ಕೊಡಗು ಪ್ರವಾಹ ಸಂತ್ರಸ್ತರಿಗೆ ಕೊನೆಗೂ ವಸತಿ ಭಾಗ್ಯ: ಮೇ 29ರಂದು 463 ಕುಟುಂಬಗಳಿಗೆ ಮನೆ ಹಸ್ತಾಂತರ
ಮಡಿಕೇರಿ, ಮೇ.15: ಕಳೆದ ಎರಡು ವರ್ಷಗಳ ಹಿಂದೆ ಕೊಡಗು ಜಿಲ್ಲೆಯಲ್ಲಿ ಸಂಭವಿಸಿದ ಪ್ರಾಕೃತಿಕ ವಿಕೋಪದಲ್ಲಿ ನೆಲೆ ಕಳೆದುಕೊಂಡು ಸಂತ್ರಸ್ತರಾದ ಕುಟುಂಬಗಳಿಗೆ ಕೊನೆಗೂ ಸೂರಿನ ಭಾಗ್ಯ ಲಭಿಸುವ ಲಕ್ಷಣ ಗೋಚರಿಸಿದೆ. ಈ ತಿಂಗಳ (ಮೇ) ಅಂತ್ಯದಲ್ಲಿ ಸುಮಾರು 463 ಕುಟುಂಬಗಳಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮನೆಗಳನ್ನು ವಿತರಿಸಲಿರುವುದಾಗಿ ಜಿಲ್ಲಾಡಳಿತದ ಮೂಲಗಳು ತಿಳಿಸಿವೆ.
ಈ ಸಂಬಂಧವಾಗಿ ಮೇ 22ರಂದು ರಾಜ್ಯದ ವಸತಿ ಸಚಿವರೂ ಆಗಿರುವ ಕೊಡಗು ಜಿಲ್ಲೆ ಉಸ್ತುವಾರಿ ಸಚಿವರು ಮಡಿಕೇರಿಗೆ ಆಗಮಿಸಿ ಅಧಿಕಾರಿಗಳ ಸಭೆ ನಡೆಸಲಿದ್ದು, ಮೇ 29ರಂದು ಮುಖ್ಯಮಂತ್ರಿಗಳು ಸಂತ್ರಸ್ತರಿಗೆ ಮನೆಗಳನ್ನು ಹಸ್ತಾಂತರಿಸಲಿರುವುದಾಗಿ ಮುನ್ಸೂಚನೆ ನೀಡಿದ್ದಾರೆ.
ಕೊಡಗು ಜಿಲ್ಲೆಯಲ್ಲಿ 2018ರಲ್ಲಿ ಸುರಿದ ಭಾರೀ ಮಳೆ, ಪ್ರವಾಹ ಹಾಗೂ ಗುಡ್ಡ ಕುಸಿತದಿಂದ ಸುಮಾರು 800ಕ್ಕೂ ಅಧಿಕ ಕುಟುಂಬಗಳು ತಮ್ಮ ನೆಲೆಯನ್ನು ಕಳೆದುಕೊಂಡಿದ್ದವು. ಈ ಕುಟುಂಬಗಳ ಪೈಕಿ ಸಂಪೂರ್ಣವಾಗಿ ಮನೆ ಹಾಗೂ ಜಮೀನು ಕಳೆದುಕೊಂಡವರಿಗೆ ಕರ್ಣಂಗೇರಿ, ಮದೆ, ಗಾಳಿಬೀಡು, ಕೆ.ನಿಡುಗಣೆ ಹಾಗೂ ಮಾದಾಪುರ ಸಮೀಪದ ಜಂಬೂರು ಗ್ರಾಮಗಳಲ್ಲಿ ಮನೆ ನಿರ್ಮಿಸಿಕೊಡುವುದಾಗಿ ಸರಕಾರ ಭರವಸೆ ನೀಡಿತ್ತು. ಕೇವಲ 8 ತಿಂಗಳುಗಳಲ್ಲಿ ಎಲ್ಲಾ ಸಂತ್ರಸ್ತರಿಗೆ ಮನೆ ನಿರ್ಮಿಸಿಕೊಡುವುದಾಗಿ ಸರಕಾರ ಹೇಳಿತ್ತಾದರೂ, ಕಾಮಗಾರಿಯ ಜವಾಬ್ದಾರಿ ವಹಿಸಿಕೊಂಡಿದ್ದ ರಾಜೀವ್ ಗಾಂಧಿ ವಸತಿ ನಿಗಮದ ನಿಧಾನ ಗತಿಯ ಕಾಮಗಾರಿಯಿಂದಾಗಿ ಕರ್ಣಂಗೇರಿ ಗ್ರಾಮದಲ್ಲಿ ಸುಮಾರು 35 ಕುಟುಂಬಗಳಿಗಷ್ಟೇ ಕಳೆದ ವರ್ಷ ಮನೆಗಳನ್ನು ಹಸ್ತಾಂತರಿಸಲು ಸಾಧ್ಯವಾಗಿತ್ತು. ಉಳಿದವರು ಮನೆಗಾಗಿ ಚಾತಕ ಪಕ್ಷಿಯಂತೆ ಕಾಯುತ್ತಿದ್ದರು.
ಮನೆ ನಿರ್ಮಿಸಿಕೊಡುವವರೆಗೆ ಬಾಡಿಗೆ ಮನೆಗಳಲ್ಲಿ ವಾಸಿಸಲು ಅಗತ್ಯವಿರುವ ಬಾಡಿಗೆಯನ್ನು ನೀಡುವುದಾಗಿ ಘೋಷಿಸಿದ್ದ ಸರಕಾರ ಆ ನಂತರದಲ್ಲಿ ಅದನ್ನೂ ಕೈಬಿಟ್ಟಿತ್ತು. ಇದರಿಂದಾಗಿ ಸಂತ್ರಸ್ತರ ಜೀವನ ಸಂಕಷ್ಟಕ್ಕೆ ಸಿಲುಕಿತ್ತು. ಇದೀಗ ಮದೆ ಹಾಗೂ ಜಂಬೂರು ಗ್ರಾಮಗಳಲ್ಲಿ ಸುಮಾರು 463 ಕುಟುಂಬಗಳಿಗೆ ಮನೆಗಳನ್ನು ವಿತರಿಸಲು ಜಿಲ್ಲಾಡಳಿತ ಸಿದ್ಧತೆ ನಡೆಸಿದ್ದು, ಮೇ 29ರಂದು ಮುಖ್ಯಮಂತ್ರಿಗಳು ಸಂತ್ರಸ್ತರಿಗೆ ಮನೆಗಳ ಕೀ ಹಸ್ತಾಂತರಿಸಲಿದ್ದಾರೆ.
ಜೂನ್ ಮೊದಲ ವಾರದಲ್ಲಿ ಕೊಡಗು ಜಿಲ್ಲೆಗೆ ಮುಂಗಾರು ಕಾಲಿಡುವ ಲಕ್ಷಣಗಳು ಗೋಚರಿಸುತ್ತಿದ್ದು, ಆ ಮೊದಲೇ ಮನೆ ದೊರಕಿದಲ್ಲಿ ಸಂತ್ರಸ್ತರ ಮೊಗದಲ್ಲಿ ಒಂದಿಷ್ಟು ಮಂದಹಾಸ ಮೂಡಬಬಹುದೆನ್ನುವ ನಿರೀಕ್ಷೆಯೂ ಇದೆ.
ರಾಜ್ಯ ಸರ್ಕಾರವು ಎರಡು ಬೆಡ್ರೂಂಗಳಿರುವ ಪ್ರತಿ ಮನೆಗೆ 9.85 ಲಕ್ಷ ರೂ. ವೆಚ್ಚ ಮಾಡಿದೆ. ಪ್ರಸಕ್ತ ಎರಡು ಮಲಗುವ ಕೋಣೆಯುಳ್ಳ ಮನೆ ನಿರ್ಮಿಸಲಾಗಿದ್ದು ಅಗತ್ಯವುಳ್ಳವರು ಹೆಚ್ಚುವರಿ ಕೊಠಡಿ ನಿರ್ಮಿಸಿಕೊಳ್ಳಲು ಅವಕಾಶವಿದೆ.
ಮದೆ ಗ್ರಾಮದಲ್ಲಿ 80, ಜಂಬೂರು ಗ್ರಾಮದಲ್ಲಿ 383 ಮನೆಗಳ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಉಳಿದ ಮನೆಗಳ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ. ಆದರೆ ಲಾಕ್ಡೌನ್ನಿಂದಾಗಿ ಮನೆಗಳ ಕಾಮಗಾರಿ ಮತ್ತಷ್ಟು ವಿಳಂಬವಾಗಿದ್ದು, ಇದೀಗ ಕೊರೋನಾ ಹಿನ್ನೆಲೆಯಲ್ಲಿ ಹೊರ ರಾಜ್ಯಗಳಿಂದ ಆಗಮಿಸಿದ್ದ ಕಾರ್ಮಿಕರು ಕೂಡಾ ತಮ್ಮ ತವರು ಕಡೆಗೆ ಮುಖ ಮಾಡಿರುವುದರಿಂದ ಉಳಿದಿರುವ ಮನೆಗಳ ನಿರ್ಮಾಣ ಮತ್ತಷ್ಟು ವಿಳಂಬವಾಗುವ ಲಕ್ಷಣಗಳೂ ಗೋಚರಿಸುತ್ತಿದೆ.
ಲಾಕ್ಡೌನ್ನ ಹಾಲಿ ನಿರ್ಬಂಧಗಳ ಪ್ರಕಾರ ಮೇ 17ರ ತನಕ ಯಾವುದೇ ವೇದಿಕೆ ಕಾರ್ಯಕ್ರಮ ನಡೆಸುವಂತಿಲ್ಲ. ಅದಾದ ಮೇಲೆ ಕೇಂದ್ರ ಸರ್ಕಾರ ಹೊಸ ಮಾರ್ಗಸೂಚಿ ಪ್ರಕಟಿಸಲಿದ್ದು, ಆ ಸಂದರ್ಭದ ಮಾರ್ಗ ಸೂಚಿಯನ್ವಯ ಮನೆಗಳ ಹಸ್ತಾಂತರ ಕಾರ್ಯಕ್ರಮ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ. ಈ ಬಗ್ಗೆ ಮೇ 22ರಂದು ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭೆಯಲ್ಲಿ ಅಂತಿಮ ನಿರ್ಧಾರ ಹೊರಬೀಳಲಿದೆ ಎಂದೂ ಅವರು ಹೇಳಿದ್ದಾರೆ.