ಮಾಲೆಗಾಂವ್ ಸ್ಫೋಟ ಪ್ರಕರಣ: ವಿಚಾರಣೆಗೆ ಪ್ರಜ್ಞಾ ಸಿಂಗ್ ಗೈರು
ಮುಂಬೈ, ಜೂ.4: ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ಆರೋಪಿಯಾಗಿರುವ ನೂತನ ಸಂಸದೆ ಪ್ರಜ್ಞಾಸಿಂಗ್ ಠಾಕೂರ್ ನ್ಯಾಯಾಲಯದ ವಿಚಾರಣೆಗೆ ಗೈರು ಹಾಜರಾಗಿದ್ದು, ಜೂನ್ 7ರಂದು ನಡೆಯುವ ವಿಚಾರಣೆಗೆ ಹಾಜರಾಗಲಿದ್ದಾರೆ ಎಂದು ಅವರ ವಕೀಲರು ಹೇಳಿದ್ದಾರೆ.
ಪ್ರಕರಣದ ವಿಚಾರಣೆ ಸಂದರ್ಭ ಕನಿಷ್ಟ ವಾರಕ್ಕೊಮ್ಮೆಯಾದರೂ ನ್ಯಾಯಾಲಯದಲ್ಲಿ ಹಾಜರಿರಬೇಕು ಎಂದು ಪ್ರಜ್ಞಾಸಿಂಗ್ ಹಾಗೂ ಇತರ ಆರು ಆರೋಪಿಗಳಿಗೆ ಕಳೆದ ತಿಂಗಳು ನ್ಯಾಯಾಲಯ ಸೂಚಿಸಿತ್ತು. ಆದರೆ ಸಂಸತ್ತಿನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಬೇಕಿರುವುದರಿಂದ ತನಗೆ ಖುದ್ದು ಹಾಜರಾತಿಯಿಂದ ವಿನಾಯಿತಿ ನೀಡಬೇಕೆಂದು ಪ್ರಜ್ಞಾ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿತ್ತು. ಮಂಗಳವಾರ ನ್ಯಾಯಾಲಯದ ಕಲಾಪಕ್ಕೆ ಗೈರು ಹಾಜರಾಗಿರುವ ಹಿನ್ನೆಲೆಯಲ್ಲಿ ಪ್ರಜ್ಞಾ ಸಿಂಗ್ ವಕೀಲರು ಮತ್ತೊಮ್ಮೆ ವಿನಾಯಿತಿ ಕೋರಿ ಅರ್ಜಿ ಸಲ್ಲಿಸಿದರು. ಅವರಿಗೆ ಇಂದಿನ ಮಟ್ಟಿಗೆ ವಿನಾಯಿತಿ ನೀಡಲಾಗುವುದು. ಆದರೆ ಜೂನ್ 7ರಂದು ನ್ಯಾಯಾಲಯದಲ್ಲಿ ಹಾಜರಿರಬೇಕು ಎಂದು ನ್ಯಾಯಪೀಠ ಸೂಚಿಸಿತು.
Next Story