ಹಿರಿಯ ಬಿಜೆಪಿ ಮುಖಂಡ ದೇವಿಸಿಂಗ್ ಭಾಟಿ ರಾಜೀನಾಮೆ
ಬಿಕಾನೇರ್, ಮಾ.16: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕೇಂದ್ರ ಸಚಿವ ಅರ್ಜುನ್ರಾಮ್ ಮೇಘವಾಲ್ಗೆ ಟಿಕೆಟ್ ನೀಡಿರುವುದನ್ನು ವಿರೋಧಿಸಿ ಹಿರಿಯ ಬಿಜೆಪಿ ಮುಖಂಡ ದೇವಿಸಿಂಗ್ ಭಾಟಿ ಪಕ್ಷಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ.
ಬಿಕಾನೇರ್ ಕ್ಷೇತ್ರದ ಹಾಲಿ ಸಂಸದ ಮೇಘಾವಲ್ ಅವರ ಪಕ್ಷ ವಿರೋಧಿ ಚಟುವಟಿಕೆಯನ್ನು ಖಂಡಿಸಿ ತಾನು ರಾಜೀನಾಮೆ ನೀಡುತ್ತಿದ್ದೇನೆ. ಮೇಘಾವಲ್ ಚಟುವಟಿಕೆ ಕುರಿತು ಪಕ್ಷದ ಹಿರಿಯ ನಾಯಕರ ಗಮನಕ್ಕೆ ತಂದರೂ ಅವರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ. ಬಹುಷಃ ಮೇಘಾವಲ್ಗೆ ಮತ್ತೊಮ್ಮೆ ಟಿಕೆಟ್ ನೀಡುವ ನಿರ್ಧಾರಕ್ಕೆ ಅವರು ಈ ಹಿಂದೆಯೇ ಬಂದಿರಬಹುದು ಎಂದು ಭಾಟಿ ಹೇಳಿದ್ದಾರೆ.
ಆದರೆ ನರೇಂದ್ರ ಮೋದಿಯವರೇ ಮತ್ತೊಮ್ಮೆ ಪ್ರಧಾನಿಯಾಗಬೇಕು ಎಂಬುದು ತನ್ನ ಅಭಿಪ್ರಾಯವಾಗಿದೆ. ಅವರು ಉತ್ತಮವಾಗಿ ಕಾರ್ಯ ನಿರ್ವಹಿಸಿದ್ದಾರೆ. ಆದರೆ ಪಕ್ಷದೊಳಗಿನ ಕೆಲವರು ಪಕ್ಷದ ವಿರುದ್ಧವೇ ಪಿತೂರಿ ನಡೆಸುತ್ತಿದ್ದಾರೆ. ಇದರಿಂದ ಬೇಸತ್ತು ರಾಜೀನಾಮೆ ನೀಡುತ್ತಿದ್ದೇನೆ. ಆದರೆ ರಾಜಕೀಯ ತ್ಯಜಿಸುವ ಪ್ರಶ್ನೆಯೇ ಇಲ್ಲ ಎಂದವರು ಸ್ಪಷ್ಟಪಡಿಸಿದ್ದಾರೆ.