ಕಾವೇರಿ ನೀರು ತಕರಾರು ಅರ್ಜಿ ಸುಪ್ರೀಂನಲ್ಲಿ ಇಂದು ಮಧ್ಯಾಹ್ನ 2 ಗಂಟೆಗೆ ವಿಚಾರಣೆ
ಬೆಂಗಳೂರು, ಸೆ.27: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿ ರಾಜ್ಯ ಸರಕಾರ ಸುಪ್ರೀಂ ಕೋರ್ಟ್ನಲ್ಲಿ ಸಲ್ಲಿರುವ ಆದೇಶ ಮಾರ್ಪಾಡು ಅರ್ಜಿಯ ವಿಚಾರಣೆ ಇಂದು ಮಧ್ಯಾಹ್ನ 2 ಗಂಟೆಗೆ ವಿಚಾರಣೆ ನಡೆಯಲಿರುವ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರ ವಹಿಸಲು ಬೆಂಗಳೂರು ನಗರ, ಮಂಡ್ಯ ಜಿಲ್ಲೆಯಾದ್ಯಂತ ಬಿಗಿ ಪೊಲೀಸ್ ಬಂದೋ ಬಸ್ತ್ ಮಾಡಲಾಗಿದೆ.
ಮಂಡ್ಯದ ಐದು ತಾಲೂಕುಗಳಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಕರ್ನಾಟಕ ತನ್ನ ಅರ್ಜಿಯನ್ನು ಸುಪ್ರೀಂ ಕೋರ್ಟ್ ರಿಜಿಸ್ಚ್ರಾರ್ ಅವರಿಗೆ ಸಲ್ಲಿಸಿದ್ದು, ಈ ಹಿಂದೆ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ದೀಪಕ್ ಮಿಶ್ರಾ ಮತ್ತು ನ್ಯಾಯಮೂರ್ತಿ ಉದಯ್ ಲಲಿತ್ ಅವರನ್ನೊಳಗೊಂಡ ಸುಪ್ರೀಂ ಕೋರ್ಟ್ ನ ವಿಭಾಗೀಯ ಪೀಠವು ಕರ್ನಾಟಕ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಲಿದೆ ಎಂದು ತಿಳಿದುಬಂದಿದೆ
ರಾಜ್ಯದಲ್ಲಿ ಕುಡಿಯಲು ಮಾತ್ರ ನೀರಿದೆ. ತಮಿಳುನಾಡಿಗೆ ಕೊಡಲು ನೀರಿಲ್ಲ. ಸೆ.27ರ ತನಕ ತಮಿಳುನಾಡಿಗೆ ಆರು ಸಾವಿರ ಕ್ಯುಸೆಕ್ ಕಾವೇರಿ ನೀರು ಬಿಡಬೇಕೆಂದು ನೀಡಿರುವ ಆದೇಶವನ್ನು ಬದಲಾಯಿಸುವಂತೆ ಕೋರಿ ಕರ್ನಾಟಕ ಸರಕಾರ ಸೋಮವಾರ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿತ್ತು. ಇತ್ತೀಚೆಗೆ ವಿಧಾನ ಮಂಡಲದ ಉಭಯ ಸದನಗಳ ವಿಶೇಷ ಅಧಿವೇಶನದಲ್ಲಿ ‘ ಕಾವೇರಿ ಕೊಳ್ಳದ ಡ್ಯಾಂಗಳ ನೀರನ್ನು ಕುಡಿಯುವುದಕ್ಕೆ ಮಾತ್ರ ಉಪಯೋಗಿಸುವ’ ಕುರಿತು ಐತಿಹಾಸಿಕ ನಿರ್ಧಾರ ಕೈಗೊಳ್ಳಲಾಗಿತ್ತು. ಈ ವಿಚಾರವನ್ನು ರಾಜ್ಯದ ಪರ ವಕೀಲರು ಸುಪ್ರೀಂ ಕೋರ್ಟ್ನ ಗಮನ ಸೆಳೆಯಲಿದ್ದಾರೆ.
.‘ಇದೇ ವೇಳೆ ಸೆ. 5, 12 ಮತ್ತು 20ರಂದು ಹೊರಡಿಸಿರುವ ಆದೇಶವನ್ನು ಪಾಲಿಸುವಂತೆ ಕರ್ನಾಟಕಕ್ಕೆ ಸೂಚಿಸಬೇಕು. ಆದೇಶ ಪಾಲನೆಯಾಗುವ ತನಕ ಕರ್ನಾಟಕ ಸಲ್ಲಿಸಿರುವ ಆದೇಶ ಮಾರ್ಪಾಡು ಅರ್ಜಿಯ ವಿಚಾರಣೆ ನಡೆಸದಂತೆ ತಮಿಳುನಾಡು ಸುಪ್ರೀಂ ಕೋರ್ಟ್ಗೆ ಸೋಮವಾರ ಆಕ್ಷೇಪಣೆ ಅರ್ಜಿ ಸಲ್ಲಿಸಿದೆ.
ಎರಡೂ ಅರ್ಜಿಗಳ ವಿಚಾರಣೆ ಸುಪ್ರೀಂ ಕೋರ್ಟ್ನಲ್ಲಿ ನಡೆಯಲಿರುವ ಹಿನ್ನೆಲೆಯಲ್ಲಿ ಈ ತನಕ ನಿರಾಶೆ ಅನುಭವಿಸಿದ್ದ ಕರ್ನಾಟಕ ಮತ್ತೆ ಆತಂಕದಿಂದಲೇ ಸುಪ್ರೀಂ ಕೋರ್ಟ್ನ ಆದೇಶವನ್ನು ಕಾದು ನೋಡುವಂತಾಗಿದೆ.