1 ವಾರದಲ್ಲಿ ಬೆಳೆ ಸಮೀಕ್ಷೆ ಪೂರ್ಣಗೊಳಿಸಲು ಸಚಿವ ಬಿ.ಸಿ.ಪಾಟೀಲ್ ಕಟ್ಟುನಿಟ್ಟಿನ ಸೂಚನೆ
ಕೃಷಿ ಜ್ಞಾನ ಆಪ್ ಬಿಡುಗಡೆ
ಬೆಳಗಾವಿ, ಸೆ.14: ಮುಂದಿನ ಒಂದು ವಾರದಲ್ಲಿ ಬೆಳೆ ಸಮೀಕ್ಷೆ ಕಾರ್ಯವನ್ನು ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ಕೃಷಿ ಸಚಿವ ಬಿ.ಸಿ.ಪಾಟೀಲ್ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಸೋಮವಾರ ನಗರದ ಸುವರ್ಣ ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ನಡೆದ ಬೆಳಗಾವಿ ವಿಭಾಗಮಟ್ಟದ ಬೆಳೆ ಸಮೀಕ್ಷೆ ಕಾರ್ಯ ಮತ್ತು ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ತಂತ್ರಜ್ಞಾನ ಆಧಾರಿತವಾಗಿ ರೈತರೆ ಸ್ವಯಂ ನಡೆಸುವ ಬೆಳೆ ಸಮೀಕ್ಷೆ ಕಾರ್ಯಕ್ಕೆ ಉತ್ತರ ಕರ್ನಾಟಕದಲ್ಲಿ ಇದುವರೆಗೆ ಅತ್ಯುತ್ತಮ ಸ್ಪಂದನೆ ದೊರೆತಿದೆ. ರಾಜ್ಯದಾದ್ಯಂತ 78 ಲಕ್ಷ ರೈತರು ಈಗಾಗಲೇ ಸ್ವತಃ ಸಮೀಕ್ಷೆ ಪೂರ್ಣಗೊಳಿಸಿದ್ದಾರೆ. ಕೆಲವು ಕರಾವಳಿ ಜಿಲ್ಲೆಗಳಲ್ಲಿ ನೆಟ್ವರ್ಕ್ ಸಮಸ್ಯೆಯಿಂದ ಬೆಳೆ ಸಮೀಕ್ಷೆ ಸ್ವಲ್ಪಮಟ್ಟಿಗೆ ಹಿನ್ನಡೆಯಾಗಿದೆ ಎಚಿದು ಅವರು ಹೇಳಿದರು.
ಮುಂಬರಲಿರುವ ದಿನಗಳಲ್ಲಿ ರೈತರೆ ಸ್ವಯಂ ತಮ್ಮ ಬೆಳೆಗಳ ಸಮೀಕ್ಷೆ ಮಾಡಲಿದ್ದಾರೆ. ಬೆಳೆ ಸಮೀಕ್ಷೆ ಆಪ್ ಅನ್ನು ಇಡೀ ದೇಶಕ್ಕೆ ವಿಸ್ತರಣೆ ಮಾಡಲಾಗುವುದು ಎಂದು ಕೇಂದ್ರ ಕೃಷಿ ಸಚಿವರು ಭರವಸೆ ನೀಡಿದ್ದಾರೆ ಎಂದು ಬಿ.ಸಿ.ಪಾಟೀಲ್ ತಿಳಿಸಿದರು.
ಬೆಳೆ ವಿಮೆ ಪಾವತಿ ಕಡ್ಡಾಯಗೊಳಿಸಿ: ರೈತರು ಕೇವಲ ಶೇ.2ರಷ್ಟು ಮಾತ್ರ ವಿಮೆ ಹಣ ಪಾವತಿಸಬೇಕು. ಉಳಿದ ಶೇ.98 ಸರಕಾರವೇ ಪಾವತಿಸುವುದರಿಂದ ಮುಂಬರುವ ದಿನಗಳಲ್ಲಿ ಪ್ರತಿಯೊಬ್ಬರೂ ಕಡ್ಡಾಯವಾಗಿ ಬೆಳೆವಿಮೆ ಪಾವತಿಸುವಂತೆ ಅಧಿಕಾರಿಗಳು ಕ್ರಮಕೈಗೊಳ್ಳಬೇಕು ಎಂದು ಅವರು ಸೂಚನೆ ನೀಡಿದರು.
ಜಿಲ್ಲಾವಾರು ಮಳೆ, ಬಿತ್ತನೆ, ಗೊಬ್ಬರ ಪೂರೈಕೆ ಹಾಗೂ ಲಭ್ಯತೆ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಸಚಿವರು ಅಧಿಕಾರಿಗಳಿಂದ ಮಾಹಿತಿಯನ್ನು ಪಡೆದುಕೊಂಡರು. ಮಣ್ಣಿನ ಗುಣಮಟ್ಟ ಅರಿತುಕೊಂಡರೆ ಕೃಷಿ ಸಮಸ್ಯೆಗಳನ್ನು ಪರಿಹರಿಸಬಹುದು. ಆದ್ದರಿಂದ ಮಣ್ಣು ಪರೀಕ್ಷೆಗೆ ಆದ್ಯತೆ ನೀಡಬೇಕು ಎಂದು ಬಿ.ಸಿ.ಪಾಟೀಲ್ ನಿರ್ದೇಶನ ನೀಡಿದರು.
ರೈತರ ಆದಾಯ ದ್ವಿಗುಣಗೊಳಿಸಬೇಕಾದರೆ ರೈತರು ಬಹುಬೆಳೆ ಪದ್ಧತಿಯನ್ನು ಅನುಸರಿಸಲು ಪ್ರೋತ್ಸಾಹಿಸಬೇಕು. ಅದೇ ರೀತಿ ರೈತ ಸಮುದಾಯದಲ್ಲಿ ವೈಜ್ಞಾನಿಕ ಮನೋಭಾವ ರೂಢಿಸಲು ಅಧಿಕಾರಿಗಳು ಶ್ರಮಿಸಬೇಕು. ಇಲಾಖೆಯಲ್ಲಿ ಸಿಬ್ಬಂದಿ ಕೊರತೆ ನೀಗಿಸಲು ಮುಂದಿನ ವರ್ಷಗಳಲ್ಲಿ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಅವರು ಹೇಳಿದರು.
ವಿಧಾನಸಭೆಯ ಉಪ ಸಭಾಧ್ಯಕ್ಷ ಆನಂದ ಮಾಮನಿ ಮಾತನಾಡಿ, ಜಿಲ್ಲೆಯಲ್ಲಿ ಹೆಸರು ಸಂಪೂರ್ಣ ನಾಶವಾಗಿದ್ದು, ಹತ್ತಿ ಕೂಡ ಹಾನಿಗೊಳಗಾಗುತ್ತಿದೆ. ಧಾರವಾಡ ಹಾಗೂ ಬೆಳಗಾವಿ ಜಿಲ್ಲೆಯ ಬೆಳೆವಿಮೆ ನಡುವಿನ ವ್ಯತ್ಯಾಸವನ್ನು ಸರಿಪಡಿಸಲು ಕ್ರಮ ಕೈಗೊಳ್ಳಬೇಕು. 2008ರಿಂದ ಬೆಳೆವಿಮೆಯ ವ್ಯತ್ಯಾಸ ಆಗುತ್ತಿದೆ. ಈ ಬಗ್ಗೆ ಹಲವಾರು ಬಾರಿ ಚರ್ಚೆ ನಡೆಸಿದಾಗ್ಯೂ ಇದುವರೆಗೆ ಸರಿಪಡಿಸುವುದು ಸಾಧ್ಯವಾಗಿಲ್ಲ ಎಂದರು.
ಬೆಳೆವಿಮೆ ಪರಿಹಾರ ವ್ಯತ್ಯಾಸ ಸರಿಪಡಿಸಲು ಹವಾಮಾನ ಆಧಾರಿತವಾಗಿ ಪರಿಹಾರ ಮೊತ್ತವನ್ನು ನಿಗದಿಪಡಿಸಿ ವ್ಯತ್ಯಾಸ ಸರಿಪಡಿಸಬಹುದು. ಈ ನಿಟ್ಟಿನಲ್ಲಿ ಅಧಿಕಾರಿಗಳು ಪರಿಶೀಲಿಸಿ ಕ್ರಮಕೈಗೊಳ್ಳಬೇಕು ಎಂದು ಸಚಿವ ಬಿ.ಸಿ.ಪಾಟೀಲ್ ನಿರ್ದೇಶನ ನೀಡಿದರು.
ಕಿತ್ತೂರು ಶಾಸಕ ಮಹಾಂತೇಶ ದೊಡಗೌಡ್ರ ಮಾತನಾಡಿ, ಫೆಡರೇಶನ್ ಹಾಗೂ ಇಲಾಖೆಯ ನಡುವೆ ಸಮನ್ವಯ ಸಾಧಿಸಿದರೆ ಯೂರಿಯಾ ಸಮರ್ಪಕ ವಿತರಣೆ ಸಾಧ್ಯವಾಗಲಿದೆ. ಆದ್ದರಿಂದ ಮುಂದಿನ ವರ್ಷಗಳಲ್ಲಿ ಸಮನ್ವಯತೆ ಸಾಧಿಸಲು ಕ್ರಮಕೈಗೊಳ್ಳಬೇಕು. ಕಿತ್ತೂರು ತಾಲೂಕಿಗೆ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರ ಹುದ್ದೆ ಹಾಗೂ ಅಗತ್ಯ ಅನುದಾನವನ್ನು ತಕ್ಷಣವೇ ಮಂಜೂರು ಮಾಡಬೇಕು ಎಂದು ಮನವಿ ಮಾಡಿಕೊಂಡರು.
ವಿಧಾನ ಪರಿಷತ್ತಿನ ಸರಕಾರದ ಮುಖ್ಯ ಸಚೇತಕರಾದ ಮಹಾಂತೇಶ ಕವಟಗಿವ್ಮಠ ಮಾತನಾಡಿ, ಬೆಳೆ ಸಮೀಕ್ಷೆ ಸಂದರ್ಭದಲ್ಲಿ ಭಾಷೆಯ ಸಮಸ್ಯೆ ನೆಪದಲ್ಲಿ ಗುರಿಸಾಧನೆ ಕುಂಠಿತಗೊಳ್ಳಬಾರದು. ಆದುದರಿಂದ, ಬೆಳಗಾವಿ ಮತ್ತು ಖಾನಾಪುರ ತಾಲೂಕುಗಳಲ್ಲಿ ಭಾಷಾ ಸಮಸ್ಯೆ ಬಗೆಹರಿಸಿ ಆದಷ್ಟು ಬೇಗನೆ ಸಮೀಕ್ಷೆ ಪೂರ್ಣಗೊಳಿಸಬೇಕು. ಸರಕಾರದ ಕಣ್ಣಿಗೆ ಮಣ್ಣೆರೆಚಿ ರೈತರನ್ನು ವಂಚಿಸುವ ವಿಮಾ ಕಂಪನಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಕೃಷಿ ಜ್ಞಾನ ಆಪ್ ಬಿಡುಗಡೆ: ರೈತರಿಗೆ ಬೇಸಾಯ ಕ್ರಮಗಳು, ಬೆಳೆಗೆ ತಗಲುವ ವಿವಿಧ ರೋಗಗಳ ನಿಯಂತ್ರಣ, ಔಷಧಿ ಸಿಂಪರಣೆ ಸೇರಿದಂತೆ ವಿವಿಧ ಬಗೆಯ ಧ್ವನಿ ಹಾಗೂ ದೃಶ್ಯ ಆಧಾರಿತ ಮಾಹಿತಿಯನ್ನು ನೀಡುವ ವಿಶೇಷ "ಕೃಷಿ ಜ್ಞಾನ ಆಪ್" ಅನ್ನು ಕೃಷಿ ಸಚಿವರಾದ ಬಿ.ಸಿ.ಪಾಟೀಲ್ ಇದೇ ಸಂದರ್ಭದಲ್ಲಿ ಬಿಡುಗಡೆಗೊಳಿಸಿದರು.
ರೈತರು ತಮ್ಮ ಸಮಸ್ಯೆಗಳು ಮತ್ತು ಸವಾಲುಗಳಿಗೆ ಕೃಷಿ ತಜ್ಞರ ಮೂಲಕ ಸಲಹೆಗಳನ್ನು ಪಡೆಯಬಹ್ಮದು. ಜಿಲ್ಲೆಯ ಕೃಷಿಯ ಸಮಗ್ರ ವಿವರಗಳನ್ನು ಹೊಂದಿರುವ ಕೃಷಿ ಜ್ಞಾನ ಆಪ್ ನಲ್ಲಿ ರೈತರು ಕಾಲ ಕಾಲಕ್ಕೆ ಎದುರಾಗುವ ಸಮಸ್ಯೆಗಳು ಮತ್ತು ನಿವಾರಣೋಪಾಯಗಳ ಕುರಿತು ಕಿರು ವಿಡಿಯೋ ಮೂಲಕ ಮಾಹಿತಿಯನ್ನು ಪಡೆದುಕೊಳ್ಳಬಹುದಾಗಿದೆ ಎಂದು ಅವರು ಹೇಳಿದರು.
ಶಾಸಕ ಅನಿಲ್ ಬೆನಕೆ, ಕೃಷಿ ಇಲಾಖೆಯ ನಿರ್ದೇಶಕ ಬಿ.ವೈ.ಶ್ರೀನಿವಾಸ್, ಜಂಟಿ ನಿರ್ದೇಶಕ ಶಿವನಗೌಡ ಪಾಟೀಲ್ ಕೃಷಿ ಉಪನಿರ್ದೇಶಕ ಡಾ.ಎಚ್.ಡಿ.ಕೋಳೇಕರ, ಕೃಷಿ ವಿಶ್ವವಿದ್ಯಾನಿಲಯದ ಕುಲಪತಿ ಎಂ.ಬಿ.ಚಿಟ್ಟಿ, ಕೃಷಿ ಇಲಾಖೆಯ ಅಪರ ನಿರ್ದೇಶಕ ದಿವಾಕರ ಮತ್ತಿತರ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.