ಕೊರೋನ: ವಿಶೇಷ ಪ್ಯಾಕೇಜ್ ಘೋಷಿಸಲು ಆರ್.ವಿ.ದೇಶಪಾಂಡೆ ಆಗ್ರಹ
ಬೆಂಗಳೂರು, ಮಾ.21: ರಾಜ್ಯಾದ್ಯಂತ ತೀವ್ರವಾಗಿ ವ್ಯಾಪಿಸುತ್ತಿರುವ ಕೋವಿಡ್-19(ಕೊರೋನ) ವೈರಸ್ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳಿಂದಾಗಿ ಉಂಟಾಗಿರುವ ಆರ್ಥಿಕ ನಷ್ಟ ಭರಿಸಲು ಸರಕಾರ ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂದು ಮಾಜಿ ಸಚಿವ ಆರ್.ವಿ.ದೇಶಪಾಂಡೆ ಆಗ್ರಹಿಸಿದ್ದಾರೆ.
ಪ್ರಧಾನಿ ಮೋದಿ ಹಾಗೂ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ಗೆ ಪತ್ರ ಬರೆದಿರುವ ದೇಶಪಾಂಡೆ, ವಿಶೇಷ ಪ್ಯಾಕೇಜ್ ಘೋಷಣೆ ಮಾಡುವ ಮೂಲಕ ನಷ್ಟಕ್ಕೊಳಗಾದವರಿಗೆ ಸಹಾಯ ಮಾಡಬೇಕು ಎಂದು ಮನವಿ ಮಾಡಿದ್ದಾರೆ.
ದೇಶದ ಹಿತದೃಷ್ಟಿಯಿಂದ ಕೂಡಲೇ ಕೆಲವೊಂದು ಆರ್ಥಿಕ ನೆರವು ನೀಡುವ ನಿರ್ಧಾರಗಳನ್ನು ಕೇಂದ್ರ ಸರಕಾರ ಕೈಗೊಳ್ಳಬೇಕು. ಈಗಾಗಲೇ ದೇಶದ ಹಲವು ಭಾಗಗಳಲ್ಲಿ ನೆರವು ನೀಡಲು ರಾಜ್ಯ ಸರಕಾರಗಳು ಮುಂದಗಿವೆ. ಮಹಾಮಾರಿ ಕೊರೋನ ನಿಯಂತ್ರಣಕ್ಕೆ ಸರಕಾರ ಹಲವಾರು ಕಾರ್ಯಕ್ರಮ ರೂಪಿಸಿರುವುದು ಶ್ಲಾಘನೀಯ ಎಂದು ಹೇಳಿದ್ದಾರೆ.
ದೇಶದಲ್ಲಿ ಕುಸಿಯುತ್ತಿರುವ ಆರ್ಥಿಕ ಪರಿಸ್ಥಿತಿಯನ್ನು ಸಹಜ ಸ್ಥಿತಿಗೆ ತರಲು ಆರ್ಥಿಕ ಟಾಸ್ಕ್ಪೋರ್ಸ್ ರಚನೆ ಮಾಡಿರುವುದು ಸ್ವಾಗತಾರ್ಹ. ಇದು ದೇಶದ ಜನರಲ್ಲಿ ಭರವಸೆ ಹಾಗೂ ಆತ್ಮವಿಶ್ವಾಸ ಮೂಡಿಸುವ ಕೆಲಸ ಮಾಡಿದ್ದಾರೆ. ವಿಶ್ವದಲ್ಲಿಯೇ ಆರ್ಥಿಕ ಬಿಕ್ಕಟ್ಟು ಸೃಷ್ಟಿಯಾಗಿದೆ. ಇದನ್ನು ನಿಯಂತ್ರಣಕ್ಕೆ ಸಮರೋಪಾದಿಯಲ್ಲಿ ಕಾರ್ಯ ನಿರ್ವಹಿಸಬೇಕು ಎಂದು ಅವರು ತಿಳಿಸಿದ್ದಾರೆ.