ಎನ್ಸಿಪಿ ಬಳಿಕ ಪಿಡಿಪಿಯಿಂದ ಚುನಾವಣೆ ಬಹಿಷ್ಕಾರ ನಿರ್ಧಾರ
ಶ್ರೀನಗರ, ಸೆ. 10: ನ್ಯಾಶನಲ್ ಕಾನ್ಫರೆನ್ಸ್ನ ಹಾದಿಯಲ್ಲೇ ಹೆಜ್ಜೆ ಹಾಕಿರುವ ಜಮ್ಮು ಹಾಗೂ ಕಾಶ್ಮೀರದ ಮುಖ್ಯಮಂತ್ರಿ ಹಾಗೂ ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ ರಾಜ್ಯದಲ್ಲಿ ಮುಂದಿನ ತಿಂಗಳು ನಡೆಯಲಿರುವ ಸ್ಥಳೀಯ ಸಂಸ್ಥೆ ಹಾಗೂ ಪಂಚಾಯತ್ ಚುನಾವಣೆ ಬಹಿಷ್ಕರಿಸಲು ತನ್ನ ಪಕ್ಷ ನಿರ್ಧರಿಸಿದೆ ಎಂದು ಸೋಮವಾರ ಹೇಳಿದ್ದಾರೆ. ಪ್ರಸ್ತುತ ಜಮ್ಮು ಹಾಗೂ ಕಾಶ್ಮೀರದಲ್ಲಿ ಚುನಾವಣೆ ನಡೆಸುವ ನಿರ್ಧಾರವನ್ನು ಮರು ಪರಿಶೀಲಿಸಿ ಎಂದು ಕೂಡ ಮುಫ್ತಿ ಅವರು ಕೇಂದ್ರ ಸರಕಾರವನ್ನು ಕೋರಿದ್ದಾರೆ. ‘‘35 ಎ ಕಲಂನ ಪ್ರಕರಣ ಸುಪ್ರೀಂ ಕೋರ್ಟ್ನಲ್ಲಿ ಬಾಕಿ ಇರುವ ಸಂದರ್ಭ ಚುನಾವಣೆ ನಡೆಸುವುದರಿಂದ ಜನರಲ್ಲಿ ಗೊಂದಲ ಉಂಟಾಗುತ್ತದೆ. ಆದುದರಿಂದ ಈ ಸಂದಿಗ್ದ ಪರಿಸ್ಥಿತಿಯಲ್ಲಿ ಚುನಾವಣೆ ನಡೆಸುವುದನ್ನು ಮರು ಪರಿಶೀಲಿಸುವಂತೆ ಸರಕಾರವನ್ನು ಆಗ್ರಹಿಸಿದ್ದೇನೆ’’ ಎಂದು ಪಿಡಿಪಿ ವರಿಷ್ಠೆ ಹೇಳಿದ್ದಾರೆ.
ಈ ಪರಿಸ್ಥಿತಿ ನೋಡಿ, ಚುನಾವಣಾ ಪ್ರಕ್ರಿಯೆಯಿಂದ ದೂರವಿರಲು ನಾವು ನಿರ್ಧರಿಸಿದ್ದೇವೆ ಎಂದು ಕೂಡ ಅವರು ಹೇಳಿದ್ದಾರೆ.
35 ಎ ಕಲಂ ಅನ್ನು ರಕ್ಷಿಸಲು ಕೇಂದ್ರ ಸರಕಾರ ಕ್ರಮಗಳನ್ನು ತೆಗೆದುಕೊಳ್ಳದೇ ಇದ್ದರೇ, ಪಂಚಾಯತ್ ಚುನಾವಣೆ ಅಲ್ಲದೆ 2019ರ ಲೋಕಸಭಾ ಚುನಾವಣೆಯನ್ನು ಬರಿಷ್ಕರಿಸುವುದಾಗಿ ಈ ಹಿಂದೆ ನ್ಯಾಷನಲ್ ಕಾನ್ಫರೆನ್ಸ್ ಹೇಳಿತ್ತು.