ಬಿಜೆಪಿ ಕಾರ್ಯಕರ್ತೆ ಬಿಡುಗಡೆ ವಿಳಂಬ: ಪಶ್ಚಿಮಬಂಗಾಳ ಸರಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್
ಹೊಸದಿಲ್ಲಿ, ಜು. 1: ಸಾಮಾಜಿಕ ಮಾಧ್ಯಮದಲ್ಲಿ ಮಮತಾ ಬ್ಯಾನರ್ಜಿ ವಿರುದ್ಧ ಮೀಮ್ ಪೋಸ್ಟ್ ಮಾಡಿದ ಆರೋಪದಲ್ಲಿ ಬಂಧನಕ್ಕೊಳಗಾಗಿದ್ದ ಬಿಜೆಪಿ ಕಾರ್ಯಕರ್ತೆ ಪ್ರಿಯಾಂಕ ಶರ್ಮಾ ಅವರನ್ನು ಬಿಡುಗಡೆ ಮಾಡಲು ವಿಳಂಬ ಮಾಡಿರುವ ಕುರಿತು ಸಲ್ಲಿಸಲಾದ ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್ ಸೋಮವಾರ ಪಶ್ಚಿಮಬಂಗಾಳ ಸರಕಾರಕ್ಕೆ ಶೋಕಾಸ್ ನೋಟಿಸು ಜಾರಿ ಮಾಡಿದೆ.
ಸುಪ್ರೀಂ ಕೋರ್ಟ್ ಜಾಮೀನು ನೀಡಿದ್ದರೂ ಪ್ರಿಯಾಂಕ ಶರ್ಮಾ ಅವರನ್ನು ಬಿಡುಗಡೆ ಮಾಡಲು ಪಶ್ಚಿಮಬಂಗಾಳ ಸರಕಾರ ಒಂದು ದಿನಕ್ಕೂ ಹೆಚ್ಚು ಕಾಲ ವಿಳಂಬ ಮಾಡಿದೆ ಎಂದು ಆರೋಪಿಸಿ ಪ್ರಿಯಾಂಕಾ ಶರ್ಮಾ ಸಹೋದರ ರಾಜೀವ್ ಶರ್ಮಾ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ರಂಜನ್ ಗೊಗೋಯಿ ನೇತೃತ್ವದ ನ್ಯಾಯಪೀಠ ಪಶ್ಚಿಮಬಂಗಾಳ ಸರಕಾರ ಹಾಗೂ ಸಂಬಂಧಿಸಿದ ಇತರರಿಗೆ ಶೋಕಾಸ್ ನೋಟಿಸ್ ಜಾರಿ ಮಾಡಿದೆ.
ಮಮತಾ ಬ್ಯಾನರ್ಜಿ ಅವರಿಗೆ ಮೀಮ್ ಪೋಸ್ಟ್ ಮಾಡಿದ ಆರೋಪದಲ್ಲಿ ಬಿಜೆಪಿ ಯುವ ಮೋರ್ಚಾದ ನಾಯಕಿ ಅವರನ್ನು ಮೇ 10ರಂದು ಬಂಧಿಸಲಾಗಿತ್ತು. ತೃಣಮೂಲ ಕಾಂಗ್ರೆಸ್ನ ಸ್ಥಳೀಯ ನಾಯಕರೊಬ್ಬರು ಸಲ್ಲಿಸಿದ ದೂರಿನ ಹಿನ್ನಲೆಯಲ್ಲಿ ಈ ಕ್ರಮ ತೆಗೆದುಕೊಳ್ಳಲಾಗಿತ್ತು.