ಮುಂದಿನ ಮೂರು ವರ್ಷವೂ ಯಡಿಯೂರಪ್ಪ ಮುಖ್ಯಮಂತ್ರಿ: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್
ಬೆಂಗಳೂರು, ಜು. 30: ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ. ಹೀಗಾಗಿ ಮುಖ್ಯಮಂತ್ರಿ ಯಡಿಯೂರಪ್ಪನವರನ್ನು ಬದಲಾವಣೆ ಮಾಡಲಾಡಲಾಗುತ್ತದೆ ಎಂಬ ಚರ್ಚೆಯೇ ಅಪ್ರಸ್ತುತ. ಮುಂದಿನ ಮೂರು ವರ್ಷ ಯಡಿಯೂರಪ್ಪನವರೇ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಇಂದಿಲ್ಲಿ ಸ್ಪಷ್ಟನೆ ನೀಡಿದ್ದಾರೆ.
ಗುರುವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸ್ಥಾನಕ್ಕಾಗಿ ಪಕ್ಷದ ಇತರೆ ಯಾವುದೇ ನಾಯಕರು ಲಾಬಿ ನಡೆಸುತ್ತಿಲ್ಲ. ಈ ಬಗ್ಗೆ ಮಾಧ್ಯಮಗಳ ವರದಿಯಲ್ಲಿ ಯಾವುದೇ ಹುರುಳಿಲ್ಲ. ಯಾವ ಶಾಸಕರು ಹಾಗೂ ಸಚಿವರೂ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಮಾತನಾಡಿಲ್ಲ. ನಮ್ಮದು ರಾಷ್ಟ್ರೀಯ ಪಕ್ಷ. ತನ್ನದೆ ನೀತಿ ನಿಯಮಗಳಿವೆ. ಶಿಸ್ತು ಉಲ್ಲಂಘಿಸಿದರೆ ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ಎಚ್ಚರಿಸಿದರು.
ರಾಜ್ಯದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ಸರಕಾರ ಸುಭದ್ರವಾಗಿದೆ. ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೊಸದಿಲ್ಲಿಯ ಭೇಟಿಯ ಬಗ್ಗೆ ಊಹಾಪೋಹದ ಸುದ್ದಿಗಳು ಬಿತ್ತರಗೊಳ್ಳುತ್ತಿವೆ. ಈಗಾಗಲೇ ಖುದ್ದು ಲಕ್ಷ್ಮಣ ಸವದಿ ತಾವು ದಿಲ್ಲಿಗೆ ತೆರಳಿದ್ದರ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಹೀಗಾಗಿ ಈ ವಿಚಾರದ ಬಗ್ಗೆ ಅನಗತ್ಯ ಚರ್ಚೆ, ಅನ್ಯ ಅರ್ಥ ಕಲ್ಪಿಸುವುದು ಸರಿಯಲ್ಲ ಎಂದು ಹೇಳಿದರು.