21 ಲಕ್ಷ ಕಾರ್ಮಿಕರಿಗೆ ಸಾವಿರ ರೂ. ಸಹಾಯಧನ ಬಿಡುಗಡೆ: ಸಚಿವ ಶಿವರಾಂ ಹೆಬ್ಬಾರ್
ಕೊರೋನ ವೈರಸ್
ಬೆಂಗಳೂರು, ಮಾ.27: ರಾಜ್ಯದ ಕಾರ್ಮಿಕ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸುಮಾರು 21 ಲಕ್ಷ ನೋಂದಾಯಿತ ಕಟ್ಟಡ ಹಾಗೂ ಇತರೆ ಕಾರ್ಮಿಕರಿಗೆ 1 ಸಾವಿರ ರೂ. ನಂತೆ ಸಹಾಯಧನವನ್ನು ಈಗಾಗಲೇ ಬಿಡುಗಡೆ ಮಾಡಲಾಗಿದೆ ಎಂದು ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್ ತಿಳಿಸಿದ್ದಾರೆ.
ಕೊರೋನ ಸೋಂಕು ಹರಡುವ ಭೀತಿಯಿಂದ ದೇಶದಾದ್ಯಂತ ಲಾಕ್ಡೌನ್ ಮಾಡಿರುವ ಹಿನ್ನೆಲೆಯಲ್ಲಿ ಕೆಲಸಕ್ಕೆ ಹಾಜರಾಗಲು ಸಾಧ್ಯವಾಗದ ಖಾಸಗಿ ನೌಕರರು, ಗುತ್ತಿಗೆ ಕೆಲಸಗಾರರು ಮತ್ತು ಕಾರ್ಮಿಕರನ್ನು ಕೆಲಸದಿಂದ ವಜಾ ಮಾಡದೇ, ಸಂಬಳ ಸಹಿತ ರಜೆ ನೀಡಬೇಕು ಎಂದು ಎಲ್ಲ ಕಾರ್ಮಿಕ ಸಂಘಟನೆಗಳು ಮತ್ತು ಉದ್ಯಮಗಳ ಮಾಲಕರಿಗೆ ಮನವಿ ಮಾಡಿದ್ದ ಹಿನ್ನೆಲೆಯಲ್ಲಿ ಉದ್ಯಮಿಗಳ ಜತೆ ಚರ್ಚೆ ನಡೆಸಿದ ಬಳಿಕ ಅವರು ಮಾತನಾಡಿದರು. ಕಾರ್ಮಿಕರಿಗೆ ಯಾವುದೇ ರೀತಿಯ ತೊಂದರೆಯಾಗಬಾರದು. ಕಾರ್ಮಿಕರ ಸುರಕ್ಷತೆ ಮತ್ತು ಹಕ್ಕುಗಳಿಗೆ ತೊಂದರೆಯಾದಲ್ಲಿ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.
ರಾಜ್ಯದಲ್ಲಿ ಯಾವುದೇ ಕಾರ್ಮಿಕ ಅಥವಾ ಉದ್ಯೋಗಿ ಕೊರೋನ ಸೋಂಕಿಗೆ ಒಳಗಾದರೆ, ಆತನಿಗೆ 28 ದಿನಗಳ ವೇತನ ಸಹಿತ ರಜೆ ನೀಡಬೇಕು ಎಂದು ರಾಜ್ಯ ಕಾರ್ಮಿಕ ಇಲಾಖೆಯು ಈಗಾಗಲೇ ಸುತ್ತೋಲೆ ಹೊರಡಿಸಿದೆ.