ವಿರೋಧ ಪಕ್ಷಗಳ ಮೈತ್ರಿಕೂಟಕ್ಕೆ ಬೆಂಬಲ ಇಲ್ಲ: ಕೇಜ್ರಿವಾಲ್
ಲೋಕಸಭಾ ಚುನಾವಣಾ
ರೊಹ್ಟಕ್, ಆ.10: ಮುಂದಿನ ವರ್ಷ ನಡೆಯುವ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ವಿರುದ್ಧದ ವಿರೋಧ ಪಕ್ಷಗಳ ಮೈತ್ರಿಕೂಟಕ್ಕೆ ತಮ್ಮ ಪಕ್ಷ ಸೇರುವುದಿಲ್ಲ ಎಂದು ದಿಲ್ಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ ಮುಖಂಡ ಅರವಿಂದ್ ಕೇಜ್ರಿವಾಲ್ ಘೋಷಿಸಿದ್ದಾರೆ.
ಈ ಉದ್ದೇಶಿತ ಮೈತ್ರಿಕೂಟಕ್ಕೆ ಸೇರುವವರು ದೇಶದ ಅಭಿವೃದ್ಧಿಯಲ್ಲಿ ಯಾವ ಪಾತ್ರವನ್ನೂ ವಹಿಸುತ್ತಿಲ್ಲ ಎಂದು ಅವರು ವಾಗ್ದಾಳಿ ಮಾಡಿದ್ದಾರೆ. ಆಮ್ ಆದ್ಮಿ ಪಕ್ಷ ಪ್ರಸ್ತಾವಿತ ಮೈತ್ರಿಕೂಟದ ಭಾಗವಾಗುವುದಿಲ್ಲ ಎಂದು ರೋಹ್ಟಕ್ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸ್ಪಷ್ಟಪಡಿಸಿದ್ದಾರೆ.
ಹರ್ಯಾಣ ವಿಧಾನಸಭಾ ಚುನಾವಣೆ ಮತ್ತು ಸಾರ್ವತ್ರಿಕ ಚುನಾವಣೆಯಲ್ಲಿ ತಮ್ಮ ಪಕ್ಷ ಎಲ್ಲ ಸ್ಥಾನಗಳಿಗೆ ಸ್ಪರ್ಧಿಸಲಿದೆ ಎಂದು ಪ್ರಕಟಿಸಿದರು.
ದಿಲ್ಲಿಯಲ್ಲಿ ಬಾಕಿ ಇರುವ ಅಭಿವೃದ್ಧಿ ಕಾರ್ಯಗಳಿಗೆ ಮೋದಿ ಸರ್ಕಾರವೇ ಕಾರಣ ಎಂದು ತೀಕ್ಷ್ಣ ವಾಗ್ದಾಳಿ ನಡೆಸಿದ ಅವರು, ನಮ್ಮ ಪಕ್ಷ ಕೈಗೊಂಡ ಪ್ರತಿ ಅಭಿವೃದ್ಧಿ ಕಾರ್ಯ ಮತ್ತು ಜನ ಕಲ್ಯಾಣ ಕಾರ್ಯಕ್ರಮಗಳಿಗೆ ಹೆಜ್ಜೆ ಹೆಜ್ಜೆಗೂ ತಡೆ ಒಡ್ಡಲಾಗುತ್ತಿದೆ ಎಂದು ಆಪಾದಿಸಿದರು. ದಿಲ್ಲಿಯಲ್ಲಿ ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಕಾರಕ ಕಾರ್ಯವನ್ನು ನಮ್ಮ ಸರ್ಕಾರ ಮಾಡಿದೆ ಎಂದು ಸಮರ್ಥಿಸಿಕೊಂಡರು.
ಅಭಿವೃದ್ಧಿ ವಿಚಾರದಲ್ಲಿ ದಿಲ್ಲಿಗೆ ಹೋಲಿಸಿದರೆ ಹರ್ಯಾಣ ತೀರಾ ಹಿಂದುಳಿದಿದೆ ಎಂದ ಅವರು, ಅಭಿವೃದ್ಧಿ ಕಾರ್ಯಗಳನ್ನು ಹೇಗೆ ಮಾಡಬೇಕು ಎಂದು ಹರ್ಯಾಣ ಮುಖ್ಯಮಂತ್ರಿ ಮನೋಹರಲಾಲ್ ಖಟ್ಟರ್, ದಿಲ್ಲಿಯನ್ನು ನೋಡಿ ಕಲಿಯಲಿ ಎಂದು ಲೇವಡಿ ಮಾಡಿದರು.