ಕೊರೋನ ಸೋಂಕಿಗೆ ಮಂಡ್ಯ ಜಿಲ್ಲೆಯಲ್ಲಿ ಮೊದಲ ಬಲಿ
ಸಾಂದರ್ಭಿಕ ಚಿತ್ರ
ಮಂಡ್ಯ, ಜು.7: ಜಿಲ್ಲೆಯಲ್ಲಿ ಕೊರೋನ ಸೋಂಕಿಗೆ 55 ವರ್ಷದ ವ್ಯಕ್ತಿ ಬಲಿಯಾಗಿದ್ದಾರೆ. ಮದ್ದೂರಿನ ನಿವಾಸಿ ಕೊರೋನದಿಂದ ಸಾವನ್ನಪ್ಪಿದ್ದಾರೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಮಂಚೇಗೌಡ ಮಾಹಿತಿ ನೀಡಿದ್ದಾರೆ.
ಈ ವ್ಯಕ್ತಿಯನ್ನು ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ರವಿವಾರ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸೋಮವಾರ ಕೋವಿಡ್ ದೃಢಪಟ್ಟಿದೆ. ತಕ್ಷಣ ಮಂಡ್ಯ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಮೃತಪಟ್ಟಿದ್ದಾರೆ.
ಕೋವಿಡ್ 19 ಮಾರ್ಗಸೂಚಿ ಪ್ರಕಾರ ಅಂತ್ಯಕ್ರಿಯೆ ಮಾಡಲಾಗುವುದು. ಸ್ವಯಂ ಆಗಿ ಕೆಲಸ ಮಾಡಲು ಕೆಲವರು ಮುಂದೆ ಬಂದಿದ್ದಾರೆ. ತಂಡ ಸಿದ್ಧತೆ ಮಾಡಿಕೊಂಡಿದ್ದಾರೆ. ಜಿಲ್ಲಾಡಳಿತದಿಂದ ಜಾಗ ಗುರುತಿಸಲಾಗಿದೆ ಎಂದು ಡಾ.ಮಂಚೇಗೌಡ ತಿಳಿಸಿದ್ದಾರೆ.
ಮಂಡ್ಯ ತಾಲೂಕಿನ ಯತ್ತದಹಳ್ಳಿ ಗ್ರಾಮದಲ್ಲಿ 8 ಎಕರೆ ಭೂಮಿ ಗುರುತಿಸಲಾಗಿದೆ. ಆ ಜಾಗದಲ್ಲಿ ಆ್ಯಂಬುಲೆನ್ಸ್ ವ್ಯವಸ್ಥೆ ಮಾಡಿಸಲಾಗಿದೆ. ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮದೊಂದಿಗೆ ಅಂತ್ಯಕ್ರಿಯೆ ಮಾಡಲಾಗುವುದು ಎಂದು ಅವರು ತಿಳಿಸಿದರು.