ಅಲ್ಪಸಂಖ್ಯಾತರ ಕಚೇರಿ ಸಂಕೀರ್ಣ ಕಾಮಗಾರಿಗೆ ಚಾಲನೆ
ಮಂಡ್ಯ, ಎ.25: ಇಲ್ಲಿನ ವಿವೇಕಾನಂದ ನಗರದ ಕೆರೆಯಂಗಳದಲ್ಲಿ ಜಿಲ್ಲಾಡಳಿತ, ಜಿಪಂ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ನಿರ್ಮಿಸುತ್ತಿರುವ ಅಲ್ಪ ಸಂಖ್ಯಾತರ ಇಲಾಖೆ ಕಚೇರಿಗಳ ಸಂಕೀರ್ಣ, ಮೌಲಾನಾ ಆಜಾದ್ ಭವನ ಹಾಗೂ ವಿದ್ಯಾರ್ಥಿನಿಲಯದ ಕಾಮಗಾರಿಗೆ ಜಿಲ್ಲಾ ಉಸ್ತುವಾರಿ ಸಚಿವ ಎಂ.ಕೃಷ್ಣಪ್ಪ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಜಿಲ್ಲೆಯಲ್ಲಿ 90 ಸಾವಿರಕ್ಕೂ ಹೆಚ್ಚು ಅಲ್ಪಸಂಖ್ಯಾತರಿದ್ದಾರೆ. 220 ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ವಸತಿ ಸೌಕರ್ಯ ಕಲ್ಪಿಸಿದ್ದು, ವಿದ್ಯಾರ್ಥಿಗಳ ಶಿಕ್ಷಣಕ್ಕೆ ಸರಕಾರ ವಿದ್ಯಾರ್ಥಿ ವೇತನ ನೀಡುತ್ತಿದೆ ಎಂದರು.
ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳಿಗೆ 1,000 ರೂ.ನಿಂದ 5,000 ರೂ.ವರೆಗೆ ವಿದ್ಯಾರ್ಥಿವೇತನ, ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ 10 ಸಾವಿರ ರೂ.ಗಳ ಅಧ್ಯಯನ ಕಿಟ್ ನೀಡಲಾಗುತ್ತಿದೆ. ವಿದೇಶದಲ್ಲಿ ವ್ಯಾಸಂಗ ಮಾಡುವವರಿಗೆ 10 ಲಕ್ಷ ರೂ. ವಿದ್ಯಾರ್ಥಿವೇತನ ನೀಡಲಾಗುತ್ತಿದೆ. ರಾಜ್ಯ ಸರಕಾರ ಬರ ನಿರ್ವಹಣೆ ಕಾಮಗಾರಿಯನ್ನು ಸಮರ್ಪಕವಾಗಿ ಮಾಡುತ್ತಿದ್ದು, ಕುಡಿಯುವ ನೀರು, ಜಾನುವಾರುಗಳ ಮೇವಿಗೆ ತೊಂದರೆಯಾಗದಂತೆ ಕ್ರಮ ವಹಿಸುತ್ತಿದೆ ಎಂದರು.
ಈ ಸಂದರ್ಭ ಜಿಪಂ ಸಿಇೊ ಬಿ.ಶರತ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಎಸ್.ಆತ್ಮಾನಂದ, ನಗರಾಧ್ಯಕ್ಷ ಮುಹಮ್ಮದ್ ಜಬೀವುಲ್ಲಾ, ನಗರಸಭೆ ಅಧ್ಯಕ್ಷ ಹೊಸಹಳ್ಳಿ ಬೋರೇಗೌಡ, ಎಂಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ಕೀಲಾರ ಕೃಷ್ಣ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾಧಿಕಾರಿ ಪ್ರದೀಪ್ ಸಿಂಹ, ಭೂ ಸೇನಾ ನಿಗಮದ ಅಧಿಕಾರಿ ಮಲ್ಲಪ್ಪ, ಗುತ್ತಿಗೆದಾರ ಸೋಮಶೇಖರ್, ಜಿಲ್ಲಾ ವಕ್ಫ್ ಸಲಹಾ ಸಮಿತಿ ಅಧ್ಯಕ್ಷ ಜಬೀಉಲ್ಲಾಖಾನ್ ಇತರರು ಹಾಜರಿದ್ದರು.