ಆಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಸುಗ್ರೀವಾಜ್ಞೆ ಹೊರಡಿಸಲು ಕೇಂದ್ರಕ್ಕೆ ಒತ್ತಡ ?
ಹೊಸದಿಲ್ಲಿ. ಅ.29: ಅಯೋಧ್ಯೆಯ ರಾಮಜನ್ಮಭೂಮಿ ಮತ್ತು ಬಾಬರಿ ಮಸೀದಿ ಜಮೀನು ವಿವಾದದ ಅಂತಿಮ ವಿಳಂಬವಾಗಿರುವ ಹಿನ್ನೆಲೆಯಲ್ಲಿ ವಿವಾದಿತ ಸ್ಥಳದಲ್ಲೀ ರಾಮ ಮಂದಿರ ನಿರ್ಮಿಸಲು ಸುಗ್ರೀವಾಜ್ಞೆ ಹೊರಡಿಸುವಂತೆ ಕೇಂದ್ರ ಸರಕಾರಕ್ಕೆ ಸಂಘ ಪರಿವಾರದ ಸಂಘಟನೆಗಳು ಮತ್ತೆ ಒತ್ತಡ ಹೇರಲು ಮುಂದಾಗಿರುವ ವಿಚಾರ ಬೆಳಕಿಗೆ ಬಂದಿದೆ.
ಅಲಹಾಬಾದ್ ಹೈಕೋರ್ಟ್ 2010ರಲ್ಲಿ ನೀಡಿರುವ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಹಲವು ಮೇಲ್ಮನವಿಯ ವಿಚಾರಣೆ ಸುಪ್ರೀಂ ಕೋರ್ಟ್ ನಲ್ಲಿ ಅ.29 ರಂದು ನಿಗದಿಯಾಗಿತ್ತು. ಆದರೆ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ ವಿಚಾರಣೆಯನ್ನು 2019ರ ಜನವರಿಗೆ ಮುಂದೂಡಿದ್ದಾರೆ. ಜನವರಿಯಲ್ಲಿ ಸುಪ್ರೀಂ ಕೋರ್ಟ್ ನ ನೂತನ ನ್ಯಾಯ ಪೀಠ ಪ್ರಕರಣದ ವಿಚಾರಣೆ ನಡೆಸಲಿದೆ. ಇದರಿಂದಾಗಿ 2018ರಲ್ಲಿ ಪ್ರಕರಣದ ಅಂತಿಮ ಹಂತದ ವಿಚಾರಣೆ ಪೂರ್ಣಗೊಂಡು ತೀರ್ಪು ಬರುವ ಸಾಧ್ಯತೆ ಇನ್ನಿಲ್ಲವಾಗಿದೆ.
ಲೋಕಸಭಾ ಚುನಾವಣೆಯ ಮೊದಲು ಸುಪ್ರೀಂ ಕೋರ್ಟ್ ತೀರ್ಪು ಹೊರಬೀಳುವ ಸಾಧ್ಯತೆ ದೂರವಾಗಿದೆ. ಈ ಕಾರಣದಿಂದಾಗಿ ಲೋಕಸಭೆಯ ಚುನಾವಣೆಯ ವೇಳೆ ರಾಮಮಂದಿರ ನಿರ್ಮಿಸುವ ಕನಸು ಕಾಣುತ್ತಿದ್ದ ಸಂಘಟನೆಗಳು ಕೇಂದ್ರ ಸರಕಾರಕ್ಕೆ ಈ ಸಂಬಂಧ ಚಳಿಗಾಲದ ಅಧಿವೇಶನದಲ್ಲಿ ಸುಗ್ರೀವಾಜ್ಞೆ ಹೊರಡಿಸುವಂತೆ ಒತ್ತಡ ಹೇರಲು ಮುಂದಾಗಿದೆ ಎಂದು ತಿಳಿದು ಬಂದಿದೆ