ಎಐಸಿಸಿ ಅಧ್ಯಕ್ಷರಾಗಿ ರಾಹುಲ್ ಗಾಂಧಿ ಪದಗ್ರಹಣ
ಹೊಸದಿಲ್ಲಿ, ಡಿ.16: ಕಾಂಗ್ರೆಸ್ ಪಕ್ಷದ ಮುಖ್ಯ ಕಚೇರಿಯಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ರಾಹುಲ್ ಗಾಂಧಿ ಪಕ್ಷದ ಅಧ್ಯಕ್ಷರಾಗಿ ಅಧಿಕಾರವಹಿಸಿಕೊಂಡಿದ್ದಾರೆ. ಈ ಮೂಲಕ ಕಾಂಗ್ರೆಸ್ ಸಾರಥ್ಯವಹಿಸಿಕೊಂಡ ಆರನೇ ವ್ಯಕ್ತಿ ಎನಿಸಿಕೊಂಡಿದ್ದಾರೆ. ದಿಲ್ಲಿಯ ಅಕ್ಬರ್ ರೋಡ್ನಲ್ಲಿರುವ ಕಾಂಗ್ರೆಸ್ ಮುಖ್ಯ ಕಚೇರಿಯಲ್ಲಿ ಅಧಿಕಾರ ಹಸ್ತಾಂತರ ಕಾರ್ಯಕ್ರಮ ನಡೆದಿದ್ದು, ಕಾರ್ಯಕ್ರಮದಲ್ಲಿ 3,000ಕ್ಕೂ ಅಧಿಕ ಗಣ್ಯರು ಭಾಗವಹಿಸಿದ್ದರು.
ಪದಗ್ರಹಣ ಕಾರ್ಯಕ್ರಮಕ್ಕೆ ಮೊದಲು ಕಚೇರಿಯ ಹೊರಭಾಗದಲ್ಲಿ ಪಕ್ಷದ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ತಿಂಡಿ ಹಂಚಿ ಸಂಭ್ರಮಾಚರಣೆ ಮಾಡಿದರು. ರಾಹುಲ್ ಗಾಂಧಿ ಪರ ಘೋಷಣೆಗಳನ್ನು ಕೂಗಿದರು.
ಯುತ್ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ರಾತ್ರಿಯಿಂದಲೇ ಸಂಭ್ರಮ ಕಳೆ ಕಟ್ಟಿದ್ದು, ಕಚೇರಿಗೆ ದೀಪಾಲಂಕಾರ ಮಾಡಲಾಗಿತ್ತು. ಪಕ್ಷದ ಕಾರ್ಯಕರ್ತರು ಡ್ರಮ್ ನಾದಕ್ಕೆ ಹೆಜ್ಜೆ ಹಾಕುತ್ತಿದ್ದಾರೆ. ರಾಹುಲ್ 2013ರಿಂದ ಪಕ್ಷದ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದು, ಇಂದು ತಾಯಿ ಸೋನಿಯಾ ಗಾಂಧಿ ಅವರಿಂದ ಪಕ್ಷದ ಅಧ್ಯಕ್ಷ ಸ್ಥಾನವಹಿಸಿಕೊಂಡಿದ್ದಾರೆ.
ಕೇಂದ್ರ ಚುನಾವಣೆ ಪ್ರಾಧಿಕಾರದ ಅಧ್ಯಕ್ಷ ಎಂ. ರಾಮಚಂದ್ರನ್ ಅವರು ರಾಹುಲ್ ಗಾಂಧಿ ಅವರಿಗೆ ಪಕ್ಷದ ಅಧ್ಯಕ್ಷರಾಗಿ ಆಯ್ಕೆಯಾದ ಪ್ರಮಾಣಪತ್ರವನ್ನು ಹಸ್ತಾಂತರಿಸಿದ್ದಾರೆ.
ಶುಕ್ರವಾರ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸೋನಿಯಾ ಗಾಂಧಿ, ನನ್ನ ಪಾತ್ರ ಇನ್ನು ಮುಂದೆ ನಿವೃತ್ತಿಯಾಗುವುದು ಎಂದು ಹೇಳಿಕೆ ನೀಡಿದ್ದರು. ಆದರೆ, ಅವರ ಹೇಳಿಕೆ ಪಕ್ಷದ ಹಿರಿಯ ನಾಯಕರಲ್ಲಿ ತಳಮಳ ಉಂಟು ಮಾಡಿದ್ದು, ಪಕ್ಷದಲ್ಲಿ ಮಾರ್ಗದರ್ಶಕರಾಗಿ ಮುಂದುವರಿಯಬೇಕೆಂದು ಒತ್ತಾಯಿಸುತ್ತಿದ್ದಾರೆ.
ಸೋನಿಯಾ 1998ರಲ್ಲಿ ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದರು. 132 ವರ್ಷ ಹಳೆಯ ಪಕ್ಷದ ಅಧ್ಯಕ್ಷರಾಗಿ ಸುಮಾರು 2 ದಶಕಗಳ ಕಾಲ ಕಾರ್ಯನಿರ್ವಹಿಸಿದ್ದರು. ಸೋನಿಯಾ ನಾಯಕತ್ವದಲ್ಲಿ ಯುಪಿಎ ಮೈತ್ರಿಕೂಟ ಸತತ ಎರಡು ಬಾರಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಿತ್ತು. ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನ ಹಸ್ತಾಂತರ ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್, ಸೋನಿಯಾ ಗಾಂಧಿ, ಹಾಲಿ ಹಾಗೂ ಮಾಜಿ ಮುಖ್ಯಮಂತ್ರಿಗಳು, ಸಂಸದರು, ಹಿರಿಯ ಕಾಂಗ್ರೆಸ್ ನಾಯಕರು ಹಾಗೂ ಎಲ್ಲ ಪಿಸಿಸಿ ಮುಖ್ಯಸ್ಥರು ಹಾಗೂ ನಿಯೋಗಗಳು ಉಪಸ್ಥಿತರಿರುತ್ತಾರೆ.
ವಿದಾಯದ ಭಾಷಣ ಮಾಡಿದ ಸೋನಿಯಾ
ಅತ್ತೆ ಇಂದಿರಾಜಿ ನನ್ನನ್ನು ಮಗಳಂತೆ ಕಂಡರು. ಅವರ ಹತ್ಯೆಯಾದಾಗ ತಾಯಿಯನ್ನು ಕಳೆದುಕೊಂಡ ಅನುಭವವಾಯಿತು. ಅವರು ನನನಗೆ ಭಾರತೀಯ ಸಂಸ್ಕೃತಿಯನ್ನು ಕಲಿಸಿದರು. ರಾಜೀವ್ ವಿವಾಹದ ಬಳಿಕ ನನಗೆ ರಾಜಕೀಯ ಪರಿಚಯವಾಯಿತು. ಕಾಂಗ್ರೆಸ್ ದುರ್ಬಲವಾಗಿದ್ದಾಗ ನಾನು ಪಕ್ಷದ ಅಧ್ಯಕ್ಷೆಯಾಗಿ ಆಯ್ಕೆಯಾಗಿದ್ದೆ. ಆಗ ನನಗೆ ಕಠಿಣ ಸವಾಲು ಎದುರಾಗಿತ್ತು. ಆಗ ಕಾಂಗ್ರೆಸ್ 3 ರಾಜ್ಯದಲ್ಲಿ ಅಧಿಕಾರದಲ್ಲಿತ್ತು. ಇದು ಪಕ್ಷದ ಅಧ್ಯಕ್ಷೆಯಾಗಿ ಇದು ನನ್ನ ಕೊನೆಯ ಭಾಷಣ ಎಂದು ಸೋನಿಯಾ ಗಾಂಧಿ ತಮ್ಮ ವಿದಾಯದ ಭಾಷಣದಲ್ಲಿ ಹೇಳಿದ್ದಾರೆ.
ಸಾಂವಿಧಾನಿಕ ಸಂಸ್ಥೆಗಳ ಮೇಲೆ ದಾಳಿ ನಡೆಯುತ್ತಿದೆ. ಇದಕ್ಕೆ ನಾವು ಹೆದರುವುದಿಲ್ಲ ಎಂದು ಮೋದಿ ಸರಕಾರದ ವಿರುದ್ಧ ಸೋನಿಯಾ ವಾಗ್ದಾಳಿ ನಡೆಸಿದ್ದಾರೆ.
ಸೋನಿಯಾ ಪಟಾಕಿ ಸದ್ದಿನಿಂದಾಗಿ ಕೆಲಕಾಲ ಭಾಷಣ ನಿಲ್ಲಿಸಿದರು.