ನಗರಸಭೆ ನಿರ್ಲಕ್ಷ್ಯಕ್ಕೆ ಖಂಡನೆ : ರಸ್ತೆ ಅವ್ಯವಸ್ಥೆ ವಿರುದ್ಧ ಪ್ರತಿಭಟನೆ
ಮಡಿಕೇರಿ, ಜು.25 :ಶಾಲಾ-ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರು ಹಾಗೂ ಪ್ರವಾಸಿಗರ ಸಂಚಾರ ಹೆಚ್ಚಾಗಿರುವ ನಗರದ ಕಾನ್ವೆಂಟ್ ಜಂಕ್ಷನ್ ಬಳಿಯ ರಸ್ತೆಗಳು ಸಂಪೂರ್ಣ ಹದಗೆಟ್ಟಿದ್ದರು, ದುರಸ್ತಿ ಕಾರ್ಯ ನಡೆಸಬೇಕಾದ ನಗರಸಭೆÉ ಈ ಬಗ್ಗೆ ನಿರ್ಲಕ್ಷ್ಯ ವಹಿಸಿದೆ ಎಂದು ಆರೋಪಿಸಿ ಶ್ರೀ ಮಹಾಗಣಪತಿ ಸೇವಾ ಸಮಿತಿ ಹಾಗೂ ಬಿಜೆಪಿ ಪ್ರಮುಖರು ರಸ್ತೆ ತಡೆ ಪ್ರತಿಭಟನೆ ನಡೆಸಿದರು.
ವಿಜಯನಗರ ಬಡಾವಣೆಯ ಕಾನ್ವೆಂಟ್ ಜಂಕ್ಷನ್ನಲ್ಲಿ ಮಂಗಳವಾರ ಬೆಳಗ್ಗೆ ಸಮಿತಿಯ ಪದಾಧಿಕಾರಿಗಳು ಸೇರಿದಂತೆ ಬಿಜೆಪಿ ಪ್ರಮುಖರು ಮತ್ತು ಸಾರ್ವಜನಿಕರು ಪ್ರತಿಭಟನೆ ನಡೆಸಿ ನಗರಸಭೆ ವಿರುದ್ಧ ಘೋಷಣೆಗಳನ್ನು ಕೂಗಿದರು. ರಸ್ತೆಯ ನಡುವೆಯೆ ಅಂಗಡಿ ತೆರೆದು, ನಗರಸಭೆಯ ಸದಸ್ಯರು ಮತ್ತು ಅಧಿಕಾರಿಗಳನ್ನು ಹೀಗಳೆಯುವ ಬ್ಯಾನರ್ ಅಳವಡಿಸಿ ವಿಶಿಷ್ಟ ರೀತಿಯಲ್ಲಿ ಪ್ರತಿಭಟನೆ ನಡೆಸಿದರು.
ಶ್ರೀ ಮಹಾಗಣಪತಿ ಸೇವಾ ಸಮಿತಿಯ ಮುಖಂಡರು ಮಾತನಾಡಿ, ಮಳೆಗಾಲ ಪ್ರಾರಂಭವಾಗಿ ಎರಡು ತಿಂಗಳು ಕಳೆಯುವುದರ ಒಳಗಾಗಿ ಮಡಿಕೇರಿ ನಗರದ ಕಾನ್ವೆಂಟ್ ಜಂಕ್ಷನ್ನ ಸುತ್ತಮುತ್ತಲಿನ ರಸ್ತೆಗಳು ಸಂಪೂರ್ಣವಾಗಿ ಹದಗೆಟ್ಟಿವೆ. ರಸ್ತೆಯಲ್ಲಿ ಹೊಂಡ ಗುಂಡಿಗಳು ನಿರ್ಮಾಣವಾಗಿ ನಡೆದಾಡಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಕುರಿತು ನಗರ ಸಭೆಗೆ ಹಲವಾರು ಬಾರಿ ಮನವಿಗಳನ್ನು ಸಲ್ಲಿಸಿದ್ದರು ಸೂಕ್ತ ಸ್ಪಂದನ ದೊರಕಿಲ್ಲವೆಂದು ಆಕ್ರೋಶ ವ್ಯಕ್ತಪಡಿಸಿದರು.
ನಗರಸಭೆಗೆ ಬೀಗ ಎಚ್ಚರಿಕೆ
ಕಾನ್ವೆಂಟ್ ಜಂಕ್ಷನ್, ಮುತ್ತಪ್ಪ ದೇವಾಲಯ ರಸ್ತೆ, ಕಾನ್ವೆಂಟ್ನಿಂದ ಕೂರ್ಗ್ ಇಂಟರ್ನ್ಯಾಷನಲ್ವರೆಗಿನ ಹದಗೆಟ್ಟ ರಸ್ತೆಗಳನ್ನು ಮುಂದಿನ 15 ದಿನಗಳ ಒಳಗಾಗಿ ದುರಸ್ತಿ ಪಡಿಸಲು ಅಗತ್ಯ ಕ್ರಮ ಕೈಗೊಳ್ಳದಿದ್ದಲ್ಲಿ ನಗರಸಭೆಗೆ ಬೀಗ ಜಡಿದು ಪ್ರತಿಭಟನೆ ನಡೆಸುವುದಾಗಿ ಇದೇ ಸಂದರ್ಭ ಎಚ್ಚರಿಕೆ ನೀಡಿದರು.
ಸ್ಥಳಕ್ಕೆ ಪೌರಾಯುಕ್ತರು
ಪ್ರತಿಭಟನೆಯ ಸ್ಥಳಕ್ಕೆ ಭೇಟಿ ನೀಡಿದ ಪೌರಾಯುಕ್ತರಾದ ಬಿ.ಶುಭ ಪ್ರತಿಭಟನಾಕಾರರೊಂದಿಗೆ ಮಾತನಾಡಿ, ಕಾನ್ವೆಂಟ್ ಜಂಕ್ಷನ್ ಬಳಿಯ ರಸ್ತೆಗಳ ಬಳಿಯ ದುರಸ್ತಿಗೆ ಈಗಾಗಲೆ ನಿರ್ಧರಿಸಲಾಗಿದೆ. ಕ್ರಿಯಾಯೋಜನೆ ಸಿದ್ಧಪಡಿಸಿ, ನಗರಸಭೆಯ ಸರ್ವ ಸದಸ್ಯರ ಸಭೆಯಲ್ಲಿ ಅನುಮೋದನೆ ಪಡೆದು ಹದಿನೈದು ದಿನಗಳ ಒಳಗೆ ಕಾಮಗಾರಿ ನಡೆಸುವುದಾಗಿ ಭರವಸೆ ನೀಡಿದರು.
ಮಡಿಕೇರಿ ನಗರಸಭೆಯ ಆಡಳಿತ ಸೂತ್ರ ಕಾಂಗ್ರೆಸ್ ಹಿಡಿದುಕೊಂಡು ಅಧ್ಯಕ್ಷರಾಗಿ ಅದೇ ಪಕ್ಷದವರು ಇದ್ದಾರಾದರು, ಉಪಾಧ್ಯಕ್ಷರು ಮತ್ತು ಸ್ಥಾಯಿ ಸಮಿತಿ ಸ್ಥಾನಗಳನ್ನು ಬಿಜೆಪಿ ಪಡೆದುಕೊಂಡಿದೆ. ಈ ಹಿನ್ನೆಲೆಯಲ್ಲಿ ಪುರದ ನಿವಾಸಿಗಳ ಬೇಡಿಕೆಗಳಿಗೆ ಅನುಗುಣವಾಗಿ ಕಾಮಗಾರಿಗಳನ್ನು ನಡೆಸುವ ಜವಾಬ್ದಾರಿ ಬಿಜೆಪಿ ಪ್ರಮುಖರ ಮೇಲೂ ಇದೆ. ಹೀಗಿದ್ದೂ ಇಂದು ನಗರ ಬಿಜೆಪಿ ಪ್ರಮುಖರು ಪ್ರತಿಭಟನೆಯಲ್ಲಿ ಪಾಲ್ಗೊಂಡು ನಗರಸಭೆಯ ಸದಸ್ಯರುಗಳ ವಿರುದ್ಧ ಆರೋಪಗಳನ್ನು ಮಾಡುತ್ತಿದ್ದುದು ಕಂಡು ಬಂತು.
ಪ್ರತಿಭಟನೆಯಲ್ಲಿ ಶ್ರೀ ಮಹಾಗಣಪತಿ ಸೇವಾ ಸಮಿತಿ ಪದಾಧಿಕಾರಿಗಳು, ದೇಶಪ್ರೇಮಿ ಯುವಕ ಸಂಘದ ಅಧ್ಯಕ್ಷ ಅರುಣ್ ಶೆಟ್ಟಿ, ನಗರ ಬಿಜೆಪಿ ಅಧ್ಯಕ್ಷರಾದ ಮಹೇಶ್ ಜೈನಿ, ಟೌನ್ ಬ್ಯಾಂಕ್ ಅಧ್ಯಕ್ಷರಾದ ಜಗದೀಶ್ ಸೇರಿದಂತೆ ಹಲವು ಮಂದಿ ಪಾಲ್ಗೊಂಡಿದ್ದರು.