ಬಳ್ಳಾರಿಯಲ್ಲಿ ಕೊರೋನ ಸೋಂಕಿಗೆ ಮತ್ತಿಬ್ಬರು ಬಲಿ: ಸಾವಿನ ಸಂಖ್ಯೆ 7ಕ್ಕೆ ಏರಿಕೆ
ಬಳ್ಳಾರಿ, ಜೂ.24: ಬಳ್ಳಾರಿ ಜಿಲ್ಲೆಯಲ್ಲಿ ದಿನೇ ದಿನೇ ಕೊರೋನ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಸೋಂಕಿಗೆ ಇಂದು ಮತ್ತಿಬ್ಬರು ಬಲಿಯಾಗಿದ್ದು, ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 7ಕ್ಕೆ ಏರಿಕೆಯಾಗಿದೆ.
ನೆರೆಯ ರಾಜ್ಯ ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ರಾಯದುರ್ಗದ ನಿವಾಸಿ 28 ವರ್ಷದ ಯುವಕ ಹಾಗೂ ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ವಡ್ಡು ಗ್ರಾಮದ ನಿವಾಸಿ 59 ವರ್ಷದ ವ್ಯಕ್ತಿ ಸಾವನ್ನಪ್ಪಿದ್ದಾರೆಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ತಿಳಿಸಿದ್ದಾರೆ.
ಜೂ.18ರಂದು ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಮೃತ ಯುವಕ ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ. ಯುವಕ ಸಾವಿನ ಬಳಿಕ ಕೊರೋನ ಪರೀಕ್ಷೆ ಮಾಡಲಾಗಿದ್ದು, ಈಗ ಕೊರೋನ ಪರೀಕ್ಷಾ ವರದಿ ಪಾಸಿಟಿವ್ ಎಂದು ಬಂದಿದೆ.
59 ವರ್ಷದ ವ್ಯಕ್ತಿ ಕೂಡ ತೀವ್ರ ಉಸಿರಾಟದ ತೊಂದರೆಯಿಂದ ಸಾವನ್ನಪ್ಪಿದ್ದಾರೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಇವರನ್ನು ವಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಕೊರೋನ ಪರೀಕ್ಷೆ ನಡೆಸಿದಾಗ ಇವರಲ್ಲಿ ಸೋಂಕು ಇರುವುದು ದೃಢಪಟ್ಟಿದ್ದು, ಅವರನ್ನು ಜಿಲ್ಲಾ ಕೊರೋನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ.
ಕೊರೋನ ಮಹಾಮಾರಿಗೆ ಜೂ.23ರಂದು ಇಬ್ಬರು ಬಲಿಯಾಗಿದ್ದರು. ಇಂದು ಮತ್ತೆ ಇಬ್ಬರು ಸಾವನ್ನಪ್ಪಿದ್ದು, ಜಿಲ್ಲೆಯಲ್ಲಿ ಮತ್ತಷ್ಟು ಆತಂಕ ಶುರುವಾಗಿದೆ.