370ನೇ ವಿಧಿ ರದ್ಧತಿಯ ವಿಧಾನ ಅಸಂವಿಧಾನಿಕ: ಪ್ರಿಯಾಂಕಾ ಗಾಂಧಿ
ಹೊಸದಿಲ್ಲಿ, ಆ.13: ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿದ್ದ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿರುವ ವಿಧಾನ ಸಂಪೂರ್ಣ ಅಸಂವಿಧಾನಿಕವಾದುದು ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ.
ಈ ರೀತಿಯ ಕ್ರಮಗಳನ್ನು ಕೈಗೊಳ್ಳುವಾಗ ಕೆಲವೊಂದು ನಿಯಮಗಳನ್ನು ಪಾಲಿಸಬೇಕಿದೆ. ಆದರೆ ಕೇಂದ್ರ ಸರಕಾರ ಹೀಗೆ ನಡೆದುಕೊಂಡಿಲ್ಲ. ಕೇಂದ್ರ ಸರಕಾರದ ನಡೆ ಪ್ರಜಾಪ್ರಭುತ್ವ ತತ್ವಕ್ಕೆ ವಿರುದ್ಧವಾಗಿದೆ. ಸಂವಿಧಾನ ಹಾಗೂ ಪ್ರಜಾಪ್ರಭುತ್ವದ ಉಳಿವಿಗಾಗಿ ಕಾಂಗ್ರೆಸ್ ಯಾವತ್ತೂ ಹೋರಾಟ ನಡೆಸುತ್ತದೆ ಎಂದು ಪ್ರಿಯಾಂಕಾ ಗಾಂಧಿ ಹೇಳಿದರು. 370ನೇ ವಿಧಿ ರದ್ದುಗೊಳಿಸಿರುವ ಬಗ್ಗೆ ಪ್ರಿಯಾಂಕಾ ಗಾಂಧಿ ನೀಡಿರುವ ಪ್ರಪ್ರಥಮ ಹೇಳಿಕೆ ಇದಾಗಿದೆ.
370ನೇ ವಿಧಿಯನ್ನು ರದ್ದುಗೊಳಿಸಿರುವ ಪ್ರಕರಣ ಕಾಂಗ್ರೆಸ್ ಪಕ್ಷದೊಳಗೆ ಎರಡು ರೀತಿಯ ಪ್ರತಿಕ್ರಿಯೆಗೆ ಕಾರಣವಾಗಿದೆ. ಜ್ಯೋತಿರಾದಿತ್ಯ ಸಿಂದಿಯ ಸಹಿತ ಹಲವು ಪ್ರಮುಖರು ಹಲವು ಕಾಂಗ್ರೆಸ್ ಮುಖಂಡರು ಬಹಿರಂಗವಾಗಿ ಬೆಂಬಲ ಸೂಚಿಸಿದ್ದಾರೆ. ಈ ವಿಷಯದಲ್ಲಿ ಪಕ್ಷದ ನಿಲುವನ್ನು ಖಂಡಿಸಿ ರಾಜ್ಯಸಭೆಯಲ್ಲಿ ಕಾಂಗ್ರೆಸ್ ಮುಖ್ಯ ಸಚೇತಕರಾಗಿದ್ದ ಭುವನೇಶ್ವರ ಕಲಿತ ಪಕ್ಷಕ್ಕೆ ಹಾಗೂ ರಾಜ್ಯಸಭೆ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.