ಸುಳ್ಳು ಸಾಕ್ಷ್ಯ ನೀಡಿದ ಕೇಂದ್ರಕ್ಕೆ ನೋಟಿಸ್ ಜಾರಿಗೊಳಿಸಿ: ಸುಪ್ರೀಂ ಕೋರ್ಟ್ ಗೆ ಕಾಂಗ್ರೆಸ್ ಒತ್ತಾಯ
ರಫೇಲ್ ತೀರ್ಪು
ಹೊಸದಿಲ್ಲಿ, ಡಿ.16: ರಫೇಲ್ ತೀರ್ಪನ್ನು ವಾಪಸ್ ಪಡೆಯಬೇಕು ಮತ್ತು ನ್ಯಾಯಾಂಗ ನಿಂದನೆ ಹಾಗೂ ಸುಳ್ಳು ಸಾಕ್ಷ್ಯಕ್ಕಾಗಿ ಕೇಂದ್ರ ಸರಕಾರಕ್ಕೆ ನೋಟಿಸ್ ಜಾರಿಗೊಳಿಸಬೇಕು ಎಂದು ಹಿರಿಯ ಕಾಂಗ್ರೆಸ್ ಮುಖಂಡ ಆನಂದ್ ಶರ್ಮ ಸುಪ್ರೀಂಕೋರ್ಟ್ ಅನ್ನು ಒತ್ತಾಯಿಸಿದ್ದಾರೆ.
ಪಕ್ಷದ ಕೇಂದ್ರ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ರಫೇಲ್ ವಿಮಾನ ಖರೀದಿಯ ಮೊತ್ತ ಕುರಿತ ಸಿಎಜಿ ವರದಿಯನ್ನು ಸಾರ್ವಜನಿಕ ಲೆಕ್ಕಪತ್ರ ಸಮಿತಿಗೆ ಸಲ್ಲಿಸಲಾಗಿದೆ ಎಂದು ಸುಪ್ರೀಂಕೋರ್ಟ್ಗೆ ತಿಳಿಸುವ ಮೂಲಕ ಸರಕಾರ ಸಂಸತ್ತಿನ ಉಭಯ ಸದನಗಳ ವಿಶೇಷಾಧಿಕಾರವನ್ನು ಉಲ್ಲಂಘಿಸಿದೆ ಎಂದು ಆರೋಪಿಸಿದರು.
ಆದ್ದರಿಂದ ರಫೇಲ್ ಕುರಿತ ತೀರ್ಪನ್ನು ವಾಪಸ್ ಪಡೆದು ಸರಕಾರಕ್ಕೆ ನ್ಯಾಯಾಂಗ ನಿಂದನೆ ನೋಟಿಸ್ ಜಾರಿಗೊಳಿಸಬೇಕು ಎಂದವರು ಆಗ್ರಹಿಸಿದರು. ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಪಕ್ಷ ತಾನು ಮಾಡಿದ ಪಾಪಕ್ಕೆ ಪ್ರಾಯಶ್ಚಿತ್ತವಾಗಿ ಗಂಗಾ ನದಿಯಲ್ಲಿ ಪವಿತ್ರ ಸ್ನಾನ ಮಾಡಬೇಕು ಎಂದು ಶರ್ಮ ಟೀಕಿಸಿದರು.
Next Story