ಗೌರಿಬಿದನೂರಿನ ಮಹಿಳೆಯ ಸಾವಿಗೆ ಕೊರೋನ ಕಾರಣ
ರಾಜ್ಯದಲ್ಲಿ ಸಾವಿನ ಸಂಖ್ಯೆ ಎರಡಕ್ಕೆ ಏರಿಕೆ
ಸಾಂದರ್ಭಿಕ ಚಿತ್ರ
ಚಿಕ್ಕಬಳ್ಳಾಪುರ, ಮಾ.26: ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಈವರೆಗೂ ಕೋವಿಡ್ 19 ನಾಲ್ಕು ಪ್ರಕರಣಗಳು ದೃಢಪಟ್ಟಿದ್ದು, ಈ ಪೈಕಿ ಚಿಕಿತ್ಸೆ ಪಡೆಯುತ್ತಿದ್ದ 70 ವರ್ಷದ ಮಹಿಳೆಯೊಬ್ಬರು ನಿನ್ನೆ ಬೌರಿಂಗ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿ ಆರ್.ಲತಾ ಅವರು ತಿಳಿಸಿದ್ದಾರೆ.
ಗುರುವಾರ ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ಗೌರಿಬಿದನೂರು ತಾಲೂಕಿನಲ್ಲಿ ಒಟ್ಟು 4 ಕೊರೊನಾ ವೈರಸ್ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, ಈ ಪೈಕಿ 70 ವರ್ಷದ ಮಹಿಳೆ ಬೆಂಗಳೂರಿನ ಬೋರಿಂಗ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಪ್ರಸ್ತುತ ಜಿಲ್ಲೆಯಾದ್ಯಂತ ಲಾಕ್ಡೌನ್ ಜಾರಿಯಲ್ಲಿದೆ.
ಮೂರನೇ ಸೋಂಕಿತರ ಕುಟುಂಬ ಸದಸ್ಯರಲ್ಲಿ ಅತೀ ಸಮೀಪ ಸಂಪರ್ಕದಲ್ಲಿದ್ದ ಗಂಡ ಮತ್ತು ಮಗನ ಗಂಟಲು ದ್ರವ ಮತ್ತು ರಕ್ತವನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಈ ಇಬ್ಬರಿಗೂ ಸೋಂಕು ಇಲ್ಲ ಎಂದು ದೃಢಪಟ್ಟಿದೆ. ಸೋಂಕು ದೃಢಪಟ್ಟ ಉಳಿದ ಮೂವರಲ್ಲಿ ಇಬ್ಬರು ಬೆಂಗಳೂರಿನ ರಾಜೀವ್ ಗಾಂಧಿ ಆಸ್ಪತ್ರೆಯಲ್ಲಿ ಮತ್ತು ಒಬ್ಬರು ಚಿಕ್ಕಬಳ್ಳಾಪುರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಗುಣಮುಖರಾಗುತ್ತಿದ್ದಾರೆ. ಇವರು ಸಂಪೂರ್ಣ ಚೇತರಿಸಿಕೊಳ್ಳುವ ಭರವಸೆ ಇದೆ ಎಂದು ತಿಳಿಸಿದರು.
ಹೋಮ್ ಕ್ವಾರಂಟೈನ್ನಲ್ಲಿರುವ ವ್ಯಕ್ತಿಯ ಕುಟುಂಬ ಒಂದು ವೇಳೆ ಬಾಡಿಗೆ ಮನೆಯಲ್ಲಿದ್ದು, ಒಂದು ವೇಳೆ ಮನೆಯ ಮಾಲಕರು ಅವರನ್ನು ಮನೆ ಖಾಲಿ ಮಾಡುವಂತೆ ಒತ್ತಡ ಹೇರಿ ಕಿರುಕುಳ ನೀಡುತ್ತಿದ್ದರೆ ಮಾಲಕರ ವಿರುದ್ಧ ಕಠಿಣ ಕ್ರಮವನ್ನು ಜಿಲ್ಲಾಡಳಿತ ಕೈಗೊಳ್ಳಲಿದೆ. ಇದು ಚಿಕಿತ್ಸೆ ನೀಡುತ್ತಿರುವ ವೈದ್ಯರು, ಆಶಾ ಕಾರ್ಯಕರ್ತರು, ಶುಶ್ರೂಷಕಿಯರು ಹಾಗೂ ಕೋವಿಡ್ 19 ರ ನಿಯಂತ್ರಣದಲ್ಲಿ ಕಾರ್ಯನಿರತರೆಲ್ಲರಿಗೂ ಅನ್ವಯವಾಗುತ್ತದೆ ಎಂದು ತಿಳಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಮಾತನಾಡಿ, ಜಿಲ್ಲೆಯಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಜನರು ಲಾಕ್ಡೌನ್ಗೆ ಸಹಕರಿಸುತ್ತಿದ್ದಾರೆ. ಮತ್ತಷ್ಟು ಸಹಕಾರದ ಅಗತ್ಯ ಪೊಲೀಸರಿಗೆ ಬೇಕಾಗಿದೆ. ಎಪಿಎಂಸಿ ವರ್ತಕರು, ತರಕಾರಿ ಮಾರಾಟಗಾರರು ಮತ್ತಿತರರು ಅಗತ್ಯ ಸೇವೆಗಳಲ್ಲಿ ತೊಡಗಿದ್ದು ಅವರಿಗೆ ಓಡಾಡಲು ಅವಕಾಶ ನೀಡಿ ಪಾಸ್ ನೀಡಲಾಗುವುದು. ಹೋಮ್ ಕ್ವಾರಂಟೈನ್ನಡಿ ಇರುವವರು ಹೊರಗೆ ಓಡಾಡುವಂತಿಲ್ಲ. ಒಂದು ವೇಳೆ ಅನುಮತಿ ಇಲ್ಲದೆ ಓಡಾಡಿದರೆ ಅಂತವರ ಮೇಲೆ ಪ್ರಕರಣ ದಾಖಲಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ದಿನಸಿ, ಹಾಲು, ಔಷಧಿ, ತರಕಾರಿ ಸೇರಿದಂತೆ ಅಗತ್ಯ ವಸ್ತುಗಳು ಲಭ್ಯವಿದ್ದು, ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗುವುದಿಲ್ಲ. ಆದರೆ, ಸಾಮಾಜಿಕ ಅಂತರವನ್ನು ಕಾಪಾಡುವುದು ಅತ್ಯಗತ್ಯ ಎಂದು ತಿಳಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಫೌಜಿಯಾ ತರನ್ನುಮ್, ಅಪರ ಜಿಲ್ಲಾಧಿಕಾರಿ ಆರತಿ ಆನಂದ್ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಯೋಗೇಶ್ಗೌಡ ಅವರು ಉಪಸ್ಥಿತರಿದ್ದರು.