ಜುಲೈ 10ರಿಂದ ಆರೋಗ್ಯ ಸೇವೆ ಸ್ಥಗಿತಕ್ಕೆ ಆಶಾ ಕಾರ್ಯಕರ್ತೆಯರ ತೀರ್ಮಾನ
ಬಳ್ಳಾರಿ, ಜು.6: ಆಶಾ ಕಾರ್ಯಕರ್ತೆಯರ ಬೇಡಿಕೆಗಳನ್ನು ಈಡೇರಿಸದಿದ್ದರೆ ಜುಲೈ 10ರಿಂದ ಅನಿರ್ದಿಷ್ಟವಾಗಿ ಆರೋಗ್ಯ ಸೇವೆಗಳನ್ನು ಸ್ಥಗಿತಗೊಳಿಸಲಾಗುವುದು ಎಂದು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕರ್ಯಕರ್ತೆಯರ ಸಂಘದ ರಾಜ್ಯ ಘಟಕದ ಕಾರ್ಯದರ್ಶಿ ಡಿ.ನಾಗಲಕ್ಷ್ಮೀ ತಿಳಿಸಿದ್ದಾರೆ.
ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜೂನ್ 30ರಂದು ರಾಜ್ಯದಾದ್ಯಂತ ಎಲ್ಲ ಜಿಲ್ಲಾಧಿಕಾರಿಗಳು, ತಹಶೀಲ್ದಾರರು, ಆರೋಗ್ಯ ಸಚಿವ ಸೇರಿ ಎಲ್ಲ ಸಚಿವರು ಹಾಗೂ ಶಾಸಕರಿಗೂ ಮನವಿ ಸಲ್ಲಿಸಿದ್ದೇವೆ. ಮುಖ್ಯಮಂತ್ರಿಗಳೊಂದಿಗೆ ಮಾತನಾಡಿ ಸಮಸ್ಯೆ ಬಗೆಹರಿಸುವುದಾಗಿ ಅವರೂ ಹೇಳಿದ್ದಾರೆ. ಆದರೆ, ಈವರೆಗೆ ನಮಗೆ ಮುಖ್ಯಮಂತ್ರಿಗಳ ಕಚೇರಿಯಿಂದಾಗಲಿ, ಯಾರಿಂದಲೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಹಾಗಾಗಿ ಜುಲೈ 10 ರಿಂದ ಅನಿರ್ದಿಷ್ಟವಾಗಿ ಆರೋಗ್ಯ ಸೇವೆಗಳನ್ನು ಸ್ಥಗಿತಗೊಳಿಸಲು ನಿರ್ಧರಿಸಲಾಗಿದೆ ಎಂದು ಹೇಳಿದ್ದಾರೆ.
ನಮ್ಮ ಸೇವೆಗೆ ಕೇವಲ ಪ್ರಶಂಸೆಯೊಂದೇ ಬೇಡ, ಅದರಿಂದ ನಮ್ಮ ಹೊಟ್ಟೆ ತುಂಬುವುದಿಲ್ಲ. ನಮ್ಮ ಮೇಲೆ ನಿಜವಾದ ಗೌರವ ಇದ್ದರೆ, ಅಗತ್ಯ ಸೌಲಭ್ಯಗಳನ್ನು ನೀಡಿ, 12 ಸಾವಿರ ಗೌರವಧನ ಖಾತರಿಪಡಿಸಬೇಕು. ಸೂಕ್ತ ರಕ್ಷಣಾ ಸಾಮಗ್ರಿಗಳನ್ನು ನೀಡಬೇಕು. ಸರಕಾರವು ಗೌರವಧನ 3 ಸಾವಿರವನ್ನು ಎಲ್ಲರಿಗೂ ಕೊಟ್ಟಿಲ್ಲ. ಕೆಲವೆಡೆಗಳಲ್ಲಿ ಕೊಟ್ಟಿರುವ ಚೆಕ್ಗಳು ಹಣವಿಲ್ಲದೆ ನಗದಾಗಿಲ್ಲ ಎಂದು ದೂರಿದರು.