ಮುಷ್ಕರ ಕೈ ಬಿಡುವಂತೆ ವೈದ್ಯರಲ್ಲಿ ಸಚಿವ ಡಾ.ಕೆ.ಸುಧಾಕರ್ ಮನವಿ
ಬೆಂಗಳೂರು, ಸೆ.15: ಆರ್ಥಿಕ ದುಸ್ಥಿತಿಯಲ್ಲೂ ವೈದ್ಯರ ವೇತನ ಪರಿಷ್ಕರಿಸಲು ಸರಕಾರ ಒಪ್ಪಿದ್ದು, ಮುಷ್ಕರ ಕೈ ಬಿಡುವಂತೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ವೈದ್ಯರಲ್ಲಿ ಮನವಿ ಮಾಡಿದ್ದಾರೆ.
ವೈದ್ಯರ ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆ ಸಂಬಂಧ ಮುಷ್ಕರಕ್ಕೆ ಕರೆ ಕೊಟ್ಟಿದ್ದ ವೈದ್ಯಾಧಿಕಾರಿಗಳ ಸಂಘದ ಪದಾಧಿಕಾರಿಗಳೊಂದಿಗೆ ಮಂಗಳವಾರ ವಿಧಾನಸೌಧದಲ್ಲಿ ಸಭೆ ನಡೆಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ವೈದ್ಯರ ಬೇಡಿಕೆಯಾದ ವೇತನ ಪರಿಷ್ಕರಣೆ ಸಂಬಂಧ ನಡೆಸಿದ ಸಭೆ ಫಲಪ್ರದವಾಗಿದೆ. ವೈದ್ಯರು ಆರೋಗ್ಯ ಕ್ಷೇತ್ರದಲ್ಲಿ ವಸ್ತು ನಿಷ್ಠೆಯಿಂದ ಕರ್ತವ್ಯ ನಿಭಾಯಿಸುತ್ತಿದ್ದಾರೆ. ಅವರಿಗೆ ನೈತಿಕ ಸ್ಪೂರ್ತಿ ಕೊಡುವ ನಿಟ್ಟಿನಲ್ಲಿ ಈ ನಿರ್ಧಾರ ಕೈಗೊಂಡಿದ್ದೇವೆ ಎಂದು ಅವರು ತಿಳಿಸಿದರು.
ಕಳೆದ ಆರು ತಿಂಗಳಲ್ಲಿ ಆರೋಗ್ಯ ಇಲಾಖೆಯ ಎಲ್ಲಾ ಪ್ರಸ್ತಾವನೆಗಳಿಗೂ ಮುಖ್ಯಮಂತ್ರಿ ಒಪ್ಪಿದ್ದಾರೆ. ಅದರಂತೆ ಈ ಬೇಡಿಕೆಯು ಈಡೇರಲಿದೆ. ಆರ್ಥಿಕ ಇತಿಮಿತಿಯಲ್ಲಿ ಹೆಚ್ಚು ಮಾಡಲು ಕ್ರಮ ಕೈಗೊಳ್ಳುತ್ತೇವೆ. ಈ ಸಂಬಂಧ ಆರ್ಥಿಕ ಇಲಾಖೆಗೆ ಪೂರ್ಣ ಮಾಹಿತಿ ನೀಡಿದ್ದೇವೆ ಎಂದು ಸುಧಾಕರ್ ತಿಳಿಸಿದರು.
ವೈದ್ಯರಿಗೆ 6 ವರ್ಷ, 13 ವರ್ಷ ಹಾಗೂ 20 ವರ್ಷ ಸೇವೆ ಆಧಾರದ ಮೇಲೆ ಮೂರು ಹಂತದ ಭಡ್ತಿ ಮತ್ತು ವೇತನ ಪರಿಷ್ಕರಣೆ ಆಗಬೇಕಿದೆ. ಈ ಬಗ್ಗೆ ಪದಾಧಿಕಾರಿಗಳಿಂದ ಮಾಹಿತಿ ಪಡೆಯಲಾಗಿದೆ. ಇದರಿಂದ ಸರಕಾರಕ್ಕೆ ಹೆಚ್ಚಿನ ಹೊರೆ ಬೀಳಲಿದೆ. ಆದರೂ ಸಹ ವೈದ್ಯರ ಬೇಡಿಕೆಗೆ ಮನ್ನಣೆ ನೀಡಲಿದ್ದೇವೆ ಎಂದು ಅವರು ಹೇಳಿದರು.
ಸಭೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ.ಶ್ರೀರಾಮುಲು, ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ, ವೈದ್ಯಾಧಿಕಾರಿಗಳ ಸಂಘದ ಪದಾಧಿಕಾರಿಗಳು ಪಾಲ್ಗೊಂಡಿದ್ದರು.
ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಮುಷ್ಕರ ನಡೆಸುತ್ತಿದ್ದ ವೈದ್ಯಾಧಿಕಾರಿಗಳ ಸಂಘದ ಜೊತೆ ಸಭೆ ನಡೆಸಿ, ಅವರ ಹಲವು ಬೇಡಿಕೆಗಳನ್ನು ಈಡೇರಿಸಲು ನಿರ್ಧರಿಸಲಾಗಿದೆ. ಈ ಬಗ್ಗೆ ವೈದ್ಯಾಧಿಕಾರಿಗಳ ಸಂಘವು ತಮ್ಮ ಸದಸ್ಯರ ಜೊತೆ ಚರ್ಚೆ ನಡೆಸಿ, ಸೆ.18ರಂದು ಮುಷ್ಕರ ಕೈ ಬಿಡುವ ಬಗ್ಗೆ ನಿರ್ಧಾರ ಪ್ರಕಟಿಸುವುದಾಗಿ ತಿಳಿಸಿದ್ದಾರೆ.
-ಬಿ.ಶ್ರೀರಾಮುಲು, ಆರೋಗ್ಯ ಸಚಿವ