ್ ವಿದ್ಯುತ್ ಅನ್ನು ಉತ್ಪಾದಿಸಬಹುದು. ಆದರೆ, ಕೇಂದ್ರ ಸರಕಾರ ಹಾಗೂ ರಾಜ್ಯ ಸರಕಾರದ ನಿರ್ಲಕ್ಷದಿಂದಾಗಿ ವೈಟಿಪಿಎಸ್ ಘಟಕಕ್ಕೆ ಕಲ್ಲಿದ್ದಲು ಸಾಗಿಸುವ ರೈಲ್ವೆ ಮಾರ್ಗ ನಿರ್ಮಾಣ ಆಮೆಗತಿಯಲ್ಲಿ ನಡೆದಿದ್ದರಿಂದ ಬೇಸಿಗೆಯಲ್ಲಿ ವಿದ್ಯುತ್ ಅಭಾವ ಎದುರಾಗುವ ಸಾಧ್ಯತೆಗಳಿವೆ. ಇದರ ಜೊತೆಗೆ ಕಲ್ಲಿದ್ದಲು ಖರೀದಿ ಮತ್ತು ಸಾಗಾಣಿಕೆಯಲ್ಲಿ ಭಾರಿ ಅವ್ಯವಹಾರ ನಡೆದಿದೆ ಎನ್ನುವ ಆರೋಪ ಕೇಳಿ ಬಂದಿದೆ.
ವೈಟಿಪಿಎಸ್ ಘಟಕಕ್ಕೆ ಕಲ್ಲಿದ್ದಲು ಪೂರೈಸುವ ಸಿಂಗರೇಣಿ ಕಲ್ಲಿದ್ದಲು ಗಣಿಗೆ ಒಪ್ಪಂದದ ದರ ಮೀರಿ 15 ಕೋಟಿ ರೂಪಾಯಿ ಹೆಚ್ಚುವರಿಯಾಗಿ ಪಾವತಿಸಲಾಗಿದೆ ಎನ್ನುವ ಆರೋಪ ಕೇಳಿ ಬಂದಿದೆ. ಇನ್ನು ಆರ್ಟಿಪಿಎಸ್ನಿಂದ ಕಲ್ಲಿದ್ದಲು ಸಾಗಾಣಿಕೆಗೆ 25 ಕೋಟಿ ಹಣ ಖರ್ಚು ಮಾಡಲಾಗಿದೆ ಎನ್ನಲಾಗಿದೆ.