ಪ್ರವಾದಿಯ ಸಂದೇಶ ಮಣ್ಣುಪಾಲು ಮಾಡುವುದು ಧರ್ಮಕ್ಕೆ ಅಪಚಾರ: ಎಚ್.ಡಿ.ಕುಮಾರಸ್ವಾಮಿ
ಬೆಂಗಳೂರು, ಆ.12: ಡಿ.ಜೆ.ಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ನಡೆದ ಘಟನೆ ಅಕ್ಷಮ್ಯ. ತಪ್ಪು ಮಾಡಿದವರಿಗೆ ಶಿಕ್ಷೆಯಾಗಬೇಕು. ಧರ್ಮದ ಹೆಸರಲ್ಲಿ ಯಾರೇ ಗೂಂಡಾಗಿರಿ, ಕಾನೂನು ಕೈಗೆತ್ತಿಕೊಂಡರೂ ಅಂತವರನ್ನು ಮುಲಾಜಿಲ್ಲದೆ ಮಟ್ಟಹಾಕಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.
ಈ ಸಂಬಂಧ ಸರಣಿ ಟ್ವೀಟ್ಗಳನ್ನು ಮಾಡಿರುವ ಅವರು, ಯಾವುದೇ ಧರ್ಮದ ಸಮುದಾಯ ಕಾನೂನಿಗೆ ಅತೀತರಲ್ಲ. ನೆಲದ ಕಾನೂನನ್ನು ಗೌರವಿಸದ ಎಲ್ಲರೂ ಶಿಕ್ಷೆಗೆ ಅರ್ಹರು. ಸರಕಾರ ಪುಂಡಾಟ ನಡೆಸಿದವರ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು. ಮುಂದೆಂದೂ ಇಂತಹ ಘಟನೆಗಳು ನಡೆಯದಂತೆ ಎಚ್ಚರ ವಹಿಸಬೇಕು ಎಂದು ಆಗ್ರಹಿಸಿದ್ದಾರೆ.
ಅವಿವೇಕಿಯೊಬ್ಬ ಪೈಗಂಬರ್ ಅವರ ಬಗ್ಗೆ ಅವಹೇಳನ ಮಾಡಿದ. ಆತನಿಗೆ ಶಿಕ್ಷೆಯಾಗಬೇಕು ನಿಜ, ಆದರೆ ಪೈಗಂಬರ್ ಅನುಯಾಯಿಗಳು ದಾಂಧಲೆಗಿಳಿಯುವ ಮೂಲಕ ಪ್ರವಾದಿಯ ಪವಿತ್ರ ಸಂದೇಶಗಳನ್ನು ಮಣ್ಣುಪಾಲು ಮಾಡುವುದು ಆ ಧರ್ಮಕ್ಕೆ ಮಾಡಿದ ಅಪಚಾರ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.
ಕಾನೂನು ಪಾಲಕ ಪೊಲೀಸರು ಮತ್ತು ವರದಿಗಾಗಿ ತೆರಳಿದ್ದ ಪತ್ರಕರ್ತರ ಮೇಲೆ ಅಮಾನುಷ ದೌರ್ಜನ್ಯ ನಡೆಸುವ ಮೂಲಕ ನಾಗರಿಕ ಸಮಾಜಕ್ಕೆ ಯಾವ ಸಂದೇಶ ರವಾನಿಸುತ್ತದೆ ಎಂಬ ಕನಿಷ್ಠ ಪ್ರಜ್ಞೆಯೂ ಇಲ್ಲದೆ ವರ್ತಿಸಿರುವುದು ಅತ್ಯಂತ ಖಂಡನೀಯ ಎಂದು ಅವರು ಹೇಳಿದ್ದಾರೆ.
ಧರ್ಮದ ಹೆಸರಿನಲ್ಲಿ ಪುಂಡಾಟಿಕೆ ನಡೆಸುವ ಮೂಲಕ ಸಂವಿಧಾನದ ಮೇಲೆ ಸವಾರಿ ಮಾಡುವ ಇಂತಹ ಘಟನೆಗಳಿಂದ ಸಾರ್ವತ್ರಿಕ ತಿರಸ್ಕಾರಕ್ಕೆ ಮತ್ತು ಅವಗಣನೆಗೆ ಸಮುದಾಯವೊಂದು ಪದೇಪದೇ ಗುರಿಯಾಗುತ್ತಿರುವುದು ಸ್ವಯಂಕೃತ ಅಪರಾಧವಲ್ಲದೆ ಬೇರೇನಿಲ್ಲ ಎಂದು ಕುಮಾರಸ್ವಾಮಿ ಹೇಳಿದ್ದಾರೆ.
ಈ ಘಟನೆ ಪೂರ್ವಯೋಜಿತ ಸಂಚು ಎಂಬ ಅನುಮಾನಕ್ಕೂ ಪುಷ್ಟಿ ನೀಡಿದೆ. ಸ್ಥಳೀಯ ಜನಪ್ರತಿನಿಧಿಗಳ, ಸ್ವಜನಪಕ್ಷಪಾತ, ಅಧಿಕಾರ ಲಾಲಸೆಗಳಿಂದಾಗಿ ಇಂಥದೊಂದು ಸಣ್ಣ ಕಿಡಿ ಬೆಂಕಿಯುಂಡೆ ಆಗುವ ಮೂಲಕ ಅಮಾಯಕ ಜನರ ಸಿಟ್ಟು- ಸೆಡವು ಸ್ಪೋಟಗೊಂಡಿದೆ. ನಿರುಪದ್ರವಿಗಳ ರಕ್ತ ಚೆಲ್ಲಾಡಿದೆ. ಕೌಟುಂಬಿಕ ದ್ವೇಷಸೂಯೆಗಳು ದುರ್ವರ್ತನೆಗೆ ವೇದಿಕೆಯಾಗಿರುವುದು ಸುಳ್ಳಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಅಲ್ಲಾಹ್ ನ್ಯಾಯ, ಪರೋಪಕಾರ ಹಾಗೂ ಆಪ್ತೇಷ್ಟರ ಸೌಜನ್ಯದ ಆಜ್ಞೆ ನೀಡುತ್ತಾನೆ. ಮತ್ತು ಅಶ್ಲೀಲಕಾರ್ಯ, ದುಷ್ಕೃತ್ಯ, ಅಕ್ರಮ, ಅತ್ಯಾಚಾರಗಳನ್ನು ನಿಷೇಧಿಸುತ್ತಾನೆ. ನೀವು ಜಾಗೃತರಾಗಲಿಕ್ಕಾಗಿ ಅವನು ನಿಮಗೆ ಉಪದೇಶ ನೀಡುತ್ತಾನೆ. ‘ಕುರ್ಆನ್ ಆಲ್ ಹಿಜ್ರ್ 15’ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.
ದಯವಿಲ್ಲದ ಧರ್ಮವಾವುದಯ್ಯಾ? ದಯವೇ ಬೇಕು ಸಕಲ ಪ್ರಾಣಿಗಳಲ್ಲಿಯೂ, ದಯವೇ ಧರ್ಮದ ಮೂಲವಯ್ಯಾ, ಕೂಡಲಸಂಗಯ್ಯನಂತಲ್ಲದೊಲ್ಲನಯ್ಯಾ ಎಂದು ಅವರು ಟ್ವೀಟ್ ಮಾಡಿದ್ದಾರೆ.