ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಮತ್ತೊಮ್ಮೆ ಅಧಿಕಾರಕ್ಕೆ: ಮೋಟಮ್ಮ
ಮೂಡಿಗೆರೆ, ಮೇ 6: ಬಿಜೆಪಿಗರ ಒಳಜಗಳ ಮುಂದಿನ ಅಸೆಂಬ್ಲಿ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಲಾಭವಾಗಲಿದ್ದು, ಮುಂದಿನ ಬಾರಿಯೂ ಕಾಂಗ್ರೆಸ್ ಸರಕಾರ ಅಸ್ತಿತ್ವಕ್ಕೆ ಬರಲಿದೆ ಎಂದು ಎಂಎಲ್ಸಿ ಡಾ.ಮೋಟಮ್ಮ ವಿಶ್ವಾಸ ವ್ಯಕ್ತಪಡಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸದ್ಯದಲ್ಲೇ ಕೆಪಿಸಿಸಿ ರಾಜ್ಯಾಧ್ಯಕ್ಷರ ಬದಲಾವಣೆಯಾಗಲಿದೆ. ಈವರೆಗೆ 6 ವರ್ಷಗಳ ಕಾಲ ಅಧ್ಯಕ್ಷರಾಗಿದ್ದ ಡಾ.ಜಿ.ಪರಮೇಶ್ವರ್ ಪರಿಣಾಮಕಾರಿಯಾಗಿ ಪಕ್ಷವನ್ನು ಮುನ್ನಡೆಸಿದ್ದಾರೆ. ಸಾಮೂಹಿಕವಾಗಿ ಪಕ್ಷವನ್ನು ಸಂಘಟಿಸುವ ಮೂಲಕ ಮತ್ತೊಮ್ಮೆ ಪಕ್ಷವನ್ನು ಅಧಿಕಾರಕ್ಕೆ ತರುವ ಸಾಮರ್ಥ್ಯ ಉಳ್ಳವರು ಮುಂದಿನ ಅಧ್ಯಕ್ಷರಾಗಲಿದ್ದಾರೆ. ಕೆಪಿಸಿಸಿ ಅಧ್ಯಕ್ಷರಾಗಲು ತನಗೆ ಆಸೆ ಇದೆ. ಆದರೆ ಆಕಾಂಕ್ಷಿಯಲ್ಲ. ಮಹಿಳೆಯೊಬ್ಬರನ್ನು ಅಧ್ಯಕ್ಷರಾಗಿಸುವ ಇಂಗಿತವನ್ನು ಹೈಕಮಾಂಡ್ ವ್ಯಕ್ತಪಡಿಸಿ ತನಗೆ ಅಧ್ಯಕ್ಷಗಾದಿ ನೀಡಿದರೆ ಸಮರ್ಥವಾಗಿ ಪಕ್ಷವನ್ನು ಸಂಘಟಿಸುವುದಾಗಿ ತಿಳಿಸಿದರು.
ತಾನು ಹಾಗೂ ಗಾಯತ್ರಿ ಶಾಂತೇಗೌಡ, ಕೆ.ಮಹಮ್ಮದ್ ಅವರಿಗೆ ಒಲಿದಿದ್ದ ಸಿಡಿಎ ಅಧ್ಯಕ್ಷ ಸ್ಥಾನವನ್ನು ತಪ್ಪಿಸಿದ್ದೇವೆ ಎಂಬುವ ಆರೋಪದಲ್ಲಿ ಹುರುಳಿಲ್ಲ ಎಂದ ಅವರು, ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ಬಲಿಷ್ಟವಾಗಿದೆ. ಮುಂದಿನ ಚುನಾವಣೆಯಲ್ಲಿ ಜಿಲ್ಲೆಯ ಐದೂ ಸ್ಥಾನವನ್ನು ಕಾಂಗ್ರೆಸ್ ತನ್ನ ತೆಕ್ಕೆಗೆ ಪಡೆದುಕೊಳ್ಳಲಿದೆ. ಕಾಂಗ್ರೆಸ್ ಸರಕಾರ ಮುಸ್ಲಿಮರನ್ನು ದೂರವಿಟ್ಟಿಲ್ಲ. ಮುಸ್ಲಿಮರು ಕಾಂಗ್ರೆಸ್ ಪಕ್ಷದ ಪರವಾಗಿದ್ದಾರೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.