ಸುಪ್ರೀಂಗೆ ನ್ಯಾ.ಜೋಸೆಫ್ ರನ್ನು ಪರಿಗಣಿಸುವಂತೆ ಕೊಲಿಜಿಯಂ ಮತ್ತೆ ಕೇಂದ್ರಕ್ಕೆ ಪತ್ರ ಬರೆಯುವ ಸಾಧ್ಯತೆ
ತ್ರಿಶೂರ್, ಎ.29: ಉತ್ತರಾಖಂಡ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಕೆ.ಎಂ. ಜೋಸೆಫ್ ಅವರನ್ನು ಸುಪ್ರೀಂ ಕೋರ್ಟ್ ಗೆ ನ್ಯಾಯ ಮೂರ್ತಿಯಾಗಿ ನೇಮಕ ಮಾಡುವ ವಿಚಾರದಲ್ಲಿ ತನ್ನ ನಿರ್ಧಾರವನ್ನು ಪುನರ್ ಪರಿಶೀಲಿಸುವಂತೆ ಕೊಲಿಜಿಯಂ ಮತ್ತೆ ಕೇಂದ್ರ ಸರಕಾರಕ್ಕೆ ಪತ್ರ ಬರೆಯುವ ಸಾಧ್ಯತೆಯಿದೆ ಎಂದು ತಿಳಿದು ಬಂದಿದೆ.
ಕಳೆದ ವಾರ ಸುಪ್ರೀಂ ಕೋರ್ಟ್ ನ ನ್ಯಾಯ ಮೂರ್ತಿಗಳ ಹುದ್ದೆಗೆ ಜೋಸೆಫ್ ಮತ್ತು ಸುಪ್ರೀಂ ಕೋರ್ಟ್ನ ಹಿರಿಯ ವಕೀಲೆ ಇಂದೂ ಮಲ್ಹೋತ್ರಾ ಅವರ ಹೆಸರನ್ನು ಕೊಲಿಜಿಯಂ ಶಿಫಾರಸು ಮಾಡಿತ್ತು. ಈ ಪೈಕಿ ಇಂದೂ ಮಲ್ಹೋತ್ರಾ ಅವರು ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದಾರೆ. ಆದರೆ ನ್ಯಾಯಮೂರ್ತಿ ಕೆ.ಎಂ. ಜೋಸೆಫ್ ಅವರನ್ನು ನೇಮಿಸುವಂತೆ ಕೊಲಿಜಿಯಂ ಮಾಡಿದ್ದ ಶಿಫಾರಸನ್ನು ಕೇಂದ್ರ ಸರಕಾರ ವಾಪಸ್ ಕಳುಹಿಸಿತ್ತು. ಅವರ ಬಡ್ತಿ ‘ಸಮರ್ಪಕ’ ಅಲ್ಲ ಎಂದು ಹೇಳಿತ್ತು.
ಸುಪ್ರೀಂ ಕೋರ್ಟ್ ಗೆ ನ್ಯಾಯಮೂರ್ತಿಯಾಗಿ ನೇಮಕವಾಗುವ ನಿರೀಕ್ಷೆಯಲ್ಲಿರುವ ನ್ಯಾಯಮೂರ್ತಿ ಕೆ.ಎಂ. ಜೋಸೆಫ್ ಅವರು ಸುಪ್ರೀಕೋರ್ಟ್ ಗೆ ನ್ಯಾಯಮೂರ್ತಿ ಗಳ ನೇಮಕಗೊಳ್ಳಲು ಕೇವಲ ಪ್ರಾದೇಶಿಕ ಪ್ರಾತಿನಿಧ್ಯ ಮತ್ತು ಹಿರಿತನ ಮುಖ್ಯ ಮಾನದಂಡವಲ್ಲವೆಂದು ಅಭಿಪ್ರಾಯಪಟ್ಟಿದ್ದಾರೆ. ತಾನು ಮಾಡಿರುವ ಶಿಫಾರಸನ್ನು ಕೇಂದ್ರ ಸರಕಾರ ತಿರಸ್ಕರಿಸಿರುವ ವಿಚಾರದಲ್ಲಿ ಕೊಲಿಜಿಯಂ ಸೂಕ್ತ ನಿರ್ಧಾರ ಕೈಗೊಳ್ಳಲಿದೆ ಎಂದು ಕೇಂದ್ರದ ಅವಕೃಪೆಗೆ ಒಳಗಾಗಿರುವ ನ್ಯಾಯಮೂರ್ತಿ ಜೋಸೆಫ್ ಹೇಳಿದ್ದಾರೆ.