ರೈತರಿಗೆ ಬ್ಯಾಂಕ್ ನೊಟೀಸ್ ನೀಡಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ
ಮಳವಳ್ಳಿಯಲ್ಲಿ ವಿವಿಧ ಕಾಮಗಾರಿಗಳಿಗೆ ಚಾಲನೆ
ಮಂಡ್ಯ, ಎ.20: ಬರದ ಹಿನ್ನೆಲೆಯಲ್ಲಿ ರೈತರ ಸಾಲ ವಸೂಲಿಗೆ ಒತ್ತಡ ತರಬಾರದೆಂದು ಸೂಚಿಸಲಾಗಿದ್ದು, ಇದನ್ನು ಮೀರಿ ನೊಟೀಸ್ ಜಾರಿಗೊಳಿಸಿದರೆ ಬ್ಯಾಂಕ್ ಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಸಿದ್ದಾರೆ.
ಮಳವಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಗುರುವಾರ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಉತ್ತಮ ಮಳೆಯಾಗಿ ರೈತರು ಬೆಳೆ ಬೆಳೆಯುವವರೆಗೂ ಸಾಲ ವಸೂಲಿಗೆ ನೊಟೀಸ್ ಜಾರಿಗೊಳಿಸದಂತೆ ಸೂಚಿಸಲಾಗಿದೆ. ಸೂಚನೆ ನೀಡಿದ್ದರೂ ಕೆಲವು ರಾಷ್ಟ್ರೀಕೃತ ಬ್ಯಾಂಕುಗಳು ಸಾಲ ವಸೂಲಿ ಸಂಬಂಧ ರೈತರಿಗೆ ನೊಟೀಸ್ ಜಾರಿ ಮಾಡುತ್ತಿವೆ. ಕೇಂದ್ರ ಸರಕಾರವೂ ಸಾಲ ವಸೂಲಿ ಮಾಡದಂತೆ ಬ್ಯಾಂಕ್ಗಳಿಗೆ ಸೂಚಿಸಬೇಕು ಎಂದು ಅವರು ಒತ್ತಾಯಿಸಿದರು.
ರಾಷ್ಟ್ರೀಕೃತ ಬ್ಯಾಂಕ್ಗಳ ರೈತರ ಸಾಲಮನ್ನಾ ಮಾಡಲು ಕೇಂದ್ರ ಸರಕಾರವನ್ನು ಕೋರಿದ್ದರೂ ಸ್ಪಂದಿಸಿಲ್ಲ. ಈ ಸಂಬಂಧ ಕೇಂದ್ರದ ಮೇಲೆ ಒತ್ತಡ ತರುವ ಬದಲು ರಾಜ್ಯದ ಬಿಜೆಪಿ ನಾಯಕರು ನಮ್ಮ ಸರಕಾರದ ಬಗ್ಗೆ ಬೊಬ್ಬೆ ಹಾಕುತ್ತಾರೆ ಎಂದು ಅವರು ಕಿಡಿಕಾರಿದರು.
ಹಿಂದೆಂದೂ ಕಂಡಯರಿದ ಬರಗಾಲವನ್ನು ರಾಜ್ಯ ಎದುರಿಸುತ್ತಿದ್ದು, ರೈತಾಪಿ, ಜನಸಾಮಾನ್ಯ ಜನರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ರಾಜ್ಯ ಸರಕಾರ ಜನಜಾನುವಾರುಗಳಿಗೆ ಕುಡಿಯುವ ನೀರು, ಮೇವು ಒದಗಿಸಲು ಕ್ರಮವಹಿಸಿದೆ. ಸರಕಾರ ನುಡಿದಂತೆ ನಡೆಯುತ್ತಿದೆ. ಪ್ರಣಾಳಿಕೆಯಲ್ಲಿ ನೀಡಿದ್ದ ಶೇ.95ರಷ್ಟು ಭರವಸೆಗಳು ಈಡೇರಿವೆ. ರಾಜ್ಯವನ್ನು ಹಸಿವುಮುಕ್ತ ರಾಜ್ಯವನ್ನಾಗಿಸಲು ದಿಟ್ಟ ಹೆಜ್ಜೆ ಇಡಲಾಗಿದೆ. ರೈತರ ಸಬಲೀಕರಣಕ್ಕೆ ಯೋಜನೆಗಳನ್ನು ರೂಪಿಸಲಾಗಿದೆ ಎಂದು ಸಿದ್ದರಾಮಯ್ಯ ವಿವರಿಸಿದರು.
ಬಿಜೆಪಿ ಸರಕಾರಕ್ಕಿಂತಲೂ ಹೆಚ್ಚು ಹಣವನ್ನು ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ, ಹಿಂದುಳಿದ ವರ್ಗದ ಅಭಿವೃದ್ಧಿಗೆ ಮೀಸಲಿರಿಟ್ಟಿದ್ದು, ದಲಿತರ ಬಗ್ಗೆ ಮಾತನಾಡುವ ನೈತಿಕತೆ ಬಿಜೆಪಿಯವರಿಗೆ ಇಲ್ಲ ಎಂದು ಅವರು ಟೀಕಿಸಿದರು. ನರೇಂದ್ರಸ್ವಾಮಿ ಅವರನ್ನು ಮಂತ್ರಿ ಮಾಡಲಾಗಿಲ್ಲ. ಆದರೆ, ಮಂತ್ರಿಗಿಂತಲೂ ಹೆಚ್ಚಿನ ಅಭಿವೃದ್ಧಿ ಕಾರ್ಯವನ್ನು ಮಾಡಿದ್ದಾರೆ. ಮಳವಳ್ಳಿ ಕ್ಷೇತ್ರದ ಅಭಿವೃದ್ಧಿಗೆ ಇಷ್ಟ ದೊಡ್ಡ ಪ್ರಮಾಣದ ಅನುದಾನವನ್ನು ಬೇರೆ ಯಾವ ಸರಕಾರವೂ ನೀಡಿರಲಿಲ್ಲ ಎಂದು ಸಿದ್ದರಾಮಯ್ಯ ಶ್ಲಾಘಿಸಿದರು.
ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ ಮಾತನಾಡಿ, ಸರಕಾರ ನೀರಾವರಿ ಯೋಜನೆಗಳಿಗೆ ಆದ್ಯತೆ ನೀಡಿದೆ. ಮಂಡ್ಯ ಜಿಲ್ಲೆಯ ನೀರಾವರಿ ಯೋಜನೆಗಳಿಗೆ ಹೆಚ್ಚು ಹಣವನ್ನು ಬಿಡುಗಡೆ ಮಾಡಲಾಗಿದೆ ಎಂದರು.
ಇಂಧನ ಸಚಿವ ಡಿ.ಕೆ.ಶಿವಕುಮಾರ್ ಮಾತನಾಡಿ, ನಿರಂತರ ಬರಗಾಲದ ನಡುವೆಯೂ ದಿನಕ್ಕೆ 8 ರಿಂದ 10 ಗಂಟೆ ಕಾಲ ವಿದ್ಯುತ್ ಸರಬರಾಜು ಮಾಡಲಾಗುತ್ತಿದೆ. ಇದನ್ನು ತಿಳಿಯದೆ ವಿಪಕ್ಷಗಳು ಟೀಕೆ ಮಾಡುತ್ತಿವೆ. ಮಳವಳ್ಳೀ ಕ್ಷೇತ್ರದ ನೀರಾವರಿ ಯೋಜನೆಗಳಿಗೆ ಮುಖ್ಯಮಂತ್ರಿ ಹೆಚ್ಚು ಅನುದಾನ ನೀಡಿದ್ದಾರೆ. ಮಳವಳ್ಳಿ ತಾಲೂಕಿನಲ್ಲಿ 1 ಸಾವಿರ ಕೋಟಿ ರೂ. ವೆಚ್ಚದಲ್ಲಿ ವಿದ್ಯುತ್ ಉತ್ಪಾದನಾ ಘಟಕ ಸ್ಥಾಪಿಸಲು ಚಿಂತನೆ ನಡೆದಿದೆ ಎಂದೂ ಅವರು ತಿಳಿಸಿದರು.
ಸ್ಥಳೀಯ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಮಾತನಾಡಿ, ಕ್ಷೇತ್ರದ ಜನರ ಋಣ ತೀರಿಸಲು ಪ್ರಾಮಾಣಿಕ ಪ್ರಯತ್ನ ನಡೆಸುತ್ತಿದ್ದೇನೆ. ನನ್ನ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿ ಹೆಚ್ಚು ಅನುದಾನ ನೀಡಿದ್ದಾರೆ ಎಂದರು.
ಕಾನೂನು ಸಚಿವ ಟಿ.ಬಿ.ಜಯಚಂದ್ರ, ಜಿಲ್ಲಾ ಉಸ್ತುವಾರಿ ಸಚಿವ ಎಂ.ಕೃಷ್ಣಪ್ಪ ಮಾತನಾಡಿದರು. ತೋಟಗಾರಿಕೆ ಸಚಿವ ಈಶ್ವರ ಬಿ.ಖಂಡ್ರೆ, ಕಾಂಗ್ರೆಸ್ ಮುಖಂಡರು ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.