ಗ್ರಾಮೀಣ ವಿದ್ಯಾರ್ಥಿಗಳು ಶೈಕ್ಷಣಿಕ ಸಾಧನೆ ಮಾಡಬೇಕು: ಡಿವೈಎಸ್ಪಿ ನಾಗಪ್ಪ
ಮಡಿಕೇರಿ, ಆ.13: ಖಾಸಗಿ ಶಾಲೆ ವಿದ್ಯಾರ್ಥಿಗಳಿಗೆ ಸರ್ಕಾರಿ ಶಾಲೆ ಮಕ್ಕಳು ಪೈಪೋಟಿಯೊಡ್ಡುತ್ತಿರುವುದು ಉತ್ತಮ ಬೆಳವಣಿಗೆ. ಗ್ರಾಮೀಣ ಮಕ್ಕಳ ಸರ್ವತೋಮುಖ ಬೆಳವಣಿಗೆಯಲ್ಲಿ ಶಿಕ್ಷಕರ ಪಾತ್ರ ಅಪಾರ ಎಂದು ವಿರಾಜಪೇಟೆ ಉಪವಿಭಾಗದ ಡಿವೈಎಸ್ಪಿ ನಾಗಪ್ಪ ಅಭಿಪ್ರಾಯಪಟ್ಟಿದ್ದಾರೆ.
2016-17ನೇ ಶೈಕ್ಷಣಿಕ ಸಾಲಿನಲ್ಲಿ ಶೇ.100 ಫಲಿತಾಂಶ ಪಡೆದ ಟಿ.ಶೆಟ್ಟಿಗೇರಿ ಮಾಯಣಮಾಡ ಮಂದಣ್ಣ ಸ್ಮಾರಕ ಪ್ರೌಢಶಾಲೆ ಶಿಕ್ಷಕರಿಗೆ ಜಿಲ್ಲಾ ದಲಿತ ಸಂಘರ್ಷ ಸಮಿತಿ ವತಿಯಿಂದ ನಡೆದ ಸನ್ಮಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಗ್ರಾಮೀಣ ಶಾಲಾ ವಿದ್ಯಾರ್ಥಿಗಳನ್ನು ಶೈಕ್ಷಣಿಕ ಸಾಲಿನ ಸಾಧನೆಯಲ್ಲಿ ಶಿಕ್ಷಕರ ಪಾತ್ರ ಅಪಾರವಾಗಿದೆ. ಸ್ಪರ್ಧಾತ್ಮಕ ಪ್ರಪಂಚದಲ್ಲಿ ಹಳ್ಳಿಗಾಡಿನ ವಿದ್ಯಾರ್ಥಿಗಳು ಇಂದು ಮುಖ್ಯವಾಹಿನಿಗೆ ಬರುತ್ತಿರುವುದು ಸಂತಸದ ವಿಚಾರ. ಶಿಕ್ಷಕರೊಂದಿಗೆ ಪೋಷಕರು ಕೂಡ ಕೈಜೋಡಿಸಿದರೆ ಮಕ್ಕಳು ಮತ್ತಷ್ಟು ಸಾಧನೆ ಮಾಡಲು ಸಾಧ್ಯವಾಗಿದೆ. ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲಿ ಪಾಲ್ಗೊಂಡು ದೈಹಿಕವಾಗಿ ಸದೃಢರಾಗಬೇಕು. ಶಿಸ್ತು, ಸಂಯಮ, ಸಮಯ ಪಾಲನೆ ಮೈಗೂಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ದಸಂಸ ಜಿಲ್ಲಾಧ್ಯಕ್ಷ ಹೆಚ್.ಎಲ್.ದಿವಾಕರ್ ಮಾತನಾಡಿ, ಶಿಕ್ಷಕರು ದೈವ ಸಮಾನರಾಗಿದ್ದು, ಪ್ರತಿಯೊಬ್ಬರೂ ಗೌರವಿಸಬೇಕೆಂದರು.
ಪ್ರೌಢ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಯ ಅರಿವು ವಿದ್ಯಾರ್ಥಿಗಳಿಗೆ ತಿಳಿಯಬೇಕು. ಸರ್ಕಾರಿ ಉದ್ಯೋಗಗಳನ್ನು ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಪಡೆದುಕೊಳ್ಳಬೇಕು ಎಂದರು.
ಅರ್ಥಿಕವಾಗಿ ಹಿಂದುಳಿದ ಪೋಷಕರು ಕೂಡ ಅಂಗ್ಲ ಮಾಧ್ಯಮ ಶಾಲೆಯತ್ತ ಅಕರ್ಷಿತಗೊಳ್ಳುತ್ತಿದ್ದಾರೆ. ಸರ್ಕಾರಿ ಶಾಲೆಯಲ್ಲೂ ಕೂಡ ಉತ್ತಮ ವಿದ್ಯಾಬ್ಯಾಸ ಒದಗಿಸುತ್ತಿದ್ದು, ಇದನ್ನು ಮನಗಾಣಬೇಕು. ಅಂಬೆಡ್ಕರ್ ತತ್ವ ಸಿದ್ದಾಂತಗಳನ್ನು ವಿದ್ಯಾರ್ಥಿಗಳು ಅಳವಡಿಸಿಕೊಳ್ಳಬೇಕೆಂದು ದಸಂಸ ವಿಭಾಗೀಯ ಸಂಚಾಲಕ ವೀರಭದ್ರಯ್ಯ ಹೇಳಿದರು.
ಗ್ರಾ.ಪಂ ಅಧ್ಯಕ್ಷ ಮಚ್ಚಮಾಡ ಸುಮಂತ್ ಮಾತನಾಡಿ, ಹಿರಿಯರ ಕನಸ್ಸಿನಿಂದ ಗ್ರಾಮದಲ್ಲಿ ಪ್ರೌಢಶಾಲೆ ನಿರ್ಮಾಣವಾಗಿದ್ದು, ಕಳೆದ 4 ವರ್ಷಗಳಿಂದ ಶಾಲೆ ಶೇ.100 ರಷ್ಟುಫಲಿತಾಂಶ ಪಡೆಯುತ್ತಿರುವುದರಿಂದ ಗ್ರಾಮದ ಹಿರಿಮೆ ಹೆಚ್ಚಿಸಿದೆ. ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳು ಇದೇ ರೀತಿ ಕಠಿಣ ಶ್ರಮದಿಂದ ಉತ್ತಮ ಅಂಕ ಪಡೆದು ಸಾಧನೆ ಮಾಡಲಿ ಎಂದು ಶುಭ ಹಾರೈಸಿದರು.
ಶಾಲೆಯ ಮುಖ್ಯ ಶಿಕ್ಷಕಿ ಹಾಗೂ ಸಹ ಶಿಕ್ಷಕರನ್ನುಸನ್ಮಾನಿಸಿ ಗೌರವಿಸಲಾಯಿತು.
ತಾ.ಪಂ ಸದಸ್ಯರಾದಸರೋಜ, ದಾನಿ ಮಾಯಣಮಾಡ ಪೂಣಚ್ಚ, ದಸಂಸ ಸಂಘಟನಾಸಂಚಾಲಕ ರವಿ, ಎಸ್ಡಿಎಂಸಿ ಅಧ್ಯಕ್ಷ ದತ್ತಾ ಉಪಸ್ಥಿತರಿದ್ದರು.