ಕಥುವಾ ಪ್ರಕರಣದ ಸಾಕ್ಷಿಗಳಿಗೆ ಕಸ್ಟಡಿ ಚಿತ್ರಹಿಂಸೆ ಆರೋಪ: ಮನವಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್
ಹೊಸದಿಲ್ಲಿ, ನ. 19: ಪ್ರತ್ಯೇಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಕಥುವಾ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣದ ಪ್ರಧಾನ ಸಾಕ್ಷಿಗಳಿಗೆ ಜಮ್ಮು ಹಾಗೂ ಕಾಶ್ಮೀರ ಪೊಲೀಸರು ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ್ದಾರೆ ಎಂದು ಪ್ರತಿಪಾದಿಸಿ ಸಲ್ಲಿಸಿದ ಮನವಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ.
ನ್ಯಾಯಾಲಯದ ಆದೇಶದ ಹಿನ್ನೆಲೆಯಲ್ಲಿ ದೂರುದಾರರು ನ್ಯಾಯಾಲಯದ ಮುಂದೆ ಹಾಜರಾಗಲು ಸಾಧ್ಯವಿಲ್ಲ ಎಂಬ ಕಾರಣಕ್ಕೆ ಕಥುವಾ ಪ್ರಕರಣದ ಪ್ರಧಾನ ಸಾಕ್ಷಿಗಳ ಹತ್ತಿರದ ಸಂಬಂಧಿಕರು ಸಲ್ಲಿಸಿದ ಮನವಿಯನ್ನು ನ್ಯಾಯಮೂರ್ತಿಗಳಾದ ಎ.ಎಂ. ಖಾನ್ವಿಲ್ಕರ್ ಹಾಗೂ ದೀಪಕ್ ಗುಪ್ತಾ ಅವರನ್ನು ಒಳಗೊಂಡ ಪೀಠ ತಿರಸ್ಕರಿಸಿತ್ತು. ಜಮ್ಮು ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ ಕಳೆದ ಜನವರಿಯಲ್ಲಿ ಅಲ್ಪಸಂಖ್ಯಾತ ಅಲೆಮಾರಿ ಸಮುದಾಯದ 8 ವರ್ಷದ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರಗೈಯಲಾಗಿತ್ತು.
ಪ್ರತ್ಯೇಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾದ ಬಳಿಕ ತಮ್ಮ ಸಂಬಂಧಿಕರಿಗೆ ರಾಜ್ಯ ಪೊಲೀಸರು ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡುತ್ತಿದ್ದಾರೆ ಎಂದು ಆರೋಪಿಸಿ ದೂರುದಾರರು ಸುಪ್ರೀಂ ಕೋರ್ಟ್ನ ಮೆಟ್ಟಿಲೇರಿದ್ದರು.
ಜಮ್ಮು ಹಾಗೂ ಕಾಶ್ಮೀರ ಪೊಲೀಸರನ್ನು ಪ್ರತಿನಿಧಿಸುತ್ತಿರುವ ವಕೀಲರು ಸುಪ್ರೀಂ ಕೋರ್ಟ್ನಲ್ಲಿ ಕಳೆದ ತಿಂಗಳು ದೂರುದಾರರು ಮನವಿಯಲ್ಲಿ ಹೇಳಲಾದ ಆರೋಪವನ್ನು ನಿರಾಕರಿಸಿದ್ದಾರೆ ಹಾಗೂ ಸಾಕ್ಷಿಗಳಿಗೆ ಜಾಮೀನು ಮಂಜೂರು ಮಾಡಿರುವುದರಿಂದ ಮನವಿ ಅಪ್ರಸ್ತುತವಾಗಿದೆ ಎಂದಿದ್ದಾರೆ.