ಸಾರಿಗೆ ಸಿಬ್ಬಂದಿಗೆ ವೇತನ ಬಿಡುಗಡೆ: ಡಿಸಿಎಂ ಲಕ್ಷ್ಮಣ ಸವದಿ
ಕಲಬುರ್ಗಿ, ಜು.24: ಕೆಎಸ್ಸಾರ್ಟಿಸಿ, ಬಿಎಂಟಿಸಿ, ವಾಯವ್ಯ ಸಾರಿಗೆ ಮತ್ತು ಈಶಾನ್ಯ ಸಾರಿಗೆ ಸಂಸ್ಥೆಗಳ ಸಿಬ್ಬಂದಿಗಳಿಗೆ ಸಂಬಳವನ್ನು ಭರಿಸಲು ಒಟ್ಟು 961 ಕೋಟಿ ರೂ. ನೀಡಲು ರಾಜ್ಯ ಸರಕಾರ ನಿರ್ಧರಿಸಿದ್ದು, ಈಗಾಗಲೇ ಜೂನ್ ಮತ್ತು ಜುಲೈ ತಿಂಗಳುಗಳ ಸಂಬಳಕ್ಕಾಗಿ 426 ಕೋಟಿ ರೂ. ಬಿಡುಗಡೆಗೊಳಿಸಲಾಗಿದೆ ಎಂದು ಉಪಮುಖ್ಯಮಂತ್ರಿ, ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರು ತಿಳಿಸಿದ್ದಾರೆ.
ಜೂನ್ ತಿಂಗಳಿನಿಂದ ಸೆಪ್ಟೆಂಬರ್ ತಿಂಗಳಿನವರೆಗೆ ಒಟ್ಟು 4 ತಿಂಗಳುಗಳ ವೇತನ ಭರಿಸಲು ಈ ನಿರ್ಧಾರದಿಂದ ಅನುಕೂಲವಾಗಿದೆ. ಸಾರಿಗೆ ಸಂಸ್ಥೆ ಸಿಬ್ಬಂದಿಗಳ ಸಂಕಷ್ಟಕ್ಕೆ ಸ್ಪಂದಿಸಿ ಅವರಿಗೆ ಕೂಡಲೇ ಅಗತ್ಯ ವೇತನ ಬಿಡುಗಡೆ ಮಾಡಬೇಕೆಂಬ ನಮ್ಮ ಬೇಡಿಕೆಗೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ನನ್ನ ಹೃತ್ಪೂರ್ವಕ ವಂದನೆಗಳನ್ನು ತಿಳಿಸಬಯಸುತ್ತೇನೆ ಎಂದು ಸವದಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story