ಸರಕಾರಿ ಅಧಿಕಾರಿ, ಸಿಬ್ಬಂದಿಗಳಿಗೆ ಮೇ 19ರಿಂದ ಕರ್ತವ್ಯಕ್ಕೆ ಹಾಜರಾಗಲು ಕರೆ
ಸಾಂದರ್ಭಿಕ ಚಿತ್ರ
ಬೆಂಗಳೂರು, ಮೇ 18: ರಾಜ್ಯದಲ್ಲಿ ಕೊರೋನ ವೈರಸ್ ಸಾಂಕ್ರಾಮಿಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ 2020 ಮೇ 2ರ ಸರಕಾರಿ ಸುತ್ತೋಲೆ ಹಾಗೂ 2020 ಎ.20ರಂದು ಪ್ರಸ್ತಾಪಿಸಿರುವ ಅತ್ಯಗತ್ಯ ಸೇವೆಗಳನ್ನು ಒದಗಿಸುತ್ತಿರುವ ಇಲಾಖೆಗಳಲ್ಲಿನ ಸರಕಾರಿ ಕಚೇರಿಗಳಲ್ಲಿ ಶೇ.100ರಷ್ಟು ಗ್ರೂಪ್ ಎ, ಬಿ, ಸಿ ಮತ್ತು ಡಿ ವೃಂದದ ಅಧಿಕಾರಿ/ಸಿಬ್ಬಂದಿಗಳು ಕರ್ತವ್ಯಕ್ಕೆ ಹಾಜರಾಗಬೇಕೆಂದು ಸರಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ್ ಭಾಸ್ಕರ್ ಸುತ್ತೋಲೆ ಹೊರಡಿಸಿದ್ದಾರೆ.
ಉಳಿದ ಇಲಾಖೆಗಳಲ್ಲಿ ಗ್ರೂಪ್ ಎ ಮತ್ತು ಬಿ ವೃಂದದ ಎಲ್ಲ ಅಧಿಕಾರಿಗಳು ಮತ್ತು ಗ್ರೂಪ್ ಸಿ ಮತ್ತು ಡಿ ವೃಂದದ ಶೇ.33ರಷ್ಟು ಸಿಬ್ಬಂದಿಗಳು ಕರ್ತವ್ಯಕ್ಕೆ ಹಾಜರಾಗತಕ್ಕದ್ದು ಎಂದು ಸೂಚಿಸಲಾಗಿದೆ.
ಕೇಂದ್ರ ಸರಕಾರದ ಆದೇಶದ ಅನ್ವಯ 2020 ಮೇ 17ರ ಮಾರ್ಗಸೂಚಿಗಳನ್ವಯ ಮೇ 18ರಿಂದ ಅನ್ವಯಿಸುವಂತೆ ಕರ್ನಾಟಕ ರಾಜ್ಯದಲ್ಲಿ ಲಾಕ್ಡೌನ್ ಅನ್ನು ಸಡಿಲಿಸಲು ನಿರ್ಣಯಿಸಲಾಗಿದೆ.
ಹಾಗೆಯೇ ಮೇ 19ರಿಂದ ಎಲ್ಲ ಸರಕಾರಿ, ಅರೆ ಸರಕಾರಿ, ಸ್ವಾಯತ್ತ ಸಂಸ್ಥೆ, ಮಂಡಳಿ ಕಚೇರಿಗಳಲ್ಲಿ ಶೇ.100ರಷ್ಟು ಗ್ರೂಪ್ ಎ, ಬಿ, ಸಿ ಮತ್ತು ಡಿ ವೃಂದದ ಅಧಿಕಾರಿ/ಸಿಬ್ಬಂದಿಗಳು ಕರ್ತವ್ಯಕ್ಕೆ ಹಾಜರಾಗತಕ್ಕದ್ದು ಎಂದು ಸುತ್ತೋಲೆ ಹೊರಡಿಸಲಾಗಿದೆ.