ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಇಲ್ಲ: ಮಾಯಾವತಿ
ಲಕ್ನೋ, ಮಾ. 20: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ತಾನು ಸ್ಪರ್ಧಿಸುವುದಿಲ್ಲ ಎಂದು ಬಿಎಸ್ಪಿ ನಾಯಕಿ ಮಾಯಾವತಿ ಬುಧವಾರ ಹೇಳಿದ್ದಾರೆ. ಆದರೆ, ತಾನು ಬಿಎಸ್ಪಿ ಹಾಗೂ ಮಿತ್ರ ಪಕ್ಷವಾದ ಎಸ್ಪಿ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸಲಿದ್ದೇನೆ ಎಂದು ಅವರು ತಿಳಿಸಿದ್ದಾರೆ.
“ನಾನು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ನನ್ನ ಈ ನಿರ್ಧಾರವನ್ನು ಪಕ್ಷ ಸಂಪೂರ್ಣವಾಗಿ ಅರ್ಥ ಮಾಡಿಕೊಳ್ಳುತ್ತದೆ ಎಂಬ ಭರವಸೆ ನನಗಿದೆ. ನಮ್ಮ ಮೈತ್ರಿ ಉತ್ತಮ ಸಾಧನೆ ತೋರಿಸುತ್ತಿದೆ” ಎಂದು ಅವರು ಲಕ್ನೋದಲ್ಲಿ ಸುದ್ದಿಗಾರರಿಗೆ ತಿಳಿಸಿದರು.
ಎಪ್ರಿಲ್ 11ರಿಂದ ಮೇ 19ರ ವರೆಗೆ ನಡೆಯಲಿರುವ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸುವ ಉದ್ದೇಶದಿಂದ ಅಲ್ಪ ಶತ್ರುತ್ವ ಇದ್ದರೂ ಬಿಎಸ್ಪಿ ಅಖಲೇಶ್ ಯಾದವ್ ಅವರ ಸಮಾಜವಾದಿ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡಿದೆ.
ನಾಲ್ಕು ಬಾರಿ ಉತ್ತರಪ್ರದೇಶದ ಮುಖ್ಯಮಂತ್ರಿಯಾಗಿದ್ದ ಮಾಯಾವತಿ ಅವರು ಹಲವು ಬಾರಿ ಸಂಸತ್ ಪ್ರವೇಶಿಸಿದ್ದರು. ಅವರು ಮೊದಲ ಬಾರಿಗೆ 1994ರಲ್ಲಿ ರಾಜ್ಯಸಭೆಗೆ ಆಯ್ಕೆಯಾಗಿದ್ದರು.
63 ಹರೆಯದ ಮಾಯಾವತಿ ಅವರು ಚುನಾವಣೆ ಸ್ಪರ್ಧೆಯಿಂದ ಹೊರಗುಳಿಯುವ ಸಾಧ್ಯತೆ ಹೆಚ್ಚಿದೆ. ಚುನಾವಣಾ ಪ್ರಚಾರದ ಮೇಲೆ ಹಾಗೂ ತಮ್ಮ ಘಟಬಂಧನದ ಮೂಲಕ ಗರಿಷ್ಠ ಕ್ಷೇತ್ರಗಳಲ್ಲಿ ಜಯ ಗಳಿಸುವಲ್ಲಿ ಮಾಯಾವತಿ ಹಾಗೂ ಅಖಿಲೇಶ್ ಗಮನ ಕೇಂದ್ರೀಕರಿಸಲು ನಿರ್ಧರಿಸಿದ್ದಾರೆ.