13ರಂದು ಕೇಂದ್ರ ಸಚಿವ ಸಂಪುಟ ಸಭೆ
ಹೊಸದಿಲ್ಲಿ, ಜೂ.11: ಕೇಂದ್ರ ಸಚಿವ ಸಂಪುಟದ ಸಭೆ ಜೂನ್ 13ರಂದು ನಡೆಯಲಿದ್ದು ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸರಕಾರದ ಪ್ರಮುಖ ಯೋಜನೆಗಳ ಅಭಿವೃದ್ಧಿಯ ಅವಲೋಕನ ಹಾಗೂ ಮುಂದಿನ ವರ್ಷದ ಕಾರ್ಯಸೂಚಿಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಸಂಸತ್ ಭವನದಲ್ಲಿ ಸಭೆ ನಡೆಯಲಿದೆ. ಇತ್ತೀಚೆಗೆ ಕೆಲವು ರಾಜ್ಯಗಳಲ್ಲಿ ನಡೆದ ಉಪಚುನಾವಣೆಯಲ್ಲಿ ಎನ್ಡಿಎ ಮೈತ್ರಿಕೂಟಕ್ಕೆ ಆಗಿರುವ ಹಿನ್ನಡೆಯ ಹಿನ್ನೆಲೆಯಲ್ಲಿ ಈ ಮಹತ್ವದ ಸಭೆಯಲ್ಲಿ ಎಲ್ಲಾ ಸಚಿವರೂ ಹಾಜರಿರಬೇಕೆಂದು ಸೂಚಿಸಲಾಗಿದೆ.
ರೈತರು ಎದುರಿಸುತ್ತಿರುವ ಸಂಕಷ್ಟದ ಪರಿಸ್ಥಿತಿ ಹಾಗೂ ಬಜೆಟ್ನಲ್ಲಿ ಘೋಷಿಸಿದಂತೆ ಕೃಷಿ ಉತ್ಪನ್ನಗಳಿಗೆ ಉತ್ಪಾದನಾ ವೆಚ್ಚದ ಒಂದೂವರೆ ಪಟ್ಟು ಅಧಿಕ ಮಾರಾಟ ಬೆಲೆ ದೊರಕಿಸುವ ಕುರಿತು ನಡೆಸಲಾದ ಪ್ರಯತ್ನಗಳು, ಪ್ರಧಾನ ಮಂತ್ರಿ ಜನೌಷಧಿ ಯೋಜನೆ, ಆಯುಷ್ಮಾನ್ ಭಾರತ್, ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ, ಪ್ರಧಾನ ಮಂತ್ರಿ ಉಜ್ವಲಾ ಯೋಜನೆ, ಮುದ್ರಾ ಯೋಜನೆ ಮುಂತಾದ ಪ್ರಮುಖ ಯೋಜನೆಗಳ ಬಗ್ಗೆ ಸಭೆಯಲ್ಲಿ ಪುನರಾವಲೋಕನ ನಡೆಸಲಾಗುವುದು ಎಂದು ಮೂಲಗಳು ತಿಳಿಸಿವೆ.