ಸುಪ್ರೀಂ ಕೋರ್ಟ್ ನಲ್ಲಿ ಬೇಷರತ್ ಕ್ಷಮೆ ಯಾಚಿಸಿದ ರಾಹುಲ್ ಗಾಂಧಿ
ಹೊಸದಿಲ್ಲಿ,ಮೇ 8: ರಫೇಲ್ ಪ್ರಕರಣಕ್ಕೆ ಸಂಬಂಧಿಸಿ ಸುಪ್ರೀಂ ಕೋರ್ಟ್ ತೀರ್ಪಿಗೆ ‘ಚೌಕೀದಾರ್ ಚೋರ್ ಹೈ’ ಘೋಷಣೆಯೊಂದಿಗೆ ಸಂಬಂಧ ಕಲ್ಪಿಸಿದ್ದಕ್ಕಾಗಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಸುಪ್ರೀಂ ಕೋರ್ಟ್ ನಲ್ಲಿ ಬೇಷರತ್ ಕ್ಷಮೆ ಯಾಚಿಸಿದ್ದಾರೆ.
ಹಿಂದೆ ರಾಹುಲ್ ಗಾಂಧಿ ಸಲ್ಲಿಸಿದ್ದ ಅಫಿಡವಿಟ್ ಗೆ ಸಂಬಂಧಿಸಿ ಸುಪ್ರೀಂ ಕೋರ್ಟ್ ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಇಂದು ಬೇಷರತ್ ಕ್ಷಮೆ ಯಾಚಿಸಿದ್ದಾರೆ.
'ಚೌಕಿದಾರ್ ಚೋರ್ ಹೈ ಎಂದು ಸುಪ್ರೀಂ ಕೋರ್ಟ್ ಹೇಳಿದೆ' ಎಂಬ ತನ್ನ ಹೇಳಿಕೆ ಉದ್ದೇಶ ಪೂರ್ವಕವಲ್ಲದ ಹೇಳಿಕೆಯಾಗಿದೆ. ಈ ಕಾರಣದಿಂದಾಗಿ ತಾನು ನ್ಯಾಯಾಲಯದ ಬೇಷರತ್ ಕ್ಷಮೆ ಯಾಚಿಸುತ್ತಿದ್ದೇನೆ ಎಂದು ರಾಹುಲ್ ಗಾಂಧಿ ಮೂರು ಪುಟಗಳ ಕ್ಷಮೆಯಾಚನಾ ಪತ್ರದಲ್ಲಿ ಹೇಳಿದ್ದಾರೆ.
ಕಳೆದ ಎಪ್ರಿಲ್ 30ರಂದು ನಡೆದಿದ್ದ ವಿಚಾರಣೆಯಲ್ಲಿ 'ಚೌಕಿದಾರ್ ಚೋರ್' ಹೇಳಿಕೆ ಸಂಬಂಧ ಸುಪ್ರೀಂಕೋರ್ಟ್ ನಲ್ಲಿ ನಡೆದ ವಿಚಾರಣೆಯ ವೇಳೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಸುಪ್ರೀಂ ಕೋರ್ಟ್ ನ್ಯಾಯಪೀಠದ ಮುಂದೆ ಕ್ಷಮೆ ಕೋರಿದ್ದರು. ಆದರೆ ತಮ್ಮ ಹೇಳಿಕೆ ಕುರಿತು ನೇರವಾಗಿ ತಪ್ಪೊಪ್ಪಿಕೊಳ್ಳದ ರಾಹುಲ್ ಗಾಂಧಿ ಅವರ ನಡೆ ಬಗ್ಗೆ ಸುಪ್ರೀಂ ಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿತ್ತು.
ಪ್ರಕರಣದ ವಿಚಾರಣೆಯನ್ನು ನ್ಯಾಯಾಲಯ ಶುಕ್ರವಾರ ನಡೆಸಲಿದೆ.