ಶಿವಮೊಗ್ಗದಲ್ಲಿ ಮುಂದಿನ 15 ದಿನ ವ್ಯಾಪಕ ಕೊರೋನ ಪರೀಕ್ಷೆ: ಜಿಲ್ಲಾಧಿಕಾರಿ ಸೂಚನೆ
ಶಿವಮೊಗ್ಗ,ಸೆ.25: ಕೊರೋನ ನಿಯಂತ್ರಿಸುವ ಕ್ರಮವಾಗಿ ಮುಂದಿನ 15 ದಿನಗಳ ಕಾಲ ಜಿಲ್ಲೆಯಾದ್ಯಂತ ವ್ಯಾಪಕವಾಗಿ ಕೊರೋನ ಪರೀಕ್ಷೆಯನ್ನು ನಡೆಸುವಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಸೂಚನೆ ನೀಡಿದರು.
ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಮಟ್ಟದ ಸವೇಕ್ಷಣಾ ಸಮಿತಿ ಸಭೆಯಲ್ಲಿ ಮಾತನಾಡಿದರು. ಮುಂದಿನ 15ದಿನಗಳ ಕಾಲ ಪ್ರತಿದಿನ ಕನಿಷ್ಠ 3ಸಾವಿರ ವ್ಯಕ್ತಿಗಳಿಗೆ ಕೊರೋನ ಪರೀಕ್ಷೆ ನಡೆಸಬೇಕು. ಪ್ರತಿದಿನ 2 ಸಾವಿರ ಆರ್ಟಿಪಿಸಿಆರ್ ಮತ್ತು 1 ಸಾವಿರ ರ್ಯಾಪಿಡ್ ಆಂಟಿಜನ್ ಟೆಸ್ಟ್ ನಡೆಸಬೇಕು. ಪ್ರತಿ ಗ್ರಾಮ ಪಂಚಾಯತ್ ವ್ಯಾಪ್ತಿಯಿಂದ ಹಿಡಿದು ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಸಮುದಾಯ ಆರೋಗ್ಯ ಕೇಂದ್ರಗಳು, ತಾಲೂಕು ಆಸ್ಪತ್ರೆಗಳಲ್ಲಿ ಸಹ ಕೊರೋನ ತಪಾಸಣೆ ನಡೆಸಬೇಕು. ಇದಕ್ಕೆ ಅಗತ್ಯವಾದ ತಪಾಸಣಾ ಕಿಟ್ಗಳನ್ನು ಪೂರೈಕೆ ಮಾಡಲಾಗುವುದು ಎಂದು ಅವರು ಹೇಳಿದರು.
ಸಿದ್ಧತೆ: ಕೊರೋನ ಪರೀಕ್ಷೆ ಹೆಚ್ಚಳಕ್ಕೆ ಪೂರಕವಾಗಿ ಪಾಸಿಟಿವ್ ವ್ಯಕ್ತಿಗಳಿಗೆ ಸೂಕ್ತ ಚಿಕಿತ್ಸೆ ಒದಗಿಸಲು ಎಲ್ಲಾ ವ್ಯವಸ್ಥೆಯನ್ನು ಮಾಡಬೇಕು. ರೋಗ ಲಕ್ಷಣವಿಲ್ಲದ ಕೊರೋನ ಪೀಡಿತರಿಗೆ ಹೋಂ ಕ್ವಾರೆಂಟೈನ್ ವ್ಯವಸ್ಥೆ ಕಲ್ಪಿಸಬೇಕು. ಹೋಂ ಕ್ವಾರೆಂಟೈನ್ನಲ್ಲಿರುವವರ ಆರೋಗ್ಯದ ಮೇಲೆ ನಿಗಾ ಇರಿಸಲು ವೈದ್ಯಾಧಿಕಾರಿಗಳನ್ನು ಒಳಗೊಂಡ ತಂಡಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ರಚಿಸಬೇಕು. ರೋಗ ಲಕ್ಷಣವಿರುವ ಮತ್ತು ಚಿಕಿತ್ಸೆ ಅಗತ್ಯವಿರುವರನ್ನು ಮಾತ್ರ ಮೆಗ್ಗಾನ್ ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ದಾಖಲಿಸಬೇಕು. ಕೋವಿಡ್ ಆಸ್ಪತ್ರೆಗಳಲ್ಲಿ ಸೂಕ್ತ ಪ್ರಮಾಣದಲ್ಲಿ ಆಕ್ಸಿಜನ್ ಲಭ್ಯತೆಯನ್ನು ಖಾತ್ರಿಪಡಿಸಬೇಕು. ಮೆಗ್ಗಾನ್ ಆವರಣದಲ್ಲಿ ಇನ್ನೊಂದು ಆಕ್ಸಿಜನ್ ಪ್ಲಾಂಟ್ ಆರಂಭಿಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಅವರು ತಿಳಿಸಿದರು.
ಮೆಗ್ಗಾನ್ ಪರ್ಯಾಯ ವ್ಯವಸ್ಥೆ: ಕೊರೋನ ಹೆಚ್ಚಾಗುತ್ತಿರುವ ಇಂತಹ ಸಂದರ್ಭದಲ್ಲಿ ಮೆಗ್ಗಾನ್ ಆಸ್ಪತ್ರೆ ಹೊರಭಾಗದಲ್ಲಿ ಸೇವಾ ಭದ್ರತೆ ಹಾಗೂ ಇನ್ನಿತರ ಬೇಡಿಕೆಗಳನ್ನು ಮುಂದಿರಿಸಿ ಹೊರ ಗುತ್ತಿಗೆ ಸಿಬ್ಬಂದಿಗಳು ನಡೆಸುತ್ತ್ರಿರುವ ಪ್ರತಿಭಟನೆ ದುರದೃಷ್ಟಕರ. ಹೊರಗುತ್ತಿಗೆ ನೌಕರರ ಬೇಡಿಕೆಗಳನ್ನು ತಾಂತ್ರಿಕ ಕಾರಣಗಳಿಂದ ಅಂಗೀಕರಿಸಲು ಸರ್ಕಾರದ ಹಂತದಲ್ಲಿ ಸಾಧ್ಯವಾಗಿಲ್ಲ. ಬೇಡಿಕೆಗಳನ್ನು ಈಡೇರಿಸಲು ಜಿಲ್ಲಾಡಳಿತ ತನ್ನಿಂದಾದ ಎಲ್ಲಾ ಪ್ರಯತ್ನಗಳನ್ನು ಮಾಡಿದೆ. ಪ್ರಸ್ತುತ ಮೆಗ್ಗಾನ್ ಆಸ್ಪತ್ರೆಯಲ್ಲಿ 350 ಮಂದಿ ಕೊರೋನಾ ಪೀಡಿತರು ಚಿಕಿತ್ಸೆ ಪಡೆಯುತ್ತಿದ್ದು, ಇಂತಹ ಸೂಕ್ಷ್ಮ ಸಂದರ್ಭದಲ್ಲಿ ಸೇವೆ ಸಲ್ಲಿಸಬೇಕಾದವರು ಪ್ರತಿಭಟನೆ ನಡೆಸುತ್ತಿರುವುದು ಸರಿಯಲ್ಲ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಹೊರಗುತ್ತಿಗೆ ನೌಕರರ ಸಮಸ್ಯೆಗಳನ್ನು ಬಗೆಹರಿಸಲು ಎಲ್ಲಾ ರೀತಿಯ ಪ್ರಯತ್ನಗಳನ್ನು ಮುಂದುವರಿಸಲಾಗಿದೆ. ಅವರಿಗೆ ಕಾನೂನುಬದ್ಧವಾಗಿ ನೀಡಬೇಕಾಗಿರುವ ಎಲ್ಲಾ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ಕೊರೋನ ಪೀಡಿತರ ಸಂಖ್ಯೆ ಹೆಚ್ಚಳದಿಂದ ಇರುವ ಸಿಬ್ಬಂದಿಗಳ ಮೇಲೆ ಒತ್ತಡ ಹೆಚ್ಚಾಗುತ್ತಿದ್ದು ಹೆಚ್ಚಿನ ಸಿಬ್ಬಂದಿಗಳ ಅಗತ್ಯವಿದೆ. ಸಿಬ್ಬಂದಿಗಳನ್ನು ನೇಮಕ ಮಾಡಿಕೊಳ್ಳಲು ಅನುಮತಿ ನೀಡುವಂತೆ ಶಿಮ್ಸ್ ನಿರ್ದೇಶಕ ಡಾ.ಸಿದ್ಧಪ್ಪ ಅವರು ಮನವಿ ಮಾಡಿದರು.
ಕ್ರಿಮಿನಲ್ ಮೊಕದ್ದಮೆ: ಕೊರೋನ ಪೀಡಿತರ ಚಿಕಿತ್ಸೆಗೆ ಯಾವುದೇ ಕುಂದುಂಟಾಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಅನುಮೋದನೆಗೊಂಡಿರುವ ಹುದ್ದೆಗಳಿಗೆ ತಕ್ಷಣ ಎರಡು ದಿನಗಳ ಒಳಗಾಗಿ ಪರ್ಯಾಯ ಸಿಬ್ಬಂದಿಗಳನ್ನು ನೇಮಕ ಮಾಡಿಕೊಳ್ಳಬೇಕು. ಇಂತಹ ಸಾಂಕ್ರಾಮಿಕ ರೋಗದ ತುರ್ತು ಸಂದರ್ಭದಲ್ಲಿ ಕಾನೂನು ಬಾಹಿರ ಚಟುವಟಿಕೆ ನಡೆಸುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಜಿಲ್ಲಾಧಿಕಾರಿ ಅವರು ಶಿಮ್ಸ್ ನಿರ್ದೇಶಕರಿಗೆ ಸೂಚನೆ ನೀಡಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್.ವೈಶಾಲಿ, ಅಪರ ಜಿಲ್ಲಾಧಿಕಾರಿ ಜಿ.ಅನುರಾಧ, ಜಿಲ್ಲಾ ಸರ್ಜನ್ ಡಾ.ರಘುನಂದನ್ ಮತ್ತಿತರರು ಸಭೆಯಲ್ಲಿ ಉಪಸ್ಥಿತರಿದ್ದರು.