ನಾಡ ಪ್ರಭು ಕೆಂಪೇಗೌಡರ ಜಯಂತಿ: ಅರ್ಥಪೂರ್ಣವಾಗಿ ಆಚರಿಸಲು ನಿರ್ಧಾರ
ಚಿಕ್ಕಮಗಳೂರು, ಜು.28: ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮವನ್ನು ಆ.30ರಂದು ಜಿಲ್ಲಾಡಳಿತದಿಂದ ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಯಿತು.
ಶುಕ್ರವಾರ ಕೆಂಪೇಗೌಡ ಜಯಂತಿ ಆಚರಣೆ ಕುರಿತಂತೆ ಜಿಲ್ಲಧಿಕಾರಿ ಕಛೇರಿಯಲ್ಲಿ ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಒಕ್ಕಲಿಗ ಸಮಾಜದ ಮುಖಂಡರೊಂದಿಗೆ ಸಭೆ ನಡೆಸಿದ ಅಪರ ಜಿಲ್ಲಾಧಿಕಾರಿ ಎಂ.ಎಲ್ ವೈಶಾಲಿ, ಜಿಲ್ಲಾ ಮಟ್ಟದಲ್ಲಿ ಪ್ರಪ್ರಥಮವಾಗಿ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಿಸಲಾಗುವುದು. ಈ ಸಂಬಂಧ ಎಲ್ಲಾ ಸಿದ್ದತೆಗಳ ಕುರಿತು ಸಂಬಂಧಿಸಿದ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದರು.
ಆ.30 ರಂದು ಕುವೆಂಪು ಕಲಾಮಂದಿರದಲ್ಲಿ ಬೆಳಿಗ್ಗೆ 11ಗಂಟೆಗೆ ಕಾರ್ಯಕ್ರಮ ಆಯೋಜಿಸಲಾಗುವುದು. ಇದಕ್ಕೂ ಮುನ್ನ ವಿವಿಧ ಜಾನಪದ ಕಲಾ ತಂಡಗಳೊಂದಿಗೆ ನಗರದ ತಾಲ್ಲೂಕು ಕಛೇರಿಯಿಂದ ಬೆಳಿಗ್ಗೆ 10 ಗಂಟೆಗೆ ನಾಡ ಪ್ರಭು ಕೆಂಪೇಗೌಡರ ಭಾವಚಿತ್ರದೊಂದಿಗೆ ಮೆರವಣಿಗೆ ನಡೆಯಲಿದೆ. ಸಭಾ ಕಾರ್ಯಕ್ರಮಕ್ಕೆ ಶಿಷ್ಟಾಚಾರದಂತೆ ಎಲ್ಲಾ ಜನಪ್ರತಿನಿಧಿಗಳು, ಗಣ್ಯರನ್ನು ಆಹ್ವಾನಿಸಲಾಗುವುದು ಹಾಗೂ ನಾಡ ಪ್ರಭು ಕೆಂಪೇಗೌಡ ಕುರಿತಂತೆ ತಜ್ಞರಿಂದ ಉಪನ್ಯಾಸ ನೀಡಲಿದ್ದಾರೆ ಎಂದರು.
ಜಯಂತಿ ಆಚರಣೆ ಕುರಿತು ಹೆಚ್ಚಿನ ಪ್ರಚಾರ ನೀಡಬೇಕು. ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು.
ಇದೇ ಸಂದರ್ಭದಲ್ಲಿ ಕಾರ್ಯಕ್ರಮದ ಯಶಸ್ವಿಗೆ ವಿವಿಧ ಉಪ ಸಮಿತಿಗಳನ್ನು ರಚಿಸಲಾಯಿತು.
ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ. ರಮೇಶ್, ಜಿಲ್ಲಾಒಕ್ಕಲೀಗರ ಸಂಘದ ಅಧ್ಯಕ್ಷಡಾ.ಡಿ. ಎಲ್. ವಿಜಯ ಕುಮಾರ್, ಬ್ರಾಹ್ಮಣ ಸಂಘದ ಅಧ್ಯಕ್ಷ ಮಂಜುನಾಥ್, ಜೊಷಿ ಜೈನ ಸಂಘದ ಅಧ್ಯಕ್ಷ ಗೌತಮ್ ಚಂದ್ ಸಿಯಾಲ್, ಮುಖಂಡರುಗಳಾದ ರಾಧಾಕೃಷ್ಣ, ಎಸ್.ಚಂದ್ರಪ್ಪ, ಶಿವಾನಂದಸ್ವಾಮಿ, ಹೆಚ್.ಪಿ.ಮಂಜುನಾಥ್, ಜಿಲ್ಲಾ ಮಟ್ಟದ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು.