ರಾಜ್ಯ ಸಚಿವ ಸಂಪುಟ ವಿಸ್ತರಣೆ ಸದ್ಯಕ್ಕಿಲ್ಲ
ಹೊಸದಿಲ್ಲಿ, ಆ.7: ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರದ ಸಂಪುಟ ರಚನೆ ಬಿಕ್ಕಟ್ಟು ಮುಂದುವರಿದಿದೆ. ಸದ್ಯಕ್ಕೆ ಸಂಪುಟ ವಿಸ್ತರಣೆಯಾಗುವ ಸಾಧ್ಯತೆಯಿಲ್ಲ.
ಸಂಭಾವ್ಯ ಸಚಿವರ ಪಟ್ಟಿ ಹಿಡಿದುಕೊಂಡು ದಿಲ್ಲಿಗೆ ಪ್ರಯಾಣಿಸಿದ್ದ ಸಿಎಂ ಯಡಿಯೂರಪ್ಪ ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿದ್ದರು. ಬುಧವಾರ ಬೆಳಗ್ಗೆ 11 ಗಂಟೆಗೆ ಗೃಹ ಸಚಿವ ಅಮಿತ್ ಶಾ ಭೇಟಿ ನಿಗದಿಯಾಗಿತ್ತು. ಆದರೆ, ಮಂಗಳವಾರ ರಾತ್ರಿ ಮಾಜಿ ವಿದೇಶಾಂಗ ಸಚಿವೆ ಸುಶ್ಮಾ ಸ್ವರಾಜ್ ನಿಧನರಾದ ಕಾರಣ ಶಾ ಅವರ ಭೇಟಿ ಸಾಧ್ಯವಾಗಿಲ್ಲ.
ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ತೀವ್ರ ನೆರೆ ಪ್ರವಾಹ ಉಂಟಾಗಿರುವ ಕಾರಣ ಆ ಬಗ್ಗೆ ತುರ್ತಾಗಿ ಗಮನ ಹರಿಸಿ. ಇನ್ನೆರಡು ದಿನ ಬಿಟ್ಟು ಮತ್ತೆ ದಿಲ್ಲಿಗೆ ಬನ್ನಿ ಎಂದು ಬಿಜೆಪಿ ಹೈಕಮಾಂಡ್ ಯಡಿಯೂರಪ್ಪಗೆ ಸೂಚನೆ ನೀಡಿದೆ. ಹೀಗಾಗಿ ಅವರು ಬೆಂಗಳೂರಿನತ್ತ ಪ್ರಯಾಣ ಬೆಳೆಸಿದ್ದಾರೆ ಎನ್ನಲಾಗಿದೆ.
Next Story