ಹಾಂಕಾಂಗ್ ಓಪನ್: ಶ್ರೀಕಾಂತ್ ಕ್ವಾರ್ಟರ್ ಫೈನಲ್ ಪ್ರವೇಶ, ಪ್ರಣಯ್ಗೆ ಸೋಲು
ಹಾಂಕಾಂಗ್, ನ.14: ಕಿಡಂಬಿ ಶ್ರೀಕಾಂತ್ ಏಳು ತಿಂಗಳ ಬಳಿಕ ಮೊದಲ ಬಾರಿ ಕ್ವಾರ್ಟರ್ ಫೈನಲ್ ತಲುಪಿದರು. ಗುರುವಾರ ಇಲ್ಲಿ ನಡೆದ 400,000 ಯುಎಸ್ ಡಾಲರ್ ಬಹುಮಾನ ಮೊತ್ತದ ಹಾಂಕಾಂಗ್ ಓಪನ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಶ್ರೀಕಾಂತ್ ಅಂತಿಮ-8ರ ಹಂತ ತಲುಪಿದರು. ವಿಶ್ವದ ಮಾಜಿ ನಂ.1 ಆಟಗಾರ ಶ್ರೀಕಾಂತ್ ಪುರುಷರ ಸಿಂಗಲ್ಸ್ನ ಎರಡನೇ ಸುತ್ತಿನ ಪಂದ್ಯದಲ್ಲಿ ಸಹ ಆಟಗಾರ ಸೌರಭ್ ವರ್ಮಾರನ್ನು 21-11, 15-21, 21-19 ಗೇಮ್ಗಳ ಅಂತರದಿಂದ ಮಣಿಸಿದರು. ಈ ವಾರ ಬಿಡುಗಡೆಯಾದ ಬಿಡಬ್ಲುಎಫ್ ರ್ಯಾಂಕಿಂಗ್ನಲ್ಲಿ 13ನೇ ಸ್ಥಾನಕ್ಕೆ ಜಾರಿದ್ದ ಶ್ರೀಕಾಂತ್ ಎಪ್ರಿಲ್ನಲ್ಲಿ ಸಿಂಗಾಪುರ ಓಪನ್ನಲ್ಲಿ ಕೊನೆಯ ಬಾರಿ ಕ್ವಾರ್ಟರ್ ಫೈನಲ್ ತಲುಪಿದ್ದರು. ಗುಂಟೂರಿನ ಶಟ್ಲರ್ ಶ್ರೀಕಾಂತ್ ಮೊದಲ ಸುತ್ತಿನಲ್ಲಿ ಬೈ ಪಡೆದಿದ್ದರು. ವಿಶ್ವದ ನಂ.1 ಆಟಗಾರ ಕೆಂಟೊ ಮೊಮೊಟಾ ಮೊದಲ ಸುತ್ತಿನ ಸ್ಪರ್ಧೆಯಿಂದ ಹಿಂದೆ ಸರಿದ ಕಾರಣ ಶ್ರೀಕಾಂತ್ ಎರಡನೇ ಸುತ್ತಿಗೆ ತೇರ್ಗಡೆಯಾಗಿದ್ದರು. ಶ್ರೀಕಾಂತ್ ಕ್ವಾರ್ಟರ್ ಫೈನಲ್ನಲ್ಲಿ ಒಲಿಂಪಿಕ್ಸ್ ಚಾಂಪಿಯನ್ ಚೆನ್ ಲಾಂಗ್ರನ್ನು ಎದುರಿಸಲಿದ್ದಾರೆ.
ಇದಕ್ಕೂ ಮೊದಲು ನಡೆದ ಮತ್ತೊಂದು ಪುರುಷರ ಸಿಂಗಲ್ಸ್ ವಿಭಾಗದ ಎರಡನೇ ಸುತ್ತಿನ ಪಂದ್ಯದಲ್ಲಿ ಎಚ್.ಎಸ್.ಪ್ರಣಯ್ ಇಂಡೋನೇಶ್ಯದ ಜೋನಾಥನ್ ಕ್ರಿಸ್ಟಿಗೆ 12-21, 19-21 ಗೇಮ್ಗಳ ಅಂತರದಿಂದ ಸೋತಿದ್ದಾರೆ.