ಜೂ.27 ರಂದು ಎಸೆಸೆಲ್ಸಿ ಗಣಿತ ಪರೀಕ್ಷೆ
ಫೈಲ್ ಫೋಟೋ
ಬೆಂಗಳೂರು, ಜೂ.26: ಎಸೆಸೆಲ್ಸಿ ಗಣಿತ ವಿಷಯದ ಪರೀಕ್ಷೆಯು ಇಂದು(ಜೂ.27) ನಡೆಯಲಿದ್ದು, ಕೋವಿಡ್-19 ಮಾರ್ಗಸೂಚಿ ಅನ್ವಯ ಎಂದಿನಂತೆ ಎಲ್ಲ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ.
ಕಳೆದ ಗುರುವಾರ(ಜೂ.25)ರಂದು ಇಂಗ್ಲಿಷ್ ಪರೀಕ್ಷೆ ನಡೆದಿದ್ದು, ಶೇ.98.3 ವಿದ್ಯಾರ್ಥಿಗಳು ಹಾಜರಾಗಿದ್ದರು. ಇದು ಶಿಕ್ಷಣ ಇಲಾಖೆ, ಆರೋಗ್ಯ, ಪೊಲೀಸ್ ಇಲಾಖೆ ಸೇರಿದಂತೆ ವಿವಿಧ ಸ್ವಯಂ ಸೇವಕರ ಕಾರ್ಯಕ್ಕೆ ಶ್ಲಾಘನೆ ವ್ಯಕ್ತವಾಗಿದೆ. ಅದೇ ಮಾದರಿಯಲ್ಲಿಯೇ ಗಣಿತ ವಿಷಯದ ಪರೀಕ್ಷೆಗೆ ಅಗತ್ಯ ತಯಾರಿ ಮಾಡಿಕೊಳ್ಳಲಾಗಿದೆ.
ಈಗಾಗಲೇ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಪರೀಕ್ಷಾ ಕೇಂದ್ರಗಳಿಗೆ ತಲುಪಿಸುವ ಸಲುವಾಗಿ 3,212 ಬಸ್ ಹಾಗೂ ಇತರೆ ವಾಹನಗಳನ್ನು ಒಪ್ಪಂದದ ಮೇರೆಗೆ ಪಡೆದುಕೊಳ್ಳಲಾಗಿದೆ. ಹಾಗೂ ಕೆಎಸ್ಸಾರ್ಟಿಸಿ, ಬಿಎಂಟಿಸಿ ಸೇರಿದಂತೆ ಸಾರಿಗೆ ಬಸ್ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಲಾಗಿದೆ. ಆ ಮೂಲಕ ವಿದ್ಯಾರ್ಥಿಗಳು ನಿಗದಿತ ವೇಳೆಗಿಂತ ಒಂದು ಗಂಟೆ ಮುಂಚಿತವಾಗಿ ತಲುಪುವ ವ್ಯವಸ್ಥೆ ಕಲ್ಪಿಸಲಾಗಿದೆ.
ಪ್ರತಿ ವಿದ್ಯಾರ್ಥಿಗೂ ಎರಡು ಮಾಸ್ಕ್ ಗಳನ್ನು ನೀಡಲಾಗುತ್ತದೆ. ಅದನ್ನು ಪರೀಕ್ಷಾ ಕೇಂದ್ರದಲ್ಲಿ ಯಾವಾಗಲೂ ಧರಿಸಿರಬೇಕು. ಪರೀಕ್ಷಾ ಕೇಂದ್ರದ ಸುತ್ತಮುತ್ತ ಉಗುಳಬಾರದು ಹಾಗೂ ತಮ್ಮ ಕೈಗಳನ್ನು ಅನಗತ್ಯವಾಗಿ ಎಲ್ಲೆಂದರಲ್ಲಿ ಮುಟ್ಟದಂತೆ ಎಚ್ಚರಿಕೆ ವಹಿಸುವಂತೆ ಸೂಚಿಲಾಗಿದೆ.
-ಗಣಿತ ವಿಷಯದ ಪರೀಕ್ಷೆಯ ವೇಳೆ ಬೆಳಗ್ಗೆ 10-30ರಿಂದ 1-45ರವರೆಗೆ
-ವಿದ್ಯಾರ್ಥಿಗಳು ನಿಗದಿತ ವೇಳೆಗಿಂತ ಒಂದು ಗಂಟೆ ಮೊದಲೇ ಪರೀಕ್ಷಾ ಕೇಂದ್ರಗಳಿಗೆ ಹಾಜರಾಗಬೇಕು.
-ವಿದ್ಯಾರ್ಥಿಗಳು ಹಾಗೂ ಪೋಷಕರು ಪರೀಕ್ಷಾ ಕೇಂದ್ರದ ಸುತ್ತಾಮುತ್ತ ಸುರಕ್ಷಿತ ಅಂತರವನ್ನು ಕಾಯ್ದುಕೊಳ್ಳಬೇಕು.