ರಾಜ್ಯದ ‘ಕೋವಿಡ್ ನಿರ್ವಹಣೆ’ ಬಗ್ಗೆ ಪ್ರಧಾನಿ ಕಚೇರಿಯಿಂದ ಮೇಲುಸ್ತುವಾರಿ: ಎಸ್.ಟಿ.ಸೋಮಶೇಖರ್
ಬೀದರ್, ಜೂ.27: ರಾಜ್ಯದಲ್ಲಿ ಕೋವಿಡ್-19 ನಿಯಂತ್ರಣ ಮಾಡುವ ಬಗ್ಗೆ ಪ್ರಧಾನಿ ಕಚೇರಿಯಿಂದಲೂ ಮೇಲುಸ್ತುವಾರಿಯನ್ನು ಮಾಡಲಾಗುತ್ತಿದೆ. ಇದರ ಜೊತೆಗೆ ಜನತೆ ಸರಕಾರದ ಮಾರ್ಗಸೂಚಿಗಳನ್ನು ಪಾಲಿಸಬೇಕಾಗುತ್ತದೆ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದ್ದಾರೆ.
ಶನಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೋನ ವಿರುದ್ಧದ ಹೋರಾಟದಲ್ಲಿ ರಾಜ್ಯ ಸರಕಾರ 24/7 ಮಾದರಿಯಲ್ಲಿ ಕಾರ್ಯನಿರ್ವಹಣೆ ಮಾಡುತ್ತಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಎಲ್ಲ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಧಿಕಾರಿಗಳ ಜೊತೆ ನಿರಂತರವಾಗಿ ಸಂಪರ್ಕದಲ್ಲಿದ್ದು, ಕಾಲಕಾಲಕ್ಕೆ ಅಗತ್ಯ ಮಾಹಿತಿಯನ್ನು ಪಡೆದು ಸೂಕ್ತ ಮಾರ್ಗದರ್ಶನ ನೀಡುತ್ತಿದ್ದಾರೆ ಎಂದರು.
ಶಾಸಕರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಸ್ಥಳೀಯ ಪರಿಸ್ಥಿತಿಯನ್ನು ನೋಡಿಕೊಂಡು ಕ್ರಮ ತೆಗೆದುಕೊಳ್ಳುವಂತೆ ಮುಖ್ಯಮಂತ್ರಿ ಈಗಾಗಲೆ ಸೂಚನೆಯನ್ನು ಕೊಟ್ಟಿದ್ದಾರೆ. ಅಲ್ಲದೆ, ಪ್ರಧಾನಮಂತ್ರಿಯ ಕಚೇರಿಯಿಂದಲೂ ಕೋವಿಡ್ ನಿಯಂತ್ರಣ ಸಂಬಂಧ ಮೇಲುಸ್ತುವಾರಿ ಮಾಡಲಾಗುತ್ತಿದೆ ಎಂದು ಅವರು ಹೇಳಿದರು.
ಈಗಾಗಲೇ 21 ಜಿಲ್ಲೆಗಳಿಗೆ ಭೇಟಿ ನೀಡಿದ್ದು, 42 ಸಾವಿರ ಆಶಾಕಾರ್ಯಕರ್ತೆಯರಲ್ಲಿ ಪ್ರಸ್ತುತ 17,500 ಮಂದಿಗೆ ತಲಾ 3 ಸಾವಿರ ರೂಪಾಯಿ ಪ್ರೋತ್ಸಾಹಧನ ವಿತರಣೆಯಾಗಿದೆ. ಮುಂದಿನ ದಿನಗಳಲ್ಲಿ ಉಳಿದ ಆಶಾ ಕಾರ್ಯಕರ್ತೆಯರಿಗೂ ಪ್ರೋತ್ಸಾಹಧನ ವಿತರಣೆ ಮಾಡಲಾಗುತ್ತದೆ ಎಂದು ಸೋಮಶೇಖರ್ ತಿಳಿಸಿದರು.