ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕೆ ಕಾಂಗ್ರೆಸ್ ಸಹಕಾರ ನೀಡುತ್ತಿಲ್ಲ: ಸಚಿವ ಆರ್.ಅಶೋಕ್
ಮೈಸೂರು,ಜು.15: ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕೆ ಕಾಂಗ್ರೆಸ್ ಮುಖಂಡರು ಸರಕಾರಕ್ಕೆ ಸಹಕಾರ ನೀಡುತ್ತಿಲ್ಲ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು.
ಮೈಸೂರಿನ ಸರಕಾರಿ ಅತಿಥಿ ಗೃಹದಲ್ಲಿ ಬುಧವಾರ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಸಚಿವರು, ಕೊರೋನ ಸಂದರ್ಭದಲ್ಲಿ ಕಾಂಗ್ರೆಸ್ ಅನಗತ್ಯ ರಾಜಕೀಯ ಮಾಡುತ್ತಿದೆ. ಲೆಕ್ಕಕೊಡಿ ಎಂದು ಸಿದ್ದರಾಮಯ್ಯನವರು ಕೇಳಬೇಕಿಲ್ಲ. ಕೋವಿಡ್ ಲೆಕ್ಕವನ್ನ ಸಿದ್ದರಾಮಯ್ಯನವರ ಮನೆ ಬಾಗಿಲಿಗೆ ತಲುಪಿಸುತ್ತೇವೆ. ಪ್ರತಿಯೊಬ್ಬ ಸಾರ್ವಜನಿಕರಿಗೂ ಲೆಕ್ಕ ಸಿಗುತ್ತೆ. ಕೋವಿಡ್ ಲೆಕ್ಕದಲ್ಲಿ ಯಾವುದೇ ಅವ್ಯವಹಾರ ನಡೆಸಿಲ್ಲ. ಭ್ರಷ್ಟಾಚಾರ ನಡೆಯೋದಕ್ಕೆ ಇದು ಕಾಂಗ್ರೆಸ್ ಸರ್ಕಾರ ಅಲ್ಲ. ಕಾಂಗ್ರೆಸ್ ಸರ್ಕಾರ ಇದ್ದಾಗ ಎಷ್ಟು ಭ್ರಷ್ಟಾಚಾರ ನಡೆದಿದೆ ಅಂತ ಇಡೀ ದೇಶಕ್ಕೆ ಗೊತ್ತು. ಕಳೆದ ಆರು ವರ್ಷಗಳಲ್ಲಿ ಪ್ರಧಾನಿ ಮೋದಿ ಯಾವುದೇ ಕಳಂಕ ಇಲ್ಲದೆ ಅಧಿಕಾರ ನಡೆಸುತ್ತಿದ್ದಾರೆ ಎಂದು ಹೇಳಿದರು.
ಕೋವಿಡ್ ಸಮರದಲ್ಲಿ ವಿಪಕ್ಷಗಳು ಸಹಕಾರ ಕೊಡುತ್ತಿಲ್ಲ. ರಾಜ್ಯದಲ್ಲಿ ಈವರೆಗೆ 400 ರಿಂದ 500 ಕೋಟಿ ರೂ. ಮಾತ್ರ ಖರ್ಚಾಗಿದೆ. 2 ಸಾವಿರ ಕೋಟಿ ಭ್ರಷ್ಟಾಚಾರ ನಡೆಯಲು ಹೇಗೆ ಸಾಧ್ಯ ಎಂದು ಅಶೋಕ್ ಪ್ರಶ್ನಿಸಿದರು.
ಹಾಸಿಗೆ, ದಿಂಬು ಖರೀದಿಯಲ್ಲಿ ಅವ್ಯವಹಾರ ಮಾಡಿದ್ದಾರೆ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪಕ್ಕೆ ತಿರುಗೇಟು ನೀಡಿದ ಆರ್.ಅಶೋಕ್, ಹಾಸಿಗೆ ದಿಂಬನ್ನು ನಾವು ಇನ್ನೂ ಖರೀದಿಯೇ ಮಾಡಿಲ್ಲ. ಇನ್ನು ಅವ್ಯವಹಾರ ಎಲ್ಲಿ ಬಂತು?. ನಾನು ತುಂಬಾ ನೋವಿನಿಂದ ಹೇಳುತ್ತಿದ್ದೇನೆ. ಕೋವಿಡ್ ನಿಯಂತ್ರಣದಲ್ಲಿ ಕಾಂಗ್ರೆಸ್ ನೂರಕ್ಕೆ ನೂರರಷ್ಟು ಸಹಕಾರ ಕೊಡುತ್ತಿಲ್ಲ. ಕಾಂಗ್ರೆಸ್ನಿಂದ ನಾವು ಈ ರೀತಿಯ ನಡವಳಿಕೆಯನ್ನ ನಿರೀಕ್ಷಿಸಿರಲಿಲ್ಲ ಎಂದು ಅಶೋಕ್ ಹೇಳಿದರು.