ಪಿಎನ್ ಬಿ ವಂಚನೆ: ಸಿಟ್ ತನಿಖೆಗೆ ಕೇಂದ್ರ ಸರಕಾರದ ವಿರೋಧ
ಹೊಸದಿಲ್ಲಿ, ಫೆ. 21: ಪಂಜಾಬ್ ನ್ಯಾಶನಲ್ ಬ್ಯಾಂಕ್ನ ವಂಚನೆ ಪ್ರಕರಣದ ಸ್ವತಂತ್ರ ತನಿಖೆ ನಡೆಸಬೇಕು ಹಾಗೂ ವಜ್ರೋದ್ಯಮಿ ನೀರವ್ ಮೋದಿ ಅವರನ್ನು ಗಡಿಪಾರು ಮಾಡಬೇಕು ಎಂದು ಆಗ್ರಹಿಸಿ ಸುಪ್ರೀಂ ಕೋರ್ಟ್ನಲ್ಲಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ದಾವೆಗೆ ಕೇಂದ್ರ ಸರಕಾರ ಬುಧವಾರ ವಿರೋಧ ವ್ಯಕ್ತಪಡಿಸಿದೆ. ಈ ವಿಷಯದ ಬಗ್ಗೆ ಏನನ್ನೂ ಹೇಳಲು ಈಗ ಸುಪ್ರೀಂ ಕೋರ್ಟ್ಗೆ ಸಾಧ್ಯವಿಲ್ಲ ಎಂದು ಹೇಳಿರುವ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ, ನ್ಯಾಯಮೂರ್ತಿಗಳಾದ ಖಾನ್ವಿಲ್ಕರ್ ಹಾಗೂ ಡಿ.ವೈ. ಚಂದ್ರಚೂಡ ಅವರನ್ನು ಒಳಗೊಂಡ ಪೀಠ, ನ್ಯಾಯವಾದಿ ವಿನೀತ್ ಧಾಂಡಾ ಸಲ್ಲಿಸದ್ದ ಸಾರ್ವಜನಿಕ ಹಿತಾಸಕ್ತಿ ದಾವೆಯನ್ನು ಪರಿಗಣಿಸಿದೆ ಹಾಗೂ ವಿಚಾಣೆಯನ್ನು ಮಾರ್ಚ್ 16ಕ್ಕೆ ನಿಗದಿಪಡಿಸಿದೆ.
ಎಫ್ಐಆರ್ ನೋಂದಾಯಿಸಿ ಅನಂತರ ವಿಚಾರಣೆ ಆರಂಭಿಸಲಾಗಿದೆ ಎಂಬುದು ಸೇರಿದಂತೆ ವಿವಿಧ ನೆಲೆಯಲ್ಲಿ ಸಾರ್ವಜನಿಕ ಹಿತಾಸಕ್ತಿ ದಾವೆಯನ್ನು ತಾನು ವಿರೋಧಿಸುತ್ತೇನೆ ಎಂದು ಕೇಂದ್ರ ಸರಕಾರದ ಪರ ನ್ಯಾಯಾಲಯಕ್ಕೆ ಹಾಜರಾಗಿದ್ದ ಅಟಾರ್ನಿ ಜನರಲ್ ಕೆ.ಕೆ. ವೇಣುಗೋಪಾಲ್, ಹೇಳಿದರು.
ಈ ಸಾರ್ವಜನಿಕ ಹಿತಾಸಕ್ತಿ ದಾವೆ ಪಂಜಾಬ್ ನ್ಯಾಶನಲ್ ಬ್ಯಾಂಕ್ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ, ಹಣಕಾಸು ಹಾಗೂ ಕಾನೂನು ಹಾಗೂ ನ್ಯಾಯ ಸಚಿವಾಲಯವನ್ನು ಪ್ರತಿವಾದಿಯನ್ನಾಗಿ ಮಾಡಿದೆ.