ಸರಕಾರದ ಹಗರಣಗಳ ವಿರುದ್ಧ ಸದನದಲ್ಲಿ ಧ್ವನಿ: ಸತೀಶ್ ಜಾರಕಿಹೊಳಿ
ಬೆಳಗಾವಿ, ಆ.24: ರಾಜ್ಯದ ಬಹಳಷ್ಟು ಆರ್ಟಿಒ ಚೆಕ್ ಪೋಸ್ಟ್ ಗಳಲ್ಲಿ ಹಗರಣಗಳು ನಡೆದಿವೆ. ಈ ಕುರಿತು ಮುಂಬರುವ ಅಧಿವೇಶನದಲ್ಲಿ ಧ್ವನಿ ಎತ್ತಲಾಗುವುದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಜಿಲ್ಲೆಯ ಚಿಕ್ಕೋಡಿ ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಕೋವಿಡ್-19 ಕಿಟ್ ಖರೀದಿಯಲ್ಲೂ ಭ್ರಷ್ಟಾಚಾರ ನಡೆದ ಕುರಿತು ಮಾಧ್ಯಮಗಳಲ್ಲಿ ಸಾಕಷ್ಟು ವರದಿಗಳು ಬಂದಿವೆ. ಈ ಸಂಗತಿಯನ್ನೂ ಅಧಿವೇಶನದಲ್ಲಿ ಪ್ರಸ್ತಾಪಿಸಲಾಗುವುದು ಎಂದರು.
ಕಳೆದ ಬಾರಿ ಪ್ರವಾಹದಿಂದ ಮನೆ ಕಳೆದು ಕೊಂಡವರಿಗೆ ಪರಿಹಾರ ನೀಡುವಲ್ಲಿ ರಾಜ್ಯ ಸರಕಾರ ವಿಫಲವಾಗಿದೆ ಎಂದೂ ಅವರು ಆರೋಪಿಸಿದರು. ಶಾಸಕ ಗಣೇಶ ಹುಕ್ಕೇರಿ ಕುರಿತು ಪ್ರತಿಕ್ರಿಯೆ ನೀಡಿದ ಸತೀಶ್ ಜಾರಕಿಹೊಳಿ, ಗಣೇಶ್ ಅವರು 30 ವರ್ಷಗಳಿಂದ ಪಕ್ಷದ ನಿಷ್ಠಾವಂತ ಕಾರ್ಯಕರ್ತರು. ಅವರು ಪಕ್ಷದ ಕಾರ್ಯಕ್ರಮಕ್ಕೆ ಹೆಚ್ಚಾಗಿ ಬರುವುದಿಲ್ಲ. ಪಕ್ಷದ ಕಾರ್ಯಕ್ರಮಕ್ಕೆ ಅವರು ಬಂದಿಲ್ಲ ಎಂದರೆ ಅದಕ್ಕೆ ವಿಶೇಷ ಅರ್ಥ ಕಲ್ಪಿಸುವುದು ಬೇಡ ಎಂದು ಸ್ಪಷ್ಟನೆ ನೀಡಿದರು.
ಮಾಜಿ ಸಚಿವ ವೀರಕುಮಾರ ಪಾಟೀಲ, ಮಾಜಿ ಶಾಸಕ ಕಾಕಾಸಾಹೇಬ ಪಾಟೀಲ, ಲಕ್ಷ್ಮಣರಾವ್ ಚಿಂಗಳೆ, ಮಹಾವೀರ ಮೋಹಿತೆ, ಚಿಕ್ಕೋಡಿ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ತೇಜಸ್ವಿನಿ ನಾಯಿಕವಾಡಿ ಉಪಸ್ಥಿತರಿದ್ದರು.