ಪರೀಕ್ಷೆಗೆ ತೆರಳಿದ ವಿದ್ಯಾರ್ಥಿನಿಯ ಅತ್ಯಾಚಾರ: ಮನನೊಂದು ಸಂತ್ರಸ್ತೆ ಆತ್ಮಹತ್ಯೆ
ರಾಜ್ಯದಲ್ಲಿ ನಡೆದ ಘಟನೆ
ಕಲಬುರಗಿ, ಮಾ.23: ಪಿಯುಸಿ ವಿದ್ಯಾರ್ಥಿನಿಯನ್ನು ಅಪಹರಿಸಿ ಅತ್ಯಾಚಾರವೆಸಗಿದ ಅಮಾನವೀಯ ಘಟನೆ ಸುರಪುರ ತಾಲೂಕಿನ ಕೆಂಬಾವಿ ಹತ್ತಿರದ ಅಮಲಿಹಾಳ ಗ್ರಾಮದಲ್ಲಿ ನಡೆದಿದ್ದು, ಘಟನೆಯಿಂದ ಮನನೊಂದು ವಿದ್ಯಾರ್ಥಿನಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ವರದಿಯಾಗಿದೆ.
ಇಲ್ಲಿನ ಯಾದಗಿರಿಯಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದ ವಿದ್ಯಾರ್ಥಿನಿ ಮಾ.21 ಪರೀಕ್ಷೆ ಬರೆಯಲು ಹೋದ ವೇಳೆ ದುಷ್ಕರ್ಮಿಗಳು ವಿದ್ಯಾರ್ಥಿನಿಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದಾರೆ ಎಂದು ಹೇಳಲಾಗುತ್ತಿದೆ. ಇದರಿಂದ ಮನನೊಂದ ವಿದ್ಯಾರ್ಥಿನಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಳು. ತದನಂತರ ಅಮಲಿಹಾಳ ಗ್ರಾಮದಿಂದ ಕಲಬುರಗಿ ಜಿಲ್ಲಾ ಆಸ್ಪತ್ರೆಗೆ ಕರೆತರುತ್ತಿದ್ದಾಗ ಮಾರ್ಗಮಧ್ಯೆದಲ್ಲಿಯೇ ಕೊನೆಯುಸಿರೆಳೆದಿದ್ದಾಳೆ ಎನ್ನಲಾಗಿದೆ.
ವಿದ್ಯಾರ್ಥಿನಿ ಕಾಣೆಯಾದ ಬಗ್ಗೆ ಆಕೆಯ ಪಾಲಕರು ಎರಡು ದಿನಗಳ ಹಿಂದೆ ಯಾದಗಿರಿ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾದಗಿರಿಯ ರಾಜಣ್ಣ ಸಾವಣ್ಣ ಮತ್ತು ಎಂ.ಹೊಸಳ್ಳಿಯ ದೇಂದ್ರಪ್ಪ ಹಣಮಂತ ಎಂಬುವವರನ್ನು ಸೆರೆ ಹಿಡಿಯಲಾಗಿದ್ದು, ಪ್ರಮುಖ ಆರೋಪಿಗಳಾದ ಮಹೇಶ ರಾಜಣ್ಣ, ಅನಿಲಕುಮಾರ್ ದೇಂದ್ರಪ್ಪಎಂಬುವವರ ಬಂಧನಕ್ಕೆ ತನಿಖೆ ಮುಂದುವರೆಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.