ಕೋವಿಡ್ ನಡುವೆ ಶಾಲೆಗಳನ್ನು ಪ್ರಾರಂಭಿಸುವ ಯೋಚನೆ ಇಲ್ಲ: ಸಚಿವ ಸುರೇಶ್ ಕುಮಾರ್
ಬೆಂಗಳೂರು, ಜು.28: ಕೋವಿಡ್ ಆತಂಕದ ಸಂದರ್ಭದಲ್ಲಿ ಶಾಲೆಗಳನ್ನು ಪ್ರಾರಂಭಿಸುವ ಯೋಚನೆ ಇಲ್ಲ. ಆದರೆ, ಮಕ್ಕಳನ್ನು ಕಲಿಕೆಯಲ್ಲಿ ತೊಡಗಿಸಿಕೊಳ್ಳುವ ನಿಟ್ಟಿನಲ್ಲಿ ಎಲ್ಲ ರೀತಿಯಿಂದಲೂ ಪ್ರಯತ್ನ ನಡೆಸಲಾಗುತ್ತಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಮಂಗಳವಾರ ಕೊರೋನ ಸೋಂಕಿನ ಪರಿಸ್ಥಿತಿಯಲ್ಲಿ ತಂತ್ರಜ್ಞಾನಾಧಾರಿತ ಶಿಕ್ಷಣ ಮತ್ತು ಶಾಲಾ ಚಟುವಟಿಕೆಗಳನ್ನು ಪ್ರಾರಂಭಿಸುವ ನಿಟ್ಟಿನಲ್ಲಿ ಶೈಕ್ಷಣಿಕ ವಲಯದಲ್ಲಿ ತೊಡಗಿಸಿಕೊಂಡಿರುವ ಸರಕಾರೇತರ ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ನಡೆಸಿದ ವೆಬಿನಾರ್ ಸಂವಾದದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ದೇಶದಲ್ಲಿ ಹಾಗೂ ರಾಜ್ಯದಲ್ಲಿ ನಿಗದಿತ ವೇಳೆಯಲ್ಲಿ ಶಾಲೆಗಳನ್ನು ಪ್ರಾರಂಭಿಸಲು ಸಾಧ್ಯವಾಗದ ಪರಿಸ್ಥಿತಿ ಇದೇ ಮೊದಲ ಬಾರಿಗೆ ಬಂದಿದೆ. ಇಂತಹ ಸಂದರ್ಭದಲ್ಲೂ ಮಕ್ಕಳು ಕಲಿಕೆಯಲ್ಲಿ ನಿರಂತರವಾಗಿ ತೊಡಗಿಸಿಕೊಳ್ಳಲು ಅನುಕೂಲವಾಗುವಂತಹ ಎಲ್ಲ ಪ್ರಯತ್ನಗಳನ್ನು ಮಾಡಲಾಗುತ್ತಿದೆ. ವಠಾರ ಶಾಲೆ, ಪಡಶಾಲೆ, ಮನೆಶಾಲೆ, ತಂತ್ರಜ್ಞಾನಾಧಾರಿತ ಶಿಕ್ಷಣ, ಆಕಾಶವಾಣಿ, ಚಂದನ ದೂರದರ್ಶನ ವಾಹಿನಿ, ಶಿಕ್ಷಣ ಇಲಾಖೆಯ ಚಾನೆಲ್ ಸೇರಿದಂತೆ ಲಭ್ಯವಾಗಬಹುದಾದ ಎಲ್ಲ ಅವಕಾಶವನ್ನೂ ಮುಕ್ತವಾಗಿರಿಸಿಕೊಂಡು ಮಕ್ಕಳ ಕಲಿಕೆಯನ್ನು ಉತ್ತಮಪಡಿಸುವ ನಿಟ್ಟಿನಲ್ಲಿ ಚಿಂತನೆ ನಡೆಸಲಾಗುತ್ತಿದೆ ಎಂದು ಅವರು ಹೇಳಿದರು.
ಮಕ್ಕಳ ಕಲಿಕೆಯ ಹಿತದೃಷ್ಟಿಯಿಂದ ಸರಕಾರೇತರ ಸಂಸ್ಥೆಗಳು ನೀಡಿರುವ ಎಲ್ಲ ಸಲಹೆಗಳನ್ನು ಕ್ರೂಢೀಕರಿಸಿ ಆಯಾ ಸಂದರ್ಭ, ಆಯಾ ಪ್ರದೇಶಕ್ಕನುಗುಣವಾಗಿ ಕಾರ್ಯಕ್ರಮಗಳನ್ನು ಜಾರಿ ಮಾಡುವ ಬಗ್ಗೆಯೂ ಚಿಂತನೆ ನಡೆಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ಶಿಕ್ಷಣ ತಜ್ಞರಾದ ಎಂ.ಕೆ.ಶ್ರೀಧರ್, ಡಾ.ಗುರುರಾಜ ಖರ್ಜಗಿ, ಡಾ.ನಿರಂಜನಾರಾಧ್ಯ ಸೇರಿದಂತೆ ಅಜೀಂ ಪ್ರೇಮ್ಜಿ ಪ್ರತಿಷ್ಠಾನ, ಗ್ರಾಮ್ಸ್, ಅಕ್ಷರ ಫೌಂಡೇಷನ್, ಯೂನಿಸೆಫ್, ಶಿಕ್ಷಣ ಸಿಇಇ, ಪೋರ್ತ್ ಫೌಂಡೇಷನ್, ಪ್ರಥಮ್, ಪ್ರಜಾಯತ್ನ, ಅಗಸ್ತ್ಯ ಸೇರಿದಂತೆ ಹಲವಾರು ಸಂಸ್ಥೆಗಳ ಪ್ರತಿನಿಧಿಗಳು ಸಂವಾದಲ್ಲಿ ಭಾಗವಹಿಸಿದ್ದವು.
ಸಂವಾದದ ಮುಖ್ಯಾಂಶಗಳು
-ಯೂಟ್ಯೂಬ್, ವಾಟ್ಸ್ ಆ್ಯಪ್ ಸೇರಿದಂತೆ ಯಾವುದರ ಮೂಲಕವಾದರೂ ಮಕ್ಕಳು ಕಲಿಕೆಯಲ್ಲಿ ತೊಡಗಿಸಿಕೊಳ್ಳುವಂತಾಗಬೇಕು.
-ಈ ಹಂತದಲ್ಲಿ ಪಠ್ಯವೇ ಮುಖ್ಯವಲ್ಲ. ಕಲಿಕೆಯ ಅಂತರವನ್ನು ನಿವಾರಿಸುವುದು ಮುಖ್ಯವಾಗಬೇಕು.
-ಸಮುದಾಯ ಆಧಾರಿತ ಕೇಂದ್ರಗಳು, ನೆರೆಹೊರೆ ಮಕ್ಕಳ ಗುಂಪು, ಗ್ರಾಮದಲ್ಲಿರುವ ಶಿಕ್ಷಕರು, ಶಿಕ್ಷಕ ಪದವೀಧರರು, ಶಿಕ್ಷಣ ತರಬೇತಿ ಪಡೆದವರು, ಸ್ವಯಂ ಸೇವಕರನ್ನು ಈ ಹಂತದಲ್ಲಿ ಬಳಸಿಕೊಳ್ಳಬೇಕು.