ಅಕ್ಟೋಬರ್ ಮೊದಲನೆ ವಾರದಲ್ಲಿ ಗ್ರಾಪಂ ಚುನಾವಣೆ
ಚುನಾವಣಾ ಆಯೋಗದಿಂದ ಹೈಕೋರ್ಟ್ಗೆ ಪ್ರಮಾಣ ಪತ್ರ ಸಲ್ಲಿಕೆ
ಬೆಂಗಳೂರು, ಜು.2: ಅಕ್ಟೋಬರ್ ಮೊದಲನೆ ವಾರದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಯನ್ನು ಘೋಷಣೆ ಮಾಡಲಾಗುವುದು ಎಂದು ಹೈಕೋರ್ಟ್ಗೆ ರಾಜ್ಯ ಚುನಾವಣಾ ಆಯೋಗ ಪ್ರಮಾಣ ಪತ್ರ ಸಲ್ಲಿಸಿದೆ.
ಗ್ರಾಮ ಪಂಚಾಯಿತಿ ಚುನಾವಣೆಯನ್ನು ಮುಂದೂಡಿರುವುದನ್ನು ಪ್ರಶ್ನಿಸಿ ಕಾಂಗ್ರೆಸ್ ಮುಖಂಡ ಕೆ.ಸಿ.ಕೊಂಡಯ್ಯ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಹೈಕೋರ್ಟ್ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು.
ಅಂತಿಮ ಮೀಸಲಾತಿಯ ನೋಟಿಫಿಕೇಶನ್ ಕಾರ್ಯ ಜು.25ಕ್ಕೆ ಮುಗಿಯಲಿದೆ. ಸೆಪ್ಟೆಂಬರ್ ವೇಳೆಗೆ ಮತದಾರರ ಪಟ್ಟಿಯೂ ಫೈನಲ್ ಆಗಲಿದೆ. ಜೊತೆಗೆ 5800 ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ಘೋಷಣೆ ಮಾಡಲಾಗುವುದು. ಅಕ್ಟೋಬರ್ ಮೊದಲನೆ ವಾರದಲ್ಲಿ ಚುನಾವಣೆ ಘೋಷಣೆ ಮಾಡಲಾಗುವುದು ಎಂದು ಚುನಾವಣಾ ಆಯೋಗ ನ್ಯಾಯಪೀಠಕ್ಕೆ ಪ್ರಮಾಣ ಪತ್ರ ಸಲ್ಲಿಸಿತು.
ಪ್ರಕರಣವೇನು: ರಾಜ್ಯ ಚುನಾವಣಾ ಆಯೋಗ ಅವಧಿ ಮುಗಿದರೂ ಗ್ರಾಪಂ ಚುನಾವಣೆಯನ್ನು ನಡೆಸುತ್ತಿಲ್ಲ ಎಂದು ಕಾಂಗ್ರೆಸ್ ಮುಖಂಡ ಕೆ.ಸಿ.ಕೊಂಡಯ್ಯ ಅವರು ಅರ್ಜಿಯಲ್ಲಿ ತಿಳಿಸಿದ್ದರು. ಆದರೆ, ಚುನಾವಣಾ ಆಯೋಗ ಕೊರೋನ ಕಾರಣ ನೀಡಿ ಚುನಾವಣೆ ಮುಂದೂಡಿಕೆ ಮಾಡಿರುವುದಾಗಿ ಪೀಠಕ್ಕೆ ಮಾಹಿತಿ ನೀಡಿದ್ದರು.
ಸರಕಾರಿ ಅಧಿಕಾರಿಗಳು ಕೊರೋನ ಕಾರ್ಯದಲ್ಲಿ ಪಾಲ್ಗೊಂಡಿದ್ದಾರೆ, ಈ ವೇಳೆ ಚುನಾವಣೆ ನಡೆಸುವುದು ಸೂಕ್ತವಲ್ಲ ಎಂಬ ಕಾರಣ ನೀಡಿ ಚುನಾವಣೆಯನ್ನು ಮುಂದೂಡಿಕೆ ಮಾಡಿತ್ತು. ಗುರುವಾರ ಪೀಠಕ್ಕೆ ಪ್ರಮಾಣ ಪತ್ರ ಸಲ್ಲಿಸಿರುವ ಚುನಾವಣಾ ಆಯೋಗವು ಅಕ್ಟೋಬರ್ ಮೊದಲನೆ ವಾರದಲ್ಲಿ ಚುನಾವಣೆ ಘೋಷಣೆ ಮಾಡಲಾಗುವುದು ಎಂದು ತಿಳಿಸಿದೆ.